
ಕೊರಟಗೆರೆ: ‘ತಾಲ್ಲೂಕಿನ ಕೆರೆಗಳಿಗೆ ಪರಮೇಶ್ವರ ಚೊಂಬಲ್ಲಿ ನೀರು ತಂದು ಹಾಕುತ್ತಾರಾ?’ ಎಂದು ಟೀಕೆ ಮಾಡುವವರಿಗೆ ಎತ್ತಿನಹೊಳೆ ಯೋಜನೆಯಡಿ ನೀರು ಹರಿಸಿ ಉತ್ತರ ಕೊಡುವೆ ಎಂದು ಎಂದು ಗೃಹ ಸಚಿವ ಜಿ.ಪರಮೇಶ್ವರ ಹೇಳಿದರು.
ತಾಲ್ಲೂಕಿನ ಜಟ್ಟಿಅಗ್ರಹಾರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಎತ್ತಿನಹೊಳೆ ಯೋಜನೆಯಿಂದ ಜಮೀನು ಕಳೆದುಕೊಂಡ ರೈತರಿಗೆ ₹5.53 ಕೋಟಿ ಪರಿಹಾರ ಚೆಕ್ ನೀಡಿ ಮಾತನಾಡಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ನುಡಿದಂತೆ ನಡೆದಿದೆ. ಅದರಂತೆ ತಾಲ್ಲೂಕಿನಲ್ಲಿ ಎತ್ತಿನಹೊಳೆ ಯೋಜನೆಯಿಂದ ಜಮೀನು ಕಳೆದುಕೊಂಡ ರೈತರಿಗೆ ಪರಿಹಾರ ನೀಡುವುದರ ಜೊತೆಗೆ ಯೋಜನೆ ಕಾಮಗಾರಿ ಭಾಗಶಃ ಪೂರ್ಣಗೊಳಿಸಿದ್ದೇವೆ. ತಾಲ್ಲೂಕಿನ 70 ಕೆರೆಗಳಿಗೆ ಎತ್ತಿನಹೊಳೆ ನೀರು ಹರಿಸುವ ಯೋಜನೆ ಕಾಮಗಾರಿ ಬಾಗಶಃ ಪೂರ್ಣಗೊಂಡಿದೆ. ₹800 ಕೋಟಿ ಪರಿಹಾರವನ್ನು ಈಗಾಗಲೇ ನೀಡಲಾಗಿದೆ. ₹180 ಕೋಟಿ ಪರಿಹಾರ ನೀಡುವುದು ಮಾತ್ರ ಬಾಕಿ ಇದ್ದು, ಕೆಲವೇ ತಿಂಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದರು.
‘ಎತ್ತಿನಹೊಳೆ ಯೋಜನೆ ಬಫರ್ ಡ್ಯಾಂ ನಮ್ಮ ತಾಲ್ಲೂಕು ವ್ಯಾಪ್ತಿಯಲ್ಲಿ ಆಗಬೇಕಿತ್ತು. ಆದರೆ ಇಲ್ಲಿನ ರೈತರಿಗೆ ತಪ್ಪು ಮಾಹಿತಿ ನೀಡಿ ಅದು ನಮ್ಮ ಕೈತಪ್ಪುವಂತೆ ಮಾಡಲಾಯಿತು’ ಎಂದರು.
ಜಿಲ್ಲಾಧಿಕಾರಿ ಶುಭಕಲ್ಯಾಣ್, ಜಿಲ್ಲಾ ಪಂಚಾಯತಿ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಮಧುಗಿರಿ ಉಪವಿಭಾಗಾಧಿಕಾರಿ ಗೋಟೂರು ಶಿವಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅರಕೆರೆ ಶಂಕರ್, ಅಶ್ವತ್ಥ್, ತಹಶೀಲ್ದಾರ್ ಕೆ.ಮಂಜುನಾಥ, ತಾ.ಪಂ. ಇಒ ಅಪೂರ್ವ, ಅಗ್ರಹಾರ ಗ್ರಾ.ಪಂ. ಅಧ್ಯಕ್ಷ ಸಿ.ಡಿ.ಪ್ರಭಾಕರ, ಸಿದ್ದಗಂಗಯ್ಯ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.