ಮಧುಗಿರಿ: ಮೂರು ಕೊಳವೆ ಬಾವಿ ಕೊರೆಸಿದರೂ ನೀರು ಸಿಗದ ಕಾರಣ ಬೇಸರಗೊಂಡ ರೈತ ಕ್ರಿಮಿನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಕಸಬಾ ವ್ಯಾಪ್ತಿಯ ಹೊಸಹಳ್ಳಿ ಗ್ರಾಮದಲ್ಲಿ ನಡೆದಿದೆ.
ರೈತ ರಂಗನಾಥಪ್ಪ (52) ಮೃತರು. ಕೈ ಸಾಲ ಮಾಡಿಕೊಂಡು ತಮ್ಮ ಜಮೀನಿನಲ್ಲಿ ಮೂರು ಕೊಳವೆ ಬಾವಿ ಕೊರೆಸಿದ್ದ ರಂಗನಾಥಪ್ಪ ಕೊಳವೆ ಬಾವಿಗಳಲ್ಲಿ ನೀರು ಸಿಗದ ಕಾರಣ ಬೇಸರಗೊಂಡಿದ್ದರು. ಶುಕ್ರವಾರ ಮಧ್ಯಾಹ್ನ ಮನೆಯಲ್ಲಿ ಯಾರು ಇಲ್ಲದ ಸಮಯ ನೋಡಿ ಕ್ರಿಮಿನಾಶಕ ಔಷಧಿ ಕುಡಿದಿದ್ದಾರೆ. ತಂದೆ ಒದ್ದಾಡುತ್ತಿದ್ದದನ್ನು ಗಮನಿಸಿದ ಮಗ ರಾಜಕುಮಾರ್ ತಂದೆಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೇ ರಂಗನಾಥಪ್ಪ ಮೃತಪಟ್ಟಿದ್ದಾರೆ.
ಜಮೀನಿನಲ್ಲಿ ಕೊಳವೆ ಬಾವಿ ಕೊರೆಸಲು ಮಾಡಿದ ಕೈ ಸಾಲ ತೀರಿಸಲಾಗದೆ ಬೇಸರಗೊಂಡು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಮಗ ರಾಜಕುಮಾರ್ ಮಧುಗಿರಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.