ತುಮಕೂರು: ಕೊರೊನಾ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಜನರು ಸರ್ಕಾರದ ಆದೇಶಗಳನ್ನು ಪಾಲಿಸಬೇಕು ಎಂದು ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್ ಮನವಿ ಮಾಡಿದರು.
ತಾಲ್ಲೂಕಿನ ಹೆಗ್ಗರೆಯಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ‘ಸೋಂಕು ಹರಡುವ ಮುನ್ನವೇ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸುವುದು ಉತ್ತಮ. ಪ್ರಧಾನಿ ಕರೆ ನೀಡಿರುವ ಜನತಾ ಕರ್ಫ್ಯೂ ಕೊರೊನಾ ನಿಯಂತ್ರಣಕ್ಕೆ ಸಹಕಾರಿ. ಸಾರ್ವಜನಿಕರು ಸರ್ಕಾರದ ನಿರ್ಧಾರಗಳಿಗೆ ಸಹಕಾರ ನೀಡಬೇಕು’ ಎಂದು ಸಲಹೆ ನೀಡಿದರು.
ಹೆಗ್ಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವೈದ್ಯಕೀಯ ಕಾಲೇಜು ಹಾಗೂ ಬಿ.ಎಚ್.ರಸ್ತೆ ಇದೆ. ಆದರೆ ಮುಖ್ಯರಸ್ತೆ ಸಂಪರ್ಕಿಸುವ ಎಲ್ಲ ರಸ್ತೆಗಳು ಮಣ್ಣಿನ ರಸ್ತೆಗಳಾಗಿವೆ. ಇದನ್ನು ಮನಗಂಡು ಇಲ್ಲಿಗೆ ₹ 3 ಕೋಟಿ ಅನುದಾನ ನೀಡಲಾಗಿದೆ ಎಂದರು.
ಗ್ರಾಮಾಂತರ ಜೆಡಿಎಸ್ ಅಧ್ಯಕ್ಷ ಹಾಲನೂರು ಅನಂತ್ಕುಮಾರ್, ಹೆಗ್ಗರೆ ಆಜಂ, ಬೈರೇಗೌಡ, ನರುಗನಹಳ್ಳಿ ವಿಜಯಕುಮಾರ್, ಎಂ.ಆರ್.ಮಂಜುನಾಥ್, ಹೆಗ್ಗರೆ ಗ್ರಾಮ ಪಂಚಾಯಿತಿ ಸದಸ್ಯರು, ಗುತ್ತಿಗೆದಾರ ಜಯಂತ್ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.