ಶಿರಾ: ನಗರ ಹಾಗೂ ಗ್ರಾಮಾಂತರ ಪ್ರದೇಶದಲ್ಲಿ ಶನಿವಾರ ಗಣೇಶ ಚತುರ್ಥಿಯನ್ನು ಸರಳ ರೀತಿಯಲ್ಲಿ ಶ್ರದ್ಧಾ ಭಕ್ತಿಯಿಂದ ಆಚರಿಸಲಾಯಿತು.
ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿಯಂತೆ ಗಣೇಶ ವಿಗ್ರಹವನ್ನು ಪ್ರತಿಷ್ಠಾಪಿಸಿ ಪೂಜೆ ಸಲ್ಲಿಸಲಾಯಿತು. ಈ ಬಾರಿ ರಸ್ತೆ ಬದಿಯಲ್ಲಿ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡದ ಕಾರಣ ಮನೆ ಮತ್ತು ಕೆಲವು ದೇವಾಲಯಗಳಲ್ಲಿ ಮಾತ್ರ ಪ್ರತಿಷ್ಠಾಪಿಸಲಾಗಿತ್ತು. ಸಂಜೆ ವೇಳೆಗೆ ಗಣೇಶ ವಿಸರ್ಜನೆ ಮಾಡಲಾಯಿತು.
ವಿಸರ್ಜನೆಗೆ ನಗರಸಭೆಯಿಂದ ವಾಹನ ವ್ಯವಸ್ಥೆ ಮಾಡಿದ್ದು, ಮನೆಯ ಬಳಿ ವಾಹನ ಬಂದಾಗ ಕೆಲವರು ವಿಸರ್ಜನೆ ಮಾಡಿದರೆ, ಮತ್ತೇ ಕೆಲವರು ಜಾಜಮ್ಮನ ಕಟ್ಟೆಯಲ್ಲಿ ಗಣೇಶ ವಿಸರ್ಜನೆ ಮಾಡಿದರು.
ನಗರದ ವಿದ್ಯಾಗಣಪತಿ ದೇವಸ್ಥಾನದಲ್ಲಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿದ್ದು, 5 ದಿನಗಳ ನಂತರ ವಿಸರ್ಜನೆ ಮಾಡಲಿದ್ದಾರೆ. ಈ ಬಾರಿ ಯಾವುದೇ ಸಾಂಸ್ಕೃತಿಕ ಕಾರ್ಯಕ್ರಮಗಳಿಲ್ಲದೇ ಕೇವಲ ಪೂಜೆ ಮಾತ್ರ ಮಾಡಲಾಗುತ್ತಿದೆ.
ಅದ್ಧೂರಿಯಾಗಿ ಗಣೇಶ ವಿಸರ್ಜನೆಯನ್ನು ಮಾಡುತ್ತಿದ್ದ ಹಿಂದೂ ಪರ ಸಂಘಟನೆಗಳು ಈ ಬಾರಿ ನಗರದ ಗವಿ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಹಿಂದೂ ಮಹಾಗಣಪತಿಯನ್ನು ಪ್ರತಿಷ್ಠಾಪಿಸಿ ಸಂಜೆ ವಿಸರ್ಜನೆ ಮಾಡಿದವು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.