ADVERTISEMENT

ತುಮಕೂರು: ‘ಕಾರ್ಮಿಕರಿಗೆ ಮಾಲೀಕರೆ ಲಸಿಕೆ ಕೊಡಿಸಿ’

​ಪ್ರಜಾವಾಣಿ ವಾರ್ತೆ
Published 8 ಜೂನ್ 2021, 4:46 IST
Last Updated 8 ಜೂನ್ 2021, 4:46 IST

ತುಮಕೂರು: ಗಾರ್ಮೆಂಟ್ಸ್‌, ಕೈಗಾರಿಕೆಗಳಲ್ಲಿ ಕೆಲಸ ಮಾಡುವ ನೌಕರರಿಗೆ ಮಾಲೀಕರೆ ಲಸಿಕೆ ನೀಡುವ ವ್ಯವಸ್ಥೆ ಮಾಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ.ಮಾಧುಸ್ವಾಮಿ ಸೂಚಿಸಿದರು.

ಜಿಲ್ಲಾ ಕೈಗಾರಿಕಾ ಕೇಂದ್ರ, ಜಿಲ್ಲಾಗಾರ್ಮೆಂಟ್ಸ್‌ ಮಾಲೀಕರೊಂದಿಗೆ ಸೋಮವಾರ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ 50 ಸಾವಿರ ಮಂದಿ ಕೈಗಾರಿಕೆಗಳಲ್ಲಿ ಕೆಲಸ ಮಾಡುತ್ತಿದ್ದು, ಅವರಿಗೆ ಸೋಂಕು ತಗುಲದಂತೆ ಕ್ರಮ ಕೈಗೊಳ್ಳಬೇಕಾಗಿದೆ. ಕೈಗಾರಿಕೆಗಳ ಮಾಲೀಕರು ಲಸಿಕೆ ಖರೀದಿಸಿ ನೌಕರರಿಗೆ ನೀಡುವ ವ್ಯವಸ್ಥೆ ಮಾಡುವುದು ಉತ್ತಮವಾದ ಕೆಲಸ. ಇಲ್ಲವಾದಲ್ಲಿ ಸೋಂಕು ನಿಯಂತ್ರಣ ಕಷ್ಟ ಎಂದರು.

ADVERTISEMENT

ತಿಪಟೂರು, ಚಿಕ್ಕನಾಯಕನಹಳ್ಳಿ, ತುರುವೇಕೆರೆ ಭಾಗದ ಗಾರ್ಮೆಂಟ್ಸ್ ನೌಕರರು ಗ್ರಾಮೀಣ ಪ್ರದೇಶದವರಾಗಿದ್ದಾರೆ. ಈ ನೌಕರರನ್ನು ಕೋವಿಡ್ ಮಾರ್ಗಸೂಚಿ ನಿಯಮಗಳನ್ನು ಪಾಲಿಸದೆ ಆಟೊ, ಟೆಂಪೊಗಳಲ್ಲಿ ಕೆಲಸಕ್ಕೆ ಕರೆದೊಯ್ಯಲಾಗುತ್ತಿದೆ. ಇಂತಹವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ನಿರ್ದೇಶಿಸಿದರು.

ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ‘ಮುಂಚೂಣಿ ಕಾರ್ಯಕರ್ತರಿಗೆ ಜಿಲ್ಲೆಗೆ 12 ಲಕ್ಷ ಲಸಿಕೆ ಅವಶ್ಯಕತೆ ಇದೆ. ಈಗ ದಿನಕ್ಕೆ ಮೂರು ಸಾವಿರ ಲಸಿಕೆ ಬರುತ್ತಿದೆ. ಹಾಗಾಗಿ ಕೈಗಾರಿಕೆಗಳ ಮಾಲೀಕರೇ ಲಸಿಕೆ ಖರೀದಿಸಿ ನೌಕರರಿಗೆ ನೀಡುವ ವ್ಯವಸ್ಥೆ ಮಾಡಬೇಕು’ ಎಂದು ಹೇಳಿದರು.

ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸುರೇಶ್ ಬಾಬು, ‘ವರದಿಯಾದ 12 ಕಪ್ಪು ಶಿಲೀಂಧ್ರ ಪ್ರಕರಣಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ. ಸರ್ಕಾರಿ, ಖಾಸಗಿ, ಇಎನ್‌ಟಿ ವೈದ್ಯರು ಅವಶ್ಯಕತೆ ಇರುವ ರೋಗಿಗಳಿಗೆ ಶಸ್ತ್ರ ಚಿಕಿತ್ಸೆಗೆ ಒಳಪಡಿಸುತ್ತಿದ್ದಾರೆ’ ಎಂದು ಮಾಹಿತಿ ನೀಡಿದರು.

ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ಮಕ್ಕಳ ಚಿಕಿತ್ಸಾ ವಾರ್ಡ್ ಸ್ಥಾಪಿಸಬೇಕು. ಇದರಿಂದ ಮಕ್ಕಳ ಪೌಷ್ಟಿಕ ಗುಣಮಟ್ಟ ಕಾಪಾಡಲು ಅನುಕೂಲವಾಗುತ್ತದೆ. ಜತೆಗೆ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು ಬಿತ್ತನೆ ಬೀಜ, ರಸಗೊಬ್ಬರ ಸೇರಿದಂತೆ ಕೃಷಿ ಪರಿಕರಗಳ ಅಂಗಡಿಗಳನ್ನು ಲಾಕ್‌ಡೌನ್‍ನಿಂದ ವಿನಾಯಿತಿ ನೀಡಿ ಮಳಿಗೆ ತರೆಯಲು ಸೂಕ್ತ ಕ್ರಮ ಜರುಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಸಚಿವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.