ತುಮಕೂರು: ಮಾದಿಗ ಜನಾಂಗಕ್ಕೆ ತುಮಕೂರು ನಗರಾಭಿವೃದ್ಧಿ ಪ್ರಾಧಿಕಾರದ (ಟೂಡಾ) ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಜಿಲ್ಲಾ ಮಾದಿಗ ದಲಿತ ಸಂಘಟನೆಗಳ ಒಕ್ಕೂಟವು ರಾಜ್ಯ ಸರ್ಕಾರವನ್ನು ಆಗ್ರಹಿಸಿದೆ.
ನಗರದ ದಲಿತ ಸಂಘರ್ಷ ಸಮಿತಿ ಕಚೇರಿಯಲ್ಲಿ ಸಮುದಾಯದ ಮುಖಂಡರು ಸಭೆ ನಡೆಸಿ, ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲೂ ಮಾದಿಗ ಜನಾಂಗ ಅಧಿಕ ಸಂಖ್ಯೆಯಲ್ಲಿದೆ. ಆದ ಕಾರಣ ಸಮುದಾಯದ ಜಿಲ್ಲಾ ಮುಖಂಡ ರಾಮಚಂದ್ರಪ್ಪ ಅವರಿಗೆ ಟೂಡಾ ಅಧ್ಯಕ್ಷ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದರು.
ರಾಮಚಂದ್ರಪ್ಪ ಬಿಜೆಪಿ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ. ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಉಪಾಧ್ಯಕ್ಷರಾಗಿ, ಸ್ಲಂ ಮೋರ್ಚಾ ಅಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಲೋಕಸಭೆ, ವಿಧಾನಸಭೆ ಚುನಾವಣೆಗಳಲ್ಲಿ ತಮ್ಮ ಸಮುದಾಯದ ಮತಗಳನ್ನು ಬಿಜೆಪಿಗೆ ಸೆಳೆಯುವಲ್ಲಿ ಶ್ರಮಿಸಿದ್ದಾರೆ.
ಮಾದಿಗ ಸಮುದಾಯಕ್ಕೆ ರಾಜ್ಯದ ಯಾವುದೇ ನಿಗಮ ಮಂಡಳಿಯ ಅಧ್ಯಕ್ಷ ಸ್ಥಾನಗಳನ್ನು ನೀಡಿಲ್ಲ. ಆದ್ದರಿಂದ ರಾಮಚಂದ್ರಪ್ಪ ಅವರನ್ನು ಟೂಡಾಕ್ಕೆ ನೇಮಕ ಮಾಡಬೇಕು ಎಂದು ಆಗ್ರಹಿಸಿದರು.
ಜಿಲ್ಲಾ ಮಾದಿಗ ಸಂಘಟನೆ ಒಕ್ಕೂಟದ ಅಧ್ಯಕ್ಷ ಹನುಮಂತರಾಜು, ಜಿಲ್ಲಾ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷ ಕೃಷ್ಣಪ್ಪ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಎಚ್.ಬಿ.ರಾಜೇಶ್, ದಲಿತ ಸಂಘರ್ಷ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಎನ್.ರಾಮಯ್ಯ, ಜಿಲ್ಲಾ ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಟಿ.ಎನ್.ಮಧು, ತುಮಕೂರು ತಾಲ್ಲೂಕು ಅಧ್ಯಕ್ಷ ಸುನೀಲ್, ದಲಿತ ಸಂರಕ್ಷಣಾ ವೇದಿಕೆ ಅಧ್ಯಕ್ಷ ಮಹೇಂದ್ರಕುಮಾರ್, ಗುಬ್ಬಿ ತಾಲ್ಲೂಕು ಸಂಚಾಲಕ ಸುರೇಶ್ ಸಭೆಯಲ್ಲಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.