ADVERTISEMENT

ವೈಭವದ ಗೊರವನಹಳ್ಳಿ ರಥೋತ್ಸವ

​ಪ್ರಜಾವಾಣಿ ವಾರ್ತೆ
Published 15 ನವೆಂಬರ್ 2025, 7:05 IST
Last Updated 15 ನವೆಂಬರ್ 2025, 7:05 IST
ಗೊರವನಹಳ್ಳಿಯಲ್ಲಿ ರಥೋತ್ಸವದಲ್ಲಿ ಪಾಲ್ಗೊಂಡ ಜನ
ಗೊರವನಹಳ್ಳಿಯಲ್ಲಿ ರಥೋತ್ಸವದಲ್ಲಿ ಪಾಲ್ಗೊಂಡ ಜನ   

ಕೊರಟಗೆರೆ: ತಾಲ್ಲೂಕಿನ ಗೊರವನಹಳ್ಳಿ ಮಹಾಲಕ್ಷ್ಮಿ ದೇವಾಲಯದಲ್ಲಿ ಕಾರ್ತಿಕ ಮಾಸದ ಅಂಗವಾಗಿ ಬ್ರಹ್ಮ ರಥೋತ್ಸವ, ಮುತ್ತಿನ ಪಲ್ಲಕ್ಕಿ ಉತ್ಸವ ಹಾಗೂ ಲಕ್ಷದೀಪೋತ್ಸವ ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

ತಾಲ್ಲೂಕು, ಜಿಲ್ಲೆ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆ ಹಾಗೂ ನೆರೆ ರಾಜ್ಯಗಳಾದ ಆಂಧ್ರ ಪ್ರದೇಶ, ತೆಲಂಗಾಣ, ತಮಿಳುನಾಡಿನಿಂದ ಬಂದ ಭಕ್ತರು ಕಾರ್ಯಕ್ರಮಕ್ಕೆ ಸಾಕ್ಷಿಯಾದರು.

ದೇವಾಲಯದಲ್ಲಿ ಆಡಳಿತ ಮಂಡಳಿಯಿಂದ ಮುಂಜಾನೆಯಿಂದ ವಿವಿಧ ಹೋಮ, ಅಭಿಷೇಕ ಹಾಗೂ ವಿಶೇಷ ಪೂಜಾ ಕೈಂಕರ್ಯ ಏರ್ಪಡಿಸಲಾಗಿತ್ತು. ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 12.35 ಗಂಟೆಗೆ ಬೆಳ್ಳಿರಥೋತ್ಸವ, ಪ್ರಾಕಾರೋತ್ಸವ ನಡೆಯಿತು. ದೇಗುಲ ಆವರಣದಲ್ಲಿ ದೀಪಾಲಂಕಾರ, ಹೂವಿನ ಅಲಂಕಾರ ಮಾಡಲಾಗಿತ್ತು. ರಥೋತ್ಸವದಲ್ಲಿ ಚಿಟ್ಟಿ ಮೇಳ, ಮಂಗಳವಾದ್ಯ, ಚಂಡೆ ವಾದ್ಯ ಸೇರಿದಂತೆ ವಿವಿಧ ಜನಪದ ಕಲಾತಂಡಗಳು ಭಾಗವಹಿಸಿದ್ದರು.

ADVERTISEMENT

ದೀಪೋತ್ಸವಕ್ಕೆ ಸಿದ್ಧರಬೆಟ್ಟದ ವೀರಭದ್ರಶಿವಾಚಾರ್ಯ ಸ್ವಾಮೀಜಿ, ಎಲೆರಾಂಪುರದ ಹನುಮಂತನಾಥ ಸ್ವಾಮೀಜಿ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ನೂರಾರು ಭಕ್ತರು ದೀಪ ಹಚ್ಚುವ ಮೂಲಕ ಭಕ್ತಿ ಸಮರ್ಪಿಸಿದರು. ಗೊರವನಹಳ್ಳಿ, ನರಸಯ್ಯನಪಾಳ್ಯ, ಗೊಲ್ಲರಟ್ಟಿ ಗ್ರಾಮಸ್ಥರಿಂದ ಆರತಿ ಉತ್ಸವ ಏರ್ಪಡಿಸಲಾಗಿತ್ತು.

ಟ್ರಸ್ಟ್ ಅಧ್ಯಕ್ಷ ಬಿ.ಜಿ.ವಾಸುದೇವ್, ಕಾರ್ಯದರ್ಶಿ ಆರ್.ಮುರಳಿಕೃಷ್ಣ, ಖಜಾಂಚಿ ಆರ್.ಜಗದೀಶ್, ಧರ್ಮದರ್ಶಿಗಳಾದ ಟಿ.ಎಸ್.ಲಕ್ಷ್ಮಿಕಾಂತ್, ಟಿ.ಆರ್.ನಟರಾಜು, ಎಸ್.ಶ್ರೀಪ್ರಸಾದ್, ರವಿರಾಜ ಅರಸ್, ಜಿ.ಎಲ್.ಮಂಜುನಾಥ್, ಓಂಕಾರೇಶ್, ಚಿಕ್ಕನರಸಯ್ಯ, ವಿ.ಬಾಲಕೃಷ್ಣ, ನರಸರಾಜು, ಲಕ್ಷ್ಮೀನರಸಯ್ಯ, ಎನ್.ಜಿ.ನಾಗರಾಜು ಹಾಜರಿದ್ದರು.

ಸಂಜೆ ನಡೆದ ಲಕ್ಷ ದೀಪೋತ್ಸವದಲ್ಲಿ ಮಹಿಳೆಯರು ದೀಪ ಹಚ್ಚುವಲ್ಲಿ ನಿರತರಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.