
ಶಿರಾ: ತಾಲ್ಲೂಕಿನಲ್ಲಿ ಅಂತರ್ಜಲ ಹೆಚ್ಚಳಕ್ಕೆ ಒತ್ತು ನೀಡಿದ್ದು ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ನಿರ್ಮಿಸುವ ಮೂಲಕ ನೀರು ತಡೆ ಹಿಡಿಯಲಾಗುತ್ತಿದೆ ಎಂದು ಶಾಸಕ ಟಿ.ಬಿ.ಜಯಚಂದ್ರ ಹೇಳಿದರು.
ತಾಲ್ಲೂಕಿನ ಇನಕನಹಳ್ಳಿ ಸಮೀಪ ಈಚೆಗೆ ₹2 ಕೋಟಿ ವೆಚ್ಚದ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
ಇನಕನಹಳ್ಳಿ ಮತ್ತು ಕುರುಡನಹಳ್ಳಿ ಭಾಗದ ಹಳ್ಳದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ ನಿರ್ಮಾಣ ಮಾಡುವುದರಿಂದ 0.71 ಎಂಸಿಎಫ್ಟಿ ನೀರು ಸಂಗ್ರಹವಾಗಲಿದ್ದು ಇದರಿಂದ ರೈತರಿಗೆ ಅನುಕೂಲವಾಗುವುದು ಎಂದರು.
ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ತಾಲ್ಲೂಕಿಗೆ ಹೆಚ್ಚು ನೀರು ಲಭ್ಯವಾಗಲಿದೆ. ₹50 ಕೋಟಿ ವೆಚ್ಚದಲ್ಲಿ ಬ್ರಿಡ್ಜ್ ಕಂ ಬ್ಯಾರೇಜ್ಗಳನ್ನು ನಿರ್ಮಿಸಲಾಗುತ್ತಿದ್ದು ಈಗ ಐದು ಬ್ಯಾರೇಜ್ಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನಡೆಸಲಾಗಿದೆ. ಗುಣಮಟ್ಟದ ಕಾಮಗಾರಿ ನಡೆಸಲು ಗುತ್ತಿಗೆದಾರರು ಮತ್ತು ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ತುಮಕೂರು ವಿವಿ ಸಿಂಡಿಕೇಟ್ ಮಾಜಿ ಸದಸ್ಯ ಡಿ.ಸಿ.ಅಶೋಕ್ ಮಾತನಾಡಿ, ಶಾಸಕ ಟಿ.ಬಿ.ಜಯಚಂದ್ರ ಅವರ ಇಚ್ಛಾಶಕ್ತಿಯಿಂದಾಗಿ ಮದಲೂರು ಕೆರೆಗೆ ಹೇಮಾವತಿ ನೀರು ಬರುವಂತಾಗಿದ್ದು, ತಾಲ್ಲೂಕಿನಲ್ಲಿ ಈ ಬಾರಿ ಮಳೆ ಇಲ್ಲದಿದ್ದರೂ ಮದಲೂರು ಕೆರೆ ತುಂಬಲು ಶಾಸಕರ ಪರಿಶ್ರಮವೇ ಕಾರಣ ಎಂದರು.
ಮದಲೂರು ಗ್ರಾ.ಪಂ ಅಧ್ಯಕ್ಷೆ ಕೆ.ಎಲ್. ರೂಪ ರಂಗನಾಥಪ್ಪ, ಸದಸ್ಯರಾದ ಲೀಲಾವತಿ, ಶಾಂತಮ್ಮ, ಉಮೇಶ್, ಚಂದ್ರಪ್ಪ ಎಪಿಎಂಸಿ ಮಾಜಿ ಅಧ್ಯಕ್ಷ ಸತ್ಯನಾರಾಯಣ, ಗುಡ್ಡಣ್ಣ, ಪಿ.ಬಿ.ನರಸಿಂಹಯ್ಯ, ನಗರಸಭೆ ಸದಸ್ಯ ರಾಧಾಕೃಷ್ಣ, ಯುವ ಕಾಂಗ್ರೆಸ್ ಅಧ್ಯಕ್ಷ ಮಣಿಕಂಠ, ಸಣ್ಣ ನೀರಾವರಿ ಇಲಾಖೆ ಎಇಇ ಸುಂದರ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.