ಗುಬ್ಬಿ: ತಾಲ್ಲೂಕಿನ ನಿಟ್ಟೂರು ಹೋಬಳಿ ಬೆಣಚಿಗೆರೆ ಸಮೀಪ ನಿರ್ಮಾಣ ಮಾಡಲು ಉದ್ದೇಶಿಸಿರುವ ರೈಲ್ವೆ ಮೇಲ್ಸೇತುವೆ ಸ್ಥಳಕ್ಕೆ ಮಂಗಳವಾರ ಜಿಲ್ಲಾಧಿಕಾರಿ ಶುಭಕಲ್ಯಾಣ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ರೈತರ ಜಮೀನುಗಳನ್ನು ಸ್ವಾಧೀನ ಮಾಡಬೇಕಾಗಿರುವುದರಿಂದ ರೈತರ ಜೊತೆ ಚರ್ಚೆ ನಡೆಸಿದರು.
ಸರ್ಕಾರದ ನಿಯಮಾನುಸಾರ ರೈತರಿಗೆ ಪರಿಹಾರದ ಹಣ ನೀಡಲಾಗುವುದು. ರೈತರು ಸಹಕರಿಸಿದಲ್ಲಿ ಕಾಮಗಾರಿಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ತಿಳಿಸಿದರು.
ಶೀಘ್ರವೇ ಜಂಟಿ ಸರ್ವೆ ನಡೆಸಿ ಭೂಸ್ವಾಧೀನ ಪ್ರಕ್ರಿಯೆಗೆ ಮುಂದಾಗಬೇಕು. ತಾಲ್ಲೂಕಿನಲ್ಲಿ ಮೂರು ರೈಲ್ವೆ ಮೇಲ್ಸೇತುವೆ ಕಾಮಗಾರಿಗೆ ಅನುಮೋದನೆ ದೊರಕಿದೆ. ಶೀಘ್ರವೇ ಕಾರ್ಯ ಆರಂಭ ಮಾಡಲಾಗುವುದು. ರೈಲ್ವೆ ಮೇಲ್ಸೇತುವೆ ನಿರ್ಮಾಣದಿಂದ ಸಾರ್ವಜನಿಕರಿಗೆ ಹಾಗೂ ಸ್ಥಳೀಯರಿಗೆ ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಜಂಟಿ ಸರ್ವೆ ನಡೆಸಿದ ತಕ್ಷಣವೇ ಸಂಬಂಧಿಸಿದ ರೈತರಿಗೆ ನೋಟಿಸ್ ನೀಡಿ ಪರಿಹಾರದ ಹಣ ನೀಡಲಾಗುವುದು. ರೈತರು ತಕರಾರು ಮಾಡಿದಲ್ಲಿ ಹಣವನ್ನು ನ್ಯಾಯಾಲಯದಲ್ಲಿ ಠೇವಣಿ ಇಟ್ಟು ಕಾಮಗಾರಿಗೆ ನಿಯಮಾನುಸಾರ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಭೂಸ್ವಾಧೀನ ಪಡಿಸಿಕೊಳ್ಳುತ್ತಿರುವ ರೈತರ ಜಮೀನುಗಳಿಗೆ ವೈಜ್ಞಾನಿಕ ಮತ್ತು ಸ್ಥಳೀಯ ಮಾರುಕಟ್ಟೆ ದರದಂತೆ ಪರಿಹಾರ ನೀಡಬೇಕು. ಇಲ್ಲವಾದಲ್ಲಿ ರೈತರು ಸಂಕಷ್ಟಕ್ಕೆ ಸಿಲುಕುವರು. ರೈತರ ಕಷ್ಟಗಳನ್ನು ಅರ್ಥೈಸಿಕೊಂಡು ಜಿಲ್ಲಾಡಳಿತ ಮತ್ತು ತಾಲ್ಲೂಕು ಆಡಳಿತ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದರು.
ತಹಶೀಲ್ದಾರ್ ಆರತಿ ಬಿ, ಎಡಿಎಲ್ಆರ್ ತಿಮ್ಮಯ್ಯ, ಕಂದಾಯ ಅಧಿಕಾರಿಗಳು, ರೈಲ್ವೆ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.