ತುಮಕೂರು: ತುಮಕೂರು ವಿಶ್ವವಿದ್ಯಾಲಯದ ಅತಿಥಿ ಉಪನ್ಯಾಸಕರಿಗೆ ಸೆಪ್ಟೆಂಬರ್ ತಿಂಗಳ ವೇತನ ನೀಡುವಂತೆ ಆಗ್ರಹಿಸಿ ಎಬಿವಿಪಿ ಸದಸ್ಯರು ಕುಲಸಚಿವ ನರಸಿಂಹಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.
2020-21ನೇ ಸಾಲಿನಲ್ಲಿ ಅತಿಥಿ ಉಪನ್ಯಾಸಕರು ಸೆಪ್ಟೆಂಬರ್ ತಿಂಗಳಲ್ಲಿ ಪರೀಕ್ಷೆ ಕೆಲಸ ಹಾಗೂ ಆನ್ಲೈನ್ ತರಗತಿಗಳನ್ನು ತೆಗೆದುಕೊಂಡಿದ್ದಾರೆ. ಆದರೆ ಅಕ್ಟೋಬರ್ 8ರಿಂದ ವೇತನ ನೀಡುವುದು ಪ್ರಾರಂಭವಾಗಿದೆ. ಸೆಪ್ಟೆಂಬರ್ನಲ್ಲಿ 80ಕ್ಕೂ ಹೆಚ್ಚು ಉಪನ್ಯಾಸಕರು ಕೆಲಸ ಮಾಡಿದ್ದಾರೆ.
ಕೊರೊನಾ ಕಾರಣ ಅತಿಥಿ ಉಪನ್ಯಾಸಕರು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ತುರ್ತಾಗಿ ವೇತನ ನೀಡಬೇಕು. ಮುಖ್ಯಮಂತ್ರಿ, ಉನ್ನತ ಶಿಕ್ಷಣ ಸಚಿವರು ಸೆಪ್ಟೆಂಬರ್ ವೇತನ ನೀಡಲು ಹೇಳಿದ್ದಾರೆ. ಆದರೇ ವಿ.ವಿ ವೇತನ ನೀಡಿಲ್ಲ. ಇದರಿಂದ ಅತಿಥಿ ಉಪನ್ಯಾಸಕರ ಉತ್ಸಾಹ ಕುಂದುತ್ತದೆ. ಜತೆಗೆ ಶೈಕ್ಷಣಿಕ ಹಿನ್ನಡೆ ಆಗುತ್ತದೆ. ಸೆಪ್ಟೆಂಬರ್ ತಿಂಗಳ ವೇತನವನ್ನು ನೀಡುವ ಮೂಲಕ ಅತಿಥಿ ಉಪನ್ಯಾಸಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಕೋರಿದರು.
ಎಬಿವಿಪಿ ವಿಭಾಗ ಸಂಘಟನಾ ಕಾರ್ಯದರ್ಶಿ ಅಪ್ಪು ಪಾಟೀಲ್, ರಾಧಕೃಷ್ಣ, ಪ್ರತಾಪ್ ಸಿಂಹ, ಹರೀಶ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.