ADVERTISEMENT

ಗುಳೂರು ಗಣೇಶ ವಿಸರ್ಜನೆ: ಮೆರವಣಿಗೆಗೆ ಮೆರುಗು ನೀಡಿದ ಜನಪದ ನೃತ್ಯಗಳು

​ಪ್ರಜಾವಾಣಿ ವಾರ್ತೆ
Published 15 ಡಿಸೆಂಬರ್ 2019, 11:46 IST
Last Updated 15 ಡಿಸೆಂಬರ್ 2019, 11:46 IST
ಗೂಳೂರು ಗಣಪತಿಯ ವಿಸರ್ಜನಾ ಮಹೋತ್ಸವ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು
ಗೂಳೂರು ಗಣಪತಿಯ ವಿಸರ್ಜನಾ ಮಹೋತ್ಸವ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು   

ತುಮಕೂರು: ಮಳೆಯಿಂದಾಗಿ15 ದಿನಗಳ ಹಿಂದೆ ರದ್ದಾಗಿದ್ದ ಪ್ರಸಿದ್ಧ ಗೂಳೂರು ಗಣಪತಿಯ ವಿಸರ್ಜನಾ ಮಹೋತ್ಸವ ಭಾನುವಾರ ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.

ಬಲಿಪಾಢ್ಯಮಿಯಂದು ಆರಂಭವಾದ ಗೂಳೂರು ಗಣಪನ ಪೂಜಾ ಕೈಂಕರ್ಯಗಳು ಕಾರ್ತಿಕ ಮಾಸದಲ್ಲಿ ಸಂಪೂರ್ಣಗೊಂಡು, ಸಕಲ ಧಾರ್ಮಿಕ ವಿಧಿ– ವಿಧಾನಗಳ ಮೂಲಕ ಗೂಳೂರು ಕೆರೆಯಲ್ಲಿ ವರ್ಣರಂಜಿತ ಸಿಡಿಮದ್ದಿನ ಅಬ್ಬರದ ನಡುವೆ ಗಣೇಶ ಮೂರ್ತಿಯನ್ನು ವಿಸರ್ಜಿಸಲಾಯಿತು.

ಎರಡು ದಿನ ಕಾಲ ನಡೆದ ಗೂಳೂರು ಗಣೇಶ ಜಾತ್ರೆಯಲ್ಲಿ ನಾಡಿನ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಪಾಲ್ಗೊಂಡು ಸ್ವಾಮಿಯ ದರ್ಶನ ಪಡೆದರು.

ADVERTISEMENT

ಶನಿವಾರ ಸಂಜೆ 7ಕ್ಕೆ ಊರಿನ ಯಜಮಾನರ ಮನೆಯಿಂದ ನಂದಿಧ್ವಜ ಮತ್ತು ಕರಡಿ ವಾದ್ಯದೊಂದಿಗೆ ಗಣಪತಿ ದೇವಾಲಯಕ್ಕೆ ಕಳಸ ತಂದು ಮಹಾಗಣಪತಿಗೆ ಮಹಾ ಮಂಗಳಾರತಿ ನೆರವೇರಿಸಲಾಯಿತು.

15 ದಿನಗಳ ಹಿಂದೆ ನ. 30ರಂದು ರಾತ್ರಿ ಗಣೇಶಮೂರ್ತಿಯನ್ನು ದೇವಾಲಯದ ಹೊಸ್ತಿಲು ದಾಟಿಸಿ ಹೊರ ತರಲಾಗಿತ್ತು. ಆದರೆ, ಮಳೆ ಹಿನ್ನೆಲೆಯಲ್ಲಿ ಜಾತ್ರೆ ರದ್ದುಗೊಂಡಿತ್ತು. ಅಂದಿನಿಂದ 15 ದಿನ ದೇವಾಲಯದ ಮುಂಭಾಗದ ಗೋಪುರದ ಕೆಳಗೆ ಗಣೇಶಮೂರ್ತಿ ಪೂಜಾ ಕೈಂಕರ್ಯಗಳು ನೆರವೇರಿದವು.

ಹೊನ್ನೇನಹಳ್ಳಿಯ 18 ಕೋಮಿನ ಜನರು ಒಗ್ಗೂಡಿ ಮಹಾಗಣಪತಿಯನ್ನು ದೇವಾಲಯಲದ ಗೋಪುರದಿಂದ ಹೊರತಂದು ಸರ್ವಾಲಂಕೃತ ವಾಹನದಲ್ಲಿ ಕೂರಿಸಿ ಮಧ್ಯರಾತ್ರಿವರೆಗೂ ಗ್ರಾಮದ ರಾಜಬೀದಿಗಳಲ್ಲಿ ಮೆರವಣಿಗೆ ನಡೆಸಿದರು.

ನಂತರ ಭಾನುವಾರ ಮಧ್ಯಾಹ್ನದಿಂದ ಜಾನಪದ ಸಿರಿಗೆಜ್ಜೆ ಕಲಾತಂಡದಿಂದ ನಂದಿ, ನವಿಲು, ಜಿರಾಫೆ, ಕವಾಡಿ ನೃತ್ಯ, ನಾದಸ್ವರ, ಕರಡಿ ಮಜಲು, ನಾಸಿಕ್ ಡೋಲ್, ನಂದಿಕೋಲು, ಕೀಲು ಕುದುರೆ, ಬೊಂಬೆ ಕುಣಿತ, ವೀರಭದ್ರನ ಕುಣಿತ, ಡೊಳ್ಳುಕುಣಿತ, ಪೂಜಾಕುಣಿತ, ಸೋಮನ ಕುಣಿತದಂತಹ ಜನಪದ ಕಲಾತಂಡಗಳ ಜತೆಗೆ ಆಕರ್ಷಕ ಬಾಣ ಬಿರುಸು, ಸಿಡಿಮದ್ದಿನ ಸದ್ದಿನೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಗಣೇಶಮೂರ್ತಿಯ ಮೆರವಣಿಗೆ ನಡೆಸಲಾಯಿತು.

ಗಣೇಶಮೂರ್ತಿಯ ಮೆರವಣಿಗೆ ಸಾಗಿದ ದಾರಿಯುದ್ದಕ್ಕೂ ಗ್ರಾಮದ ಜನ ಮತ್ತು ಭಕ್ತರು ವಿಘ್ನೇಶ್ವರನಿಗೆ ಪೂಜೆ ಸಲ್ಲಿಸಿ ಧನ್ಯತೆ ಮೆರೆದರು. ವೈಭವೋಪೇತ ಮೆರವಣಿಗೆಯಲ್ಲಿ ಗೂಳೂರು ಕೆರೆ ಬಳಿ ಸಾಗಿದ ಗಣೇಶಮೂರ್ತಿಯನ್ನು ಆಕರ್ಷಕ ಸಿಡ್ಡಿಮದ್ದು ಸಿಡಿಸಿ ಸಂಭ್ರಮಿಸಿದ ನಂತರ ಕೆರೆಯಲ್ಲಿ ವಿಸರ್ಜಿಸಲಾಯಿತು.

ಗೂಳೂರು ಮಹಾಗಣಪತಿ ಭಕ್ತಮಂಡಳಿಯ ಶಿವಕುಮಾರ್ ಅವರ ನೇತೃತ್ವದಲ್ಲಿ ನಡೆದ ಈ ವಿಸರ್ಜನಾ ಮಹೋತ್ಸವದಲ್ಲಿ ನಾಡಿನ ವಿವಿಧೆಡೆಗಳಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.