ADVERTISEMENT

ಫೆ. 3ರಂದು ತಿಪಟೂರಿಗೆ ಎಚ್‌ಡಿಕೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2023, 5:09 IST
Last Updated 31 ಜನವರಿ 2023, 5:09 IST

ತಿಪಟೂರು: ನಗರಕ್ಕೆ ಫೆ. 3ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಭೇಟಿ ನೀಡಲಿದ್ದು, ಕೆ.ಟಿ. ಶಾಂತಕುಮಾರ್‌ ಅವರನ್ನು ಅಧಿಕೃತವಾಗಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗುವುದು ಎಂದು ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಅಂಜನಪ್ಪ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಕಳೆದ ಹಲವು ತಿಂಗಳುಗಳಿಂದ ತಾಲ್ಲೂಕಿನಲ್ಲಿ ಜೆಡಿಎಸ್ ಸಂಘಟನೆ ಮತ್ತು ಮುನ್ನಡೆಸಲು ನಾಯಕತ್ವದ ಕೊರತೆ ಇತ್ತು. ಶಾಂತಕುಮಾರ್ ತಾಲ್ಲೂಕಿನಲ್ಲಿ ಉತ್ತಮ ಕಾರ್ಯ ಮಾಡಿದ್ದಾರೆ. ಕಾಂಗ್ರೆಸ್ ತೊರೆದು ಜೆಡಿಎಸ್ ಸೇರ್ಪಡೆಗೆ ತೀರ್ಮಾನಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಪಕ್ಷದ ವರಿಷ್ಠರು ಸೂಚಿಸಿರುವಂತೆ ಸೇರ್ಪಡೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ADVERTISEMENT

ಈಗಾಗಲೇ, ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಿಂದ ಬೇಸರಗೊಂಡಿರುವ ಜನತೆ ಈ ಬಾರಿ ಪ್ರಾದೇಶಿಕ ಪಕ್ಷವಾದ ಜೆಡಿಎಸ್‍ಗೆ ಅತಿ ಹೆಚ್ಚಿನ ಬೆಂಬಲ ನೀಡಿದ್ದಾರೆ. ಈ ನಿಟ್ಟಿನಲ್ಲಿ ತಾಲ್ಲೂಕಿನ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆ ಬಲಗೊಳ್ಳಲಿದೆ ಎಂದರು.

ಸಮಾಜ ಸೇವಕ ಕೆ.ಟಿ. ಶಾಂತಕುಮಾರ್ ಮಾತನಾಡಿ, ಈಗಾಗಲೇ ವರಿಷ್ಠರೊಂದಿಗೆ ಮಾತನಾಡಿದ್ದು, ಪಕ್ಷ ಸಂಘಟನೆಯ ಜವಾಬ್ದಾರಿ ನೀಡಿದ್ದಾರೆ. ಫೆ. 3ರಂದು ಅಧಿಕೃತವಾಗಿ ಕುಮಾರಸ್ವಾಮಿ ಘೋಷಣೆ ಮಾಡಲಿದ್ದಾರೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ತರಲು 123 ಸ್ಥಾನಗಳ ಪೈಕಿ ತಿಪಟೂರು ಕ್ಷೇತ್ರವನ್ನೂ ಸೇರಿಸಬೇಕು ಎಂಬ ಹಂಬಲವಿದೆ. ಈ ನಿಟ್ಟಿನಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರೊಂದಿಗೆ ಬೆರೆತು ಸಂಘಟನೆ ಮಾಡಲಾಗುವುದು ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ರಾಜ್ಯ ಜೆಡಿಎಸ್‍ ಘಟಕದ ಉಪಾಧ್ಯಕ್ಷ ಗಂಗಣ್ಣ, ಪ್ರಧಾನ ಕಾರ್ಯದರ್ಶಿ ಬೆಳ್ಳಿ ಲೋಕೇಶ್, ಜಿಲ್ಲಾ ಉಪಾಧ್ಯಕ್ಷ ದೇವರಾಜು, ತಾಲ್ಲೂಕು ಕಾರ್ಯಾಧ್ಯಕ್ಷ ಸೂಗೂರು ಶಿವಸ್ವಾಮಿ, ನಗರಸಭಾ ಮಾಜಿ ಸದಸ್ಯೆ ರೇಖಾ ಅನೂಪ್, ತಾ.ಪಂ. ಮಾಜಿ ಸದಸ್ಯ ನಾಗರಾಜು, ಪ್ರಕಾಶ್, ರಾಕೇಶ್, ಗುರುಪ್ರಸನ್ನ ಹಾಜರಿದ್ದರು.

ವರಿಷ್ಠರ ತೀರ್ಮಾನ: ‘ನಾನು ತಿಪಟೂರು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿರುವುದು ಸತ್ಯ. ದೇವೇಗೌಡ ಅವರು ನನ್ನನ್ನು ಮನೆಯ ಮಗ ಎಂದುಕೊಂಡಿದ್ದಾರೆ. ಅವರ ಮಾತಿಗೆ ಬದ್ಧನಾಗಿದ್ದು ಪಕ್ಷ ಸಂಘಟನೆ ಮಾಡುತ್ತೇನೆ. ಟಿಕೆಟ್ ಕೊಡುವುದು ಬಿಡುವುದು ಅವರಿಗೆ ಬಿಟ್ಟ ವಿಚಾರ’ ಎಂದು ಜೆಡಿಎಸ್‌ ಹಿರಿಯ ಮುಖಂಡ ಜಕ್ಕನಹಳ್ಳಿ ಲಿಂಗರಾಜು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.