
ತುಮಕೂರು: ಮಳೆಯಿಂದ ಸಂಭವಿಸುವ ಹಾನಿ ಹಾಗೂ ಪ್ರಾಕೃತಿಕ ವಿಕೋಪದ ಕುರಿತು ಮಾಹಿತಿ ಪಡೆಯಲು ಜಿಲ್ಲಾಡಳಿತ ಸಹಾಯವಾಣಿ ಆರಂಭಿಸಿದೆ. ಸಾರ್ವಜನಿಕರು ದೂರವಾಣಿ 0816-2213400, ಮೊ 7304975519, ಸಹಾಯವಾಣಿ 155304 ಸಂಪರ್ಕಿಸಬಹುದು.
ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಉತ್ತಮ ಮಳೆಯಾಗುತ್ತಿದೆ. 3.20 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಗುರಿ ಹೊಂದಿದ್ದು, ಈವರೆಗೆ 369 ಹೆಕ್ಟೇರ್ ವ್ಯಾಪ್ತಿಯಲ್ಲಿ ಬಿತ್ತನೆಯಾಗಿದೆ. ಮಧುಗಿರಿ ತಾಲ್ಲೂಕಿನಲ್ಲಿ 19, ಶಿರಾದಲ್ಲಿ 2, ಕೊರಟಗೆರೆಯಲ್ಲಿ 2 ವಿದ್ಯುತ್ ಕಂಬಗಳು ಮಳೆ, ಗಾಳಿಯಿಂದ ನೆಲಕ್ಕುರುಳಿವೆ.
ಮಳೆಗಾಲವನ್ನು ಸಮರ್ಪಕವಾಗಿ ಎದುರಿಸಲು ಜಿಲ್ಲಾ ಆಡಳಿತ ಸಿದ್ಧತೆ ಮಾಡಿಕೊಂಡಿದ್ದು, ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸೋಮವಾರ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ‘ಮುಂಗಾರು ಪೂರ್ವ ಸಿದ್ಧತೆ ಹಾಗೂ ಬರ ನಿರ್ವಹಣೆ’ ಕುರಿತು ಅಧಿಕಾರಿಗಳ ಜತೆ ಸಭೆ ನಡೆಸಿದರು.
ಶಿರಾ ತಾಲ್ಲೂಕಿನಲ್ಲಿ 6 ಹೆಕ್ಟೇರ್ ಬೆಳೆ ಮಳೆಯಿಂದ ಹಾನಿಯಾಗಿದೆ. ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕಿ ಶಾರದಮ್ಮ ಸ್ಥಳಕ್ಕೆ ಭೇಟಿ ನೀಡಿ ವರದಿ ಸಲ್ಲಿಸಬೇಕು. ಕೆರೆ, ಚರಂಡಿ, ರಾಜ ಕಾಲುವೆಗಳಲ್ಲಿರುವ ತ್ಯಾಜ್ಯ ತೆರವುಗೊಳಿಸಬೇಕು. ಮಳೆನೀರು ಸರಾಗವಾಗಿ ಹರಿದು ಹೋಗಲು ಕ್ರಮ ವಹಿಸಬೇಕು ಎಂದು ಸೂಚಿಸಿದರು.
ಮಹಾನಗರ ಪಾಲಿಕೆ ಆಯುಕ್ತೆ ಬಿ.ವಿ.ಅಶ್ವಿಜ, ಜಿ.ಪಂ ಸಿಇಒ ಜಿ.ಪ್ರಭು, ಡಿಡಿಎಲ್ಆರ್ ಎಂ.ಎನ್.ನಿರಂಜನ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.