ತುಮಕೂರು: ಹೇಮಾವತಿ ಎಕ್ಸ್ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸುವುದಿಲ್ಲ. ಮತ್ತೆ ಮುಂದುವರಿಯಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಪುನರುಚ್ಚರಿಸಿದರು.
ನಗರದಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಬೆಂಗಳೂರಿನಲ್ಲಿ ಜಿಲ್ಲೆಯ ಶಾಸಕರ ಜತೆಗೆ ಸಭೆ ನಡೆಸಲಾಗಿದೆ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜತೆಗೆ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು. ಐಐಟಿ ತಜ್ಞರ ಅಭಿಪ್ರಾಯವನ್ನು ತೆಗೆದುಕೊಳ್ಳಲಾಗುವುದು. ನಂತರ ಕೆಲಸ ಆರಂಭಿಸಲಾಗುವುದು’ ಎಂದರು.
ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಕಾಮಗಾರಿ ಮುಂದುವರಿಸಲಾಗುವುದು. ಈಗಾಗಲೇ ಸರ್ಕಾರ ಹಣ ಬಿಡುಗಡೆ ಮಾಡಿದ್ದು, ಅರ್ಧದಷ್ಟು ಕೆಲಸ ಮುಗಿದಿದೆ. ಇಂತಹ ಯೋಜನೆ ಜಾರಿ ಮಾಡುವ ಸಮಯದಲ್ಲಿ ಸಣ್ಣಪುಟ್ಟ ಸಮಸ್ಯೆಗಳು ಬರುತ್ತವೆ. ಅದನ್ನು ನಿವಾರಿಸಿಕೊಂಡು ಮತ್ತೆ ಕೆಲಸ ಆರಂಭಿಸಲಾಗುವುದು ಎಂದು ಹೇಳಿದರು.
‘ಕಾಂಗ್ರೆಸ್ ಶಾಸಕರು ಹೈಜಾಕ್ ಆಗಿದ್ದಾರೆ’ ಎಂದು ಶಾಸಕ ವಿಜಯಾನಂದ ಕಾಶಪ್ಪನವರ್ ಹೇಳಿಕೆ ಹಾಗೂ ಆಪರೇಷನ್ ಕಮಲದ ಬಗ್ಗೆ ಪ್ರತಿಕ್ರಿಯಿಸಿ, ‘ಈ ಬಗ್ಗೆ ನನಗೇನೂ ಗೊತ್ತಿಲ್ಲ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.