ಶಿರಾ: ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಜ್ಯಶಾಸ್ತ್ರ ವಿಭಾಗ ಮತ್ತು ಎನ್ಸಿಸಿಯಿಂದ ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನಾಚರಣೆ ನಡೆಯಿತು.
ಅರ್ಥಶಾಸ್ತ್ರ ವಿಭಾಗ ಮುಖ್ಯಸ್ಥ ಪ್ರೊ.ಎಂ.ತಿಪ್ಪೇಸ್ವಾಮಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ನಾಗರಿಕ ಸಮಾಜದ ಸ್ವಾತಂತ್ರ್ಯ ಎತ್ತಿ ಹಿಡಿಯುವ ದೃಷ್ಟಿಯಿಂದ ಘೋಷಿಸಲಾದ ಮಾನವ ಹಕ್ಕುಗಳನ್ನು 1948ರಲ್ಲಿ ವಿಶ್ವಸಂಸ್ಥೆ ಅಂಗೀಕರಿಸಿತು. ಅಂದಿನಿಂದ ಪ್ರತಿವರ್ಷ ಡಿಸೆಂಬರ್ 10ರಂದು ಅಂತರರಾಷ್ಟ್ರೀಯ ಮಾನವ ಹಕ್ಕುಗಳ ದಿನ ಆಚರಿಸಲಾಗುತ್ತಿದೆ ಎಂದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಇತ್ತೀಚಿನ ದಿನಗಳಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಹೆಚ್ಚುತ್ತಿರುವುದು ವಿಷಾದನೀಯ ಎಂದರು.
ರಾಜ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಿ.ಆರ್.ಹೊನ್ನಾಂಜಿನಯ್ಯ ಮಾತನಾಡಿ, ಮಾನವ ಹಕ್ಕುಗಳ ಸಂರಕ್ಷಣೆ ಕೇವಲ ಸರ್ಕಾರಗಳ ಕರ್ತವ್ಯವಲ್ಲ. ಸಮಾಜದಲ್ಲಿರುವ ಪ್ರತಿಯೊಬ್ಬರ ಕರ್ತವ್ಯ. ವಿದ್ಯಾರ್ಥಿಗಳು ಇದರ ಮಹತ್ವ ಅರಿಯಬೇಕು ಎಂದರು.
ಎನ್ಸಿಸಿ ವಿದ್ಯಾರ್ಥಿ ವೆಂಕಟೇಶ್ ಮಾನವ ಹಕ್ಕುಗಳ ಬಗ್ಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಿಸಬೇಕು ಎಂದರು.
ಸಹ ಪ್ರಾಧ್ಯಾಪಕ ಪ್ರೊ.ಶಾಂತಕುಮಾರಿ, ಸುಕನ್ಯಾ ಟಿ.ಎಲ್, ಸುರೇಶ್ ಎನ್., ದೈಹಿಕ ಶಿಕ್ಷಣ ನಿರ್ದೇಶಕ ವೆಂಕಟೇಶ್ ಮೂರ್ತಿ, ಎನ್ಸಿಸಿ ಹಿರಿಯ ವಿದ್ಯಾರ್ಥಿಗಳಾದ ದರ್ಶನ್, ಕುಮಾರ್ ಮತ್ತು ಮಹಾಲಕ್ಷ್ಮಿ ಹಾಜರಿದ್ದರು.