ತುರುವೇಕೆರೆ: ‘ಕಾನೂನು ಸುವ್ಯವಸ್ಥೆ ಕಾಪಾಡಲು ರಾಜ್ಯ ಸರ್ಕಾರ ನಿಷ್ಕ್ರಿಯವಾದರೆ ಎನ್ಐಎ, ಕೇಂದ್ರ ಸರ್ಕಾರ ಮಧ್ಯೆ ಪ್ರವೇಶಿಸಬೇಕಾಗುತ್ತದೆ. ನಿಮ್ಮ ಕೈಯಲ್ಲಿ ಆಗದಿದ್ದರೆ ಕೇಂದ್ರಕ್ಕೆ ಪತ್ರ ಬರೆಯಿರಿ. ಆಗ ಹತ್ತು ನಿಮಿಷಕ್ಕೆ ಎಲ್ಲವೂ ನಿಯಂತ್ರಣಕ್ಕೆ ಬರುತ್ತದೆ’ ಎಂದು ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ತಾಲ್ಲೂಕಿನ ಕುಂದೂರು ಬಳಿ ಭಾನುವಾರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಚಾಲನೆ ನೀಡಿದ ನಂತರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಅನಭಿಷಕ್ತ ದೊರೆ ಎನ್ನುವುದನ್ನು ಮರೆತು ಪೊಲೀಸರಿಗೆ ಮುಕ್ತವಾಗಿ ಕೆಲಸ ಮಾಡಲು ಬಿಡಬೇಕು ಎಂದರು.
ದುಷ್ಕರ್ಮಿಗಳ ಹೆಡೆಮುರಿ ಕಟ್ಟುತ್ತೇವೆ ಎಂದು ಅವರಿಗೆ ರಕ್ಷಣೆ ಕೊಡುತ್ತಾ, ಒಳ ಒಪ್ಪಂದ ಮಾಡಿಕೊಳ್ಳುವುದು ಬಿಡಬೇಕು. ಸಮಾಜಘಾತುಕರು, ಅಯೋಗ್ಯರು, ಕೊಲೆ ಬೆದರಿಕೆ ಹಾಕುವವರ ಹೆಡೆಮುರಿ ಕಟ್ಟಲು ಪೊಲೀಸರಿಗೆ ಮುಕ್ತ ಅವಕಾಶ ನೀಡಬೇಕು ಎಂದು ಸಲಹೆ ಮಾಡಿದರು.
‘ದೇಶಕ್ಕೆ ಮಾರಕವಾದ ವ್ಯಕ್ತಿಗಳ ಬಗ್ಗೆ ಮೃದು ಧೋರಣೆ ತೋರಬಾರದು. ಬೇರೆಯವರ ಮನೆಗೆ ಬೆಂಕಿ ಬಿದ್ದಿರುವುದು ಕಂಡು ಖುಷಿ ಪಡುವುದನ್ನು ನಿಲ್ಲಿಸಬೇಕು. ಮುಂದೆ ಆ ಬೆಂಕಿ ನಿಮ್ಮ ಮನೆಗೂ ವ್ಯಾಪಿಸುತ್ತದೆ. ಇದನ್ನು ಗಮನದಲ್ಲಿ ಇಟ್ಟುಕೊಂಡು ಕೆಲಸ ಮಾಡಬೇಕು’ ಎಂದು ಸೋಮಣ್ಣ ನುಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.