ತುಮಕೂರಿನ ಎಸ್ಎಸ್ಐಟಿ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ ‘ಬಯೊಚೆಸ್’ ವಿಚಾರ ಸಂಕಿರಣದಲ್ಲಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.
ತುಮಕೂರು: ಉದ್ಯಮ ಕ್ಷೇತ್ರದಲ್ಲಿ ಪ್ರಗತಿ ಕಾಣಲು ಆವಿಷ್ಕಾರ, ಹೊಸ ಉತ್ಪನ್ನಗಳ ಉತ್ಪಾದನೆ ಮಾಡುವುದು ಅತ್ಯಗತ್ಯವಾಗಿದೆ ಎಂದು ಆವಿಷ್ಕಾರ್ ಓರಲ್ ಸಿರಪ್ಸ್ ಸಂಸ್ಥೆ ಸಂಸ್ಥಾಪಕ ಹಾಗೂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದಿನೇಶ್ ರೆಡ್ಡಿ ಪ್ರತಿಪಾದಿಸಿದರು.
ಸಿದ್ಧಗಂಗಾ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ ‘ಬಯೊಚೆಸ್’ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು. ಹೊಸ ಆವಿಷ್ಕಾರಗಳತ್ತ ಉದ್ಯಮಿಗಳು, ಉದ್ಯೋಗಿಗಳು, ಸಂಶೋಧಕರು ಮುಂದಾಗಬೇಕಿದೆ ಎಂದು ಸಲಹೆ ಮಾಡಿದರು.
ಉದ್ಯೋಗ, ಉದ್ಯಮದಲ್ಲಿ ಯಶಸ್ಸು ಗಳಿಸಲು ಉದ್ಯಮಶೀಲತೆಯ ಕೌಶಲ, ಮಾಹಿತಿ ಹಾಗೂ ತಂತ್ರಜ್ಞಾನದ ಬಗ್ಗೆ ಸಂಶೋಧನೆ ಮಾಡಬೇಕಿದೆ. ಇದರಿಂದಾಗಿ ಬೇಡಿಕೆಗೆ ಅನುಗುಣವಾಗಿ ಸಾಮಗ್ರಿಗಳ ಉತ್ಪಾದನೆ ಮಾಡಲು ಸಹಕಾರಿಯಾಗುತ್ತದೆ. ಜನರ ಅಗತ್ಯಕ್ಕೆ ಅನುಗುಣವಾಗಿ ವಸ್ತುಗಳನ್ನು ತಯಾರಿಸಿ ಮಾರುಕಟ್ಟೆಗೆ ತಂದರೆ ಗ್ರಾಹಕರ ಸಂಖ್ಯೆಯನ್ನು ಹೆಚ್ಚಿಸಿಕೊಳ್ಳಬಹುದು ಎಂದರು.
ಕಾಲೇಜು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರೊ.ಶಿವಕುಮಾರಯ್ಯ, ಪ್ರಾಂಶುಪಾಲ ಪ್ರೊ.ಎಸ್.ವಿ.ದಿನೇಶ್, ಕೆಮಿಕಲ್ ಎಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಪ್ರೊ.ಸುಧೀರ್ ಎಚ್.ರಂಗನಾಥ್, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಪ್ರೊ.ಬಿ.ಎಸ್.ಗೌರಿಶಂಕರ್, ಎಸ್.ರಾಜಶೇಖರ್, ಡಿ.ಆರ್.ಪ್ರಸನ್ನ, ವಿದ್ಯಾರ್ಥಿ ಫರ್ವಿನ್ ಖಾನ್ ಇತರರು ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.