ತುಮಕೂರು: ಹಾಸನದಿಂದ ಆಂಧ್ರಪ್ರದೇಶದ ಚರ್ಲಪಲ್ಲಿಗೆ ಪೈಪ್ಲೈನ್ ಮೂಲಕ ಅಡುಗೆ ಅನಿಲ ಕೊಂಡೊಯ್ಯುವ ಕಾಮಗಾರಿ ಚಿಕ್ಕನಾಯಕನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಹಾದು ಹೋಗುತ್ತದೆ. ಕಾಮಗಾರಿಗಾಗಿ ರೈತರು ಜಮೀನು ಕಳೆದುಕೊಳ್ಳಲಿದ್ದು ವೈಜ್ಞಾನಿಕ ರೀತಿಯಲ್ಲಿ ಪರಿಹಾರ ವಿತರಿಸಬೇಕು ಎಂದು ಆಗ್ರಹಿಸಿ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟಿಸಿದರು.
ರೈತ ಸಂಘ ಮತ್ತು ಹಸಿರು ಸೇನೆ ರಾಜ್ಯ ಉಪಾಧ್ಯಕ್ಷ ಕೆಂಕೆರೆ ಸತೀಶ್ ಮಾತನಾಡಿ, ‘ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಬೆಳ್ಳಾರ, ಲಕ್ಕೇನಹಳ್ಳಿ, ಹೊಯ್ಸಳಕಟ್ಟೆ, ದಬ್ಬಗುಂಟೆ, ಮಡಿಕೆಗುಡ್ಲು ಸೇರಿದಂತೆ 10ಕ್ಕೂ ಹೆಚ್ಚು ಹಳ್ಳಿಗಳ ಮಾರ್ಗದಲ್ಲಿ ಈ
ಯೋಜನೆ ಹಾದು ಹೋಗಲಿದೆ’ ಎಂದರು.
ಕಾಮಗಾರಿಗೆ ರೈತರ ಭೂಮಿ ವಶಪಡಿಸಿಕೊಳ್ಳುವುದಕ್ಕೂ ಮುನ್ನ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ವೈಜ್ಞಾನಿಕವಾಗಿ ಪರಿಹಾರ ನಿಗದಿಗೊಳಿಸಿ ಕಾಮಗಾರಿ ಆರಂಭಿಸುವುದಾಗಿ ಗುತ್ತಿಗೆದಾರ ಕಂಪನಿ ಹೇಳಿತ್ತು. ಆದರೆ ರೈತರಿಗೆ ಜಿಲ್ಲಾಧಿಕಾರಿ ನಡೆಸಿದ ಸಭೆಯ ಯಾವುದೇ ಮಾಹಿತಿ ನೀಡಿಲ್ಲ. ಅನ್ಯ ಕಾರಣಗಳನ್ನು ಹೇಳಿ ರೈತರಿಂದ ಭೂ ಸ್ವಾಧೀನಕ್ಕೆ ಒಪ್ಪಿಗೆ ಪತ್ರಕ್ಕೆ ಸಹಿ ಪಡೆಯಲಾಗಿದೆ ಎಂದು ಹೇಳಿದರು.
ಅತ್ಯಂತ ಕಡಿಮೆ ಪರಿಹಾರ ಹಣ ನಿಗದಿಪಡಿಸಿ ಮೋಸ ಮಾಡುತ್ತಿದ್ದಾರೆ. ಈ ಸಂಬಂಧ ಜಿಲ್ಲಾಧಿಕಾರಿ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನೆಯಲ್ಲಿ ರೈತ ಸಂಘ, ಹಸಿರು ಸೇನೆ ಮುಖಂಡರಾದ ರವಿಕುಮಾರ್, ಲಾ.ಪು.ಕರಿಯಪ್ಪ, ಡಿ.ಟಿ.ಗಂಗಾಧರ್ ಸೇರಿದಂತೆ ಹಲವರು ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.