ADVERTISEMENT

ಬ್ಯಾಡನೂರು ಕೆರೆ ಹರಾಜಿಗೆ ಒತ್ತಾಯ

ಪಾವಗಡ ತಹಶೀಲ್ದಾರ್ ಕಚೇರಿ ಮುಂದೆ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 19 ಜೂನ್ 2021, 4:33 IST
Last Updated 19 ಜೂನ್ 2021, 4:33 IST
ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು
ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು   

ಪಾವಗಡ: ತಾಲ್ಲೂಕಿನ ಬ್ಯಾಡನೂರು ಕೆರೆ ಸೇರಿದಂತೆ ವಿವಿಧ ಕೆರೆಗಳ ಮೀನುಗಾರಿಕೆಗೆ ಹೊಸದಾಗಿ ಟೆಂಡರ್ ಕರೆಯಬೇಕು ಎಂದು ಆಗ್ರಹಿಸಿ ಹಸಿರು ಸೇನೆ ತಾಲ್ಲೂಕು ಘಟಕದ ಪದಾಧಿಕಾರಿಗಳು ತಹಶೀಲ್ದಾರ್ ಕಚೇರಿ ಮುಂದೆ ಶುಕ್ರವಾರ ಪ್ರತಿಭಟಿಸಿದರು.

ಬ್ಯಾಡನೂರು ಶಂಕರಲಿಂಗನ ಕೆರೆಯಲ್ಲಿ ಮೀನುಗಾರಿಕೆ ನಡೆಸಲು 2014ರಿಂದ ಇಲ್ಲಿಯವರೆಗೆ ಒಬ್ಬರಿಗೆ ನೀಡಲಾಗಿದೆ. ಕಳೆದ ಬಾರಿ ಕೋವಿಡ್ ಇದ್ದುದರಿಂದ ನಷ್ಟವಾಗಿದೆ ಎಂಬ ಕಾರಣ ನೀಡಿ ಈ ವರ್ಷಕ್ಕೂ ಅದೇ ವ್ಯಕ್ತಿಗೆ ಮೀನುಗಾರಿಕೆ ನಡೆಸಲು ಅನುಮತಿ ನೀಡಲಾಗಿತ್ತು. ಇದರಿಂದ ರೈತರಿಗೆ ಸುತ್ತಮುತ್ತಲ ಗ್ರಾಮಸ್ಥರಿಗೆ ಅನ್ಯಾಯವಾಗುತ್ತಿದೆ ಎಂದು ಪ್ರತಿಭಟನಾನಿರತರು ಆರೋಪಿಸಿದರು.

ಸರ್ಕಾರ ಮೀನುಗಾರಿಕೆ ನಡೆಸುವವರಿಗೆ ನೀಡಿರುವ ಮೀನಿನ ಬಲೆ, ಸಾಕಾಣಿಕೆ ಮಾಡಲು ಮೀನಿನ ಮರಿಗಳು ಇತ್ಯಾದಿ ಸಾಮಗ್ರಿಗಳನ್ನು ರೈತರಿಗೆ ಸಮರ್ಪಕವಾಗಿ ವಿತರಿಸುತ್ತಿಲ್ಲ. ಸೌಲಭ್ಯಗಳ ಬಗ್ಗೆ ಪ್ರಕಟಣಾ ಫಲಕದಲ್ಲಿ ಪ್ರಕಟಿಸುತ್ತಿಲ್ಲ. ಇದರಿಂದ ಅರ್ಹ ಫಲಾನುಭವಿಗಳು ಸೌಲಭ್ಯದಿಂದ ವಂಚಿತರಾಗುತ್ತಿದ್ದಾರೆ ಎಂದು ದೂರಿದರು.

ADVERTISEMENT

ಜೂನ್ ತಿಂಗಳಲ್ಲಿ ಅವಧಿ ಮುಗಿಯಲಿದ್ದು, ಕೂಡಲೇ ಹೊಸದಾಗಿ ಹರಾಜು ಪ್ರಕ್ರಿಯೆ ನಡೆಸಬೇಕು. ಮೀನುಗಾರಿಕೆ ಇಲಾಖೆ ಕಚೇರಿ ಮುಂಭಾಗದಲ್ಲಿ ಸೌಕರ್ಯಗಳ ಬಗ್ಗೆ ಪ್ರಕಟಿಸಬೇಕು ಎಂದು ಒತ್ತಾಯಿಸಿದರು.

ಹರಾಜು ಕರೆಯದಿದ್ದಲ್ಲಿ ಸುತ್ತಮುತ್ತಲ ಗ್ರಾಮಗಳ ಜನರೊಂದಿಗೆ ಕೆರೆಯಲ್ಲಿ ಇಳಿದು ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಸಿದರು.

ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್ ಕೆ.ಆರ್.ನಾಗರಾಜು ಅವರಿಗೆ ಮನವಿ ಸಲ್ಲಿಸಲಾಯಿತು.

ಹಸಿರು ಸೇನೆ ತಾಲ್ಲೂಕು ಘಟಕದ ಅಧ್ಯಕ್ಷ ಪೂಜಾರಪ್ಪ, ಈರಣ್ಣ, ನರಸಪ್ಪ, ರಂಗನಾಥ್, ಗುರು, ರಂಗಧಾಮ, ಸದಾಶಿವಪ್ಪ, ಅನ್ನಪೂರ್ಣಮ್ಮ, ಶಿವರಾಜು, ಮೋಹನ್ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.