ತುಮಕೂರು: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂಬ ಆಮಿಷಕ್ಕೆ ಒಳಗಾಗಿ ನಗರ ಹೊರವಲಯದ ಕುಂದೂರಿನ ವಿ.ಟಿ.ಅರುಣಕುಮಾರಿ ಎಂಬುವರು ₹24.35 ಲಕ್ಷ ಕಳೆದುಕೊಂಡಿದ್ದಾರೆ.
ಅರುಣ ಫೇಸ್ಬುಕ್ನಲ್ಲಿ KKR Collabarative Company ಷೇರು ಮಾರುಕಟ್ಟೆಯ ಜಾಹೀರಾತು ಕ್ಲಿಕ್ ಮಾಡಿದ್ದಾರೆ. ನಂತರ ಸೈಬರ್ ಆರೋಪಿಗಳು ಅವರ ನಂಬರ್ ಅನ್ನು S-14 KKR Collabarative Win-WIn Group ವಾಟ್ಸ್ಆ್ಯಪ್ ಗ್ರೂಪ್ಗೆ ಸೇರಿಸಿದ್ದಾರೆ. ಸದರಿ ಗ್ರೂಪ್ನಲ್ಲಿ ಹಣ ಹೂಡಿಕೆ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ. ಒಂದು ಆ್ಯಪ್ ಇನ್ಸ್ಟಾಲ್ ಮಾಡಿಕೊಂಡು ಅಗತ್ಯ ಮಾಹಿತಿ ಸಲ್ಲಿಸಿ, ಆನ್ಲೈನ್ ಖಾತೆ ತೆರೆದು ಹಣ ಹೂಡಿಕೆ ಮಾಡುವಂತೆ ತಿಳಿಸಿದ್ದಾರೆ.
ಜ. 7ರಿಂದ ಫೆ. 24ರ ವರೆಗೆ ಹಂತ ಹಂತವಾಗಿ ಒಟ್ಟು ₹24,60,430 ಹಣವನ್ನು ವಿವಿಧ ಖಾತೆಗಳಿಗೆ ವರ್ಗಾವಣೆ ಮಾಡಿದ್ದಾರೆ. ಇದರಲ್ಲಿ ಕೇವಲ ₹25 ಸಾವಿರ ಅರುಣಕುಮಾರಿ ಖಾತೆಗೆ ವಾಪಸ್ ಹಾಕಿದ್ದಾರೆ. ಬಾಕಿ ಹಣ ಹಿಂದಿರುಗಿಸುವಂತೆ ಕೇಳಿದಾಗ ಇನ್ನೂ ಹೆಚ್ಚಿನ ಹಣ ವರ್ಗಾಯಿಸಿದರೆ ವಾಪಸ್ ನೀಡಲಾಗುತ್ತದೆ ಎಂದು ಹೇಳಿದ್ದಾರೆ. ಇದರಿಂದ ಅನುಮಾನಗೊಂಡು ಸೈಬರ್ ಠಾಣೆಗೆ ದೂರು ನೀಡಿದ್ದು, ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.