ADVERTISEMENT

ಗುರುವಿಲ್ಲದೇ ಗುರಿ ಮುಟ್ಟಲು ಅಸಾಧ್ಯ

ಶಾಸಕ ಎಂ.ವಿ. ವೀರಭದ್ರಯ್ಯ ಅಭಿಮತ

​ಪ್ರಜಾವಾಣಿ ವಾರ್ತೆ
Published 30 ಸೆಪ್ಟೆಂಬರ್ 2021, 3:12 IST
Last Updated 30 ಸೆಪ್ಟೆಂಬರ್ 2021, 3:12 IST
ಮಧುಗಿರಿ ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ನಿವೃತ್ತಿ ನೌಕರರನ್ನು ಶಾಸಕ ಎಂ.ವಿ. ವೀರಭದ್ರಯ್ಯ ಸನ್ಮಾನಿಸಿದರು
ಮಧುಗಿರಿ ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿವಿಧ ಇಲಾಖೆಯ ನಿವೃತ್ತಿ ನೌಕರರನ್ನು ಶಾಸಕ ಎಂ.ವಿ. ವೀರಭದ್ರಯ್ಯ ಸನ್ಮಾನಿಸಿದರು   

ಮಧುಗಿರಿ: ‘ಶಿಕ್ಷಕ ವೃತ್ತಿ ಶ್ರೇಷ್ಠವಾದುದು. ಇದಕ್ಕಿಂತ ದೊಡ್ಡ ವೃತ್ತಿ ಮತ್ತೊಂದಿಲ್ಲ’ ಎಂದು ಶಾಸಕ ಎಂ.ವಿ. ವೀರಭದ್ರಯ್ಯ ತಿಳಿಸಿದರು.

ಪಟ್ಟಣದ ಮಾಲಿಮರಿಯಪ್ಪ ರಂಗ ಮಂದಿರದಲ್ಲಿ ತಾಲ್ಲೂಕು ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಬುಧವಾರ ಆಯೋಜಿಸಿದ್ದ ಗುರುವಂದನಾ ಮತ್ತು ವಿವಿಧ ಇಲಾಖೆಯ ನಿವೃತ್ತ ನೌಕರರಿಗೆ ಸನ್ಮಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಕರಿಂದಲೇ ಉತ್ತಮವಾದ ಸಮಾಜ ನಿರ್ಮಾಣ ಸಾಧ್ಯ ಎಂದರು.

ಅತ್ಯುನ್ನತ ಅಧಿಕಾರಿಗಳು, ವೈದ್ಯರು ಸೇರಿದಂತೆ ಅನೇಕರನ್ನು ತಯಾರು ಮಾಡುವ ಶಕ್ತಿ ಶಿಕ್ಷಕರಲ್ಲಿ ಅಡಗಿದೆ. ಗುರುವಿಲ್ಲದೇ ಗುರಿ ಮುಟ್ಟಲು ಸಾಧ್ಯವೇ ಇಲ್ಲ. ಆದ್ದರಿಂದ ನೀವು ಹಾಕಿಕೊಟ್ಟ ದಾರಿಯಲ್ಲಿ ವಿದ್ಯಾರ್ಥಿಗಳು ನಡೆದರೆ ದೇಶ ತಾನಾಗಿಯೇ ಅಭಿವೃದ್ಧಿ ಹೊಂದುತ್ತದೆ ಎಂದು ಹೇಳಿದರು.

ADVERTISEMENT

ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎನ್. ನರಸಿಂಹರಾಜು‌, ಸರ್ಕಾರಿ ನೌಕರರ ಹಲವಾರು ಸಮಸ್ಯೆಗಳನ್ನು ರಾಜ್ಯ ಹಾಗೂ ಜಿಲ್ಲಾ ಸಂಘ ನಿವಾರಣೆ ಮಾಡಿಕೊಂಡು ಬರುತ್ತಿದೆ. ಜಿಲ್ಲೆಯಲ್ಲಿ ನೌಕರರು ನೆಮ್ಮದಿಯಿಂದ ಕೆಲಸ ಮಾಡುವ ವಾತಾವರಣ ನಿರ್ಮಾಣವಾಗಿದೆ ಎಂದರು.

ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ವಿ.ಎಚ್. ವೆಂಕಟೇಶಯ್ಯ, ಶಿಕ್ಷಕರು ಹಾಗೂ ವಿದ್ಯಾರ್ಥಿಗಳ ನಡುವಿನ ಬಾಂಧವ್ಯ ಕಣ್ಮರೆಯಾಗುತ್ತಿದೆ. ನಿವೃತ್ತಿಯಾದರೂ ಬಡ ಮಕ್ಕಳಿಗೆ ಶಿಕ್ಷಕರು ಶಿಕ್ಷಣ ನೀಡಬೇಕು ಎಂದ ಅವರು, ನಿಮ್ಮ ನಿವೃತ್ತಿ ಜೀವನ ಸುಖವಾಗಿರಲಿ. ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ತಾಲ್ಲೂಕಿನ ನಿವೃತ್ತರಾದ 139 ಸರ್ಕಾರಿ ನೌಕರರು ಹಾಗೂ ಶಿಕ್ಷಕರನ್ನು ಸನ್ಮಾನಿಸಿದರು. ಡಿಡಿಪಿಐ ಕೃಷ್ಣಮೂರ್ತಿ, ಪುರಸಭೆ ಅಧ್ಯಕ್ಷ ತಿಮ್ಮರಾಜು ಮಾತನಾಡಿದರು.

ಕಾರ್ಯಕ್ರಮದಲ್ಲಿ ತಾ.ಪಂ. ಇಒ ಡಿ. ದೊಡ್ಡಸಿದ್ದಯ್ಯ, ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಜಿ. ಜಯರಾಮಯ್ಯ, ಉಪಾಧ್ಯಕ್ಷ ಹನುಮಂತರಾಯಪ್ಪ, ರಾಜ್ಯ ಪರಿಷತ್ ಸದಸ್ಯ ಎಂ.ಎನ್. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಎಂ.ಎನ್. ನಟರಾಜ, ಖಜಾಂಚಿ ಚಿಕ್ಕರಂಗಪ್ಪ, ವಾಣಿಜ್ಯ ಇಲಾಖೆಯ ಅಧಿಕಾರಿ ಪ್ರಭಾಕರ್ ರೆಡ್ಡಿ, ಅಬಕಾರಿ ಡಿವೈಎಸ್‌ಪಿ ಸುರೇಶ್, ತಾಲ್ಲೂಕು ಪ್ರೌಢಶಾಲಾ ಸಹಶಿಕ್ಷಕರ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನಯ್ಯ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಸಂಜಯ್, ಪುರಸಭೆ ಸದಸ್ಯರಾದ ಎಂ.ಎಸ್. ಚಂದ್ರಶೇಖರ್, ಎಂ.ಎಸ್. ಚಂದ್ರಶೇಖರ್ ಬಾಬು, ಎಂ.ಎಲ್. ಗಂಗರಾಜು, ಎಂ.ಆರ್. ಜಗನ್ನಾಥ, ಕೆ. ನಾರಾಯಣ್, ಡಯಟ್ ಪ್ರಾಂಶುಪಾಲ ರಾಮಕೃಷ್ಣಯ್ಯ, ಶಿಕ್ಷಕರಾದ ಬಸವರಾಜು, ಶಶಿಕುಮಾರ್, ಚನ್ನಬಸವ, ಮೀನಾಕ್ಷಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.