ADVERTISEMENT

ಸ್ವಚ್ಛತೆ ಕಾಪಾಡಿದರೆ ಅಪೌಷ್ಟಿಕತೆ ದೂರ

ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ; ಡಿಎಚ್‌ಒ ಸಲಹೆ

​ಪ್ರಜಾವಾಣಿ ವಾರ್ತೆ
Published 10 ಫೆಬ್ರುವರಿ 2020, 15:47 IST
Last Updated 10 ಫೆಬ್ರುವರಿ 2020, 15:47 IST
ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಆಚರಿಸಲಾಯಿತು.
ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಆಚರಿಸಲಾಯಿತು.   

ತುಮಕೂರು: ಜಂತುಹುಳು ನಿವಾರಕ ಮಾತ್ರೆಗಳ ಜತೆಗೆ ಪರಿಸರ ಸ್ವಚ್ಛತೆ, ವೈಯುಕ್ತಿಕ ಶುಚಿತ್ವ, ಶುದ್ಧನೀರು, ಶುದ್ಧ ಆಹಾರ ಸೇವನೆ ಮತ್ತು ಶೌಚಾಲಯಗಳ ಬಳಕೆ ಕಡ್ಡಾಯವಾದರೆ ಜಂತುಹುಳುವಿನಿಂದ ಉಂಟಾಗುವ ಅಪೌಷ್ಟಿಕತೆ ಹೋಗಲಾಡಿಸಬಹುದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಬಿ.ಆರ್.ಚಂದ್ರಿಕಾ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ನಗರದ ಹೊರಪೇಟೆಯ ಬಾಪೂಜಿ ವಿದ್ಯಾಸಂಸ್ಥೆಯಲ್ಲಿ ಸೋಮವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.

ಆರ್.ಸಿ.ಎಚ್ ಅಧಿಕಾರಿ ಡಾ.ಕೇಶವರಾಜ್, ‘ಭಾರತದಲ್ಲಿ ಸುಮಾರು 1 ರಿಂದ 19 ವರ್ಷದ ವಯಸ್ಸಿನ 2 ಕೋಟಿ ಮಕ್ಕಳಿಗೆ ಮಣ್ಣಿನಿಂದ ಹರಡುವ ಜಂತುಹುಳು ಬಾಧೆಯಿಂದ ಅಪಾಯಕಾರಿ ಸಮಸ್ಯೆಗಳಾದ ರಕ್ತಹೀನತೆ, ಪೌಷ್ಟಿಕಾಂಶದ ಕೊರತೆ, ತೂಕ ಕಡಿಮೆಯಾಗುವುದು ಮುಂತಾದ ಪರಿಣಾಮಗಳಾಗುತ್ತವೆ’ ಎಂದರು.

ADVERTISEMENT

ಜಿಲ್ಲೆಯಲ್ಲಿ 8,15,557 ಮಕ್ಕಳಿಗೆ ಜಂತುಹುಳು ನಿವಾರಕ ಮಾತ್ರೆಗಳನ್ನು ನೀಡಲಾಗಿದೆ. ಅಂಗನವಾಡಿ ಕೇಂದ್ರ, ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಉಚಿತವಾಗಿ ನೀಡಲಾಗುತ್ತದೆ ಎಂದು ತಿಳಿಸಿದರು.

ಜಿಲ್ಲಾಸ್ಪತ್ರೆ ಶಸ್ತ್ರಚಿಕಿತ್ಸಕ ಡಾ.ಟಿ.ಎ.ವೀರಭದ್ರಯ್ಯ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ನಟರಾಜ್, ಡಿಡಿಪಿಐ ಎಂ.ಆರ್.ಕಾಮಾಕ್ಷಿ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಎನ್.ಹನುಮಂತರಾಯ, ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ರಂಗಧಾಮಪ್ಪ, ತಾಲ್ಲೂಕು ಆರೋಗ್ಯಾಧಿಕಾರಿ ಡಾ.ಶರತ್‍ಚಂದ್ರ, ಸಿಡಿಪಿಒ ಶ್ರೀಧರ್, ಉಪ ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ರಾಜಣ್ಣ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.