ಶಿರಾ: ಜೆಡಿಎಸ್ ಬಿಜೆಪಿಯ ಕೈಗೊಂಬೆಯಾಗಿದ್ದು, ಉಪ ಚುನಾವಣೆಯಲ್ಲಿ ಎರಡೂ ಪಕ್ಷಗಳು ಒಳ ಒಪ್ಪಂದ ಮಾಡಿಕೊಂಡಿವೆ ಎಂದು ಕಾಂಗ್ರೆಸ್ ಮುಖಂಡ ಎಚ್.ಎಂ. ರೇವಣ್ಣ ಹಾಗೂ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಆರೋಪಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಬಿಜೆಪಿ ಹಣದಿಂದ ಮತದಾರರನ್ನು ಖರೀದಿಸಿ ಚುನಾವಣೆ ಗೆಲ್ಲಲು ಹೊರಟಿದೆ. ಇವರಿಂದ ಯಾವ ರೀತಿಯ ಅಭಿವೃದ್ಧಿ ನಿರೀಕ್ಷಿಸಲು ಸಾಧ್ಯ’ ಎಂದು ಪ್ರಶ್ನಿಸಿದರು.
‘ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರು ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ. ಅವರೇ ಮುಖ್ಯಮಂತ್ರಿ ಎನ್ನುವಂತೆ ವರ್ತಿಸುತ್ತಿದ್ದಾರೆ’ ಎಂದು
ದೂರಿದರು.
ಸ್ನೇಹಕ್ಕಿಂತ ಪಕ್ಷ ಮುಖ್ಯ: ಬಿಜೆಪಿ ಅಭ್ಯರ್ಥಿ ಡಾ.ಸಿ.ಎಂ.ರಾಜೇಶ್ ಗೌಡ ಅವರ ತಂದೆ ಕಾಂಗ್ರೆಸ್ನಲ್ಲಿ ಇದ್ದಾಗಿನಿಂದಲೂ ರಾಜೇಶ್ ಗೌಡ ಹಾಗೂ ನಾನು ಸ್ನೇಹಿತರು. ಅವರೊಂದಿಗೆ ಈಗ ಯಾವುದೇ ವ್ಯವಹಾರವಿಲ್ಲ. ಸ್ನೇಹಕ್ಕಾಗಿ ಪಕ್ಷದ ತತ್ವ, ಸಿದ್ಧಾಂತ ಬಿಡುವ
ಪ್ರಶ್ನೆಯೇ ಇಲ್ಲ. ನಮಗೆ ಪಕ್ಷ ನಿಷ್ಠೆಯೇ ಮುಖ್ಯ. ಪಕ್ಷದ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರನ್ನು ಗೆಲ್ಲಿಸಲು ಪ್ರಾಮಾಣಿಕ ಪ್ರಯತ್ನ
ಮಾಡುವುದಾಗಿ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯ ಗೋಷ್ಠಿಯಲ್ಲಿ ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.