ಚೇಳೂರು: ‘ತಾಲ್ಲೂಕಿನಲ್ಲಿನ ಜಲ ಜೀವನ್ ಮೀಷನ್ ಕಾಮಗಾರಿ ಕಳೆಪೆಯಾಗಿರುವುದು ಗಮನಕ್ಕೆ ಬಂದಿದೆ. ಆಗಸ್ಟ್ 21ರಂದು ನಡೆಯುವ ಕೆಡಿಪಿ ಸಭೆಯಲ್ಲಿ ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆದೇಶಿಸಲಾಗುವುದು’ ಶಾಸಕ ಎಸ್.ಆರ್. ಶ್ರೀನಿವಾಸ್ ಭರವಸೆ ನೀಡಿದರು.
ಗ್ರಾಮದಲ್ಲಿ ಶನಿವಾರಸರ್ಕಾರಿ ಪದವಿ ಪೂರ್ವ ಕಾಲೇಜಿನ ಆವರಣದಲ್ಲಿ ಹೆಚ್ಚುವರಿ ಕೊಠಡಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ಕೆಲವೆಡೆ ಜಲಜೀವನ್ ಯೋಜನೆ ಪೂರ್ಣಗೊಂಡಿಲ್ಲ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಲು ಸೂಚಿಸುತ್ತೇನೆ. ಸರ್ಕಾರದಿಂದ ಶಾಲಾ ಕಾಲೇಜುಗಳಿಗೆ ಮೂಲ ಸೌಕರ್ಯಕ್ಕಾಗಿ ಸಾಕಷ್ಟು ಅನುದಾನ ಬಿಡುಗಡೆಯಾಗಿದ್ದು, ಎಲ್ಲ ಶಾಲಾ ಕಾಲೇಜುಗಳಿಗೆ ಗುಣಮಟ್ಟದ ಕಟ್ಟಡ ಮತ್ತು ಮೂಲ ಸೌಕರ್ಯಗಳನ್ನು ಪೂರೈಸುವ ಭರವಸೆ ನೀಡಿದರು.
ಬಹುತೇಕ ಕಡೆಗಳಲ್ಲಿ ರಸ್ತೆಯಲ್ಲಿ ಗುಂಡಿ ನಿರ್ಮಾಣವಾಗಿದ್ದು ಇದರ ಪೂರ್ವಭಾವಿಯಾಗಿ ಶಿರಾ ನಲ್ಲಿಗೆರೆ ರಸ್ತೆಗೆ ₹30 ಕೋಟಿ, ಹೊಸಕೆರೆ, ಚೇಳೂರು ರಸ್ತೆ ₹5 ಕೋಟಿ ಹಾಗೂ ಎಂಎಂಎ ಕಾವಲ್ ರಸ್ತೆಗೆ ₹10 ಕೋಟಿ ವೆಚ್ಚದಲ್ಲಿ ಸುಸಜ್ಜಿತ ರಸ್ತೆ ನಿರ್ಮಾಣಕ್ಕಾಗಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ತಿಳಿಸಿದರು.
ಬಿದರೆಹಳ್ಳ ಕಾವಲ್ನಲ್ಲಿ ನಿರ್ಮಾಣವಾಗುತ್ತಿರುವ ಎಚ್ಎಎಲ್ ಘಟಕಕ್ಕೆ ಪದೇ ಪದೇ ರೈತರ ಜಮೀನು ಬಿಟ್ಟುಕೊಡುವುದಿಲ್ಲ. ಈ ಭಾಗದ ರೈತರು ಸಾಕಷ್ಟು ಜಮೀನು ಬಿಟ್ಟುಕೊಟ್ಟಿದ್ದಾರೆ. ಪಿತ್ರಾರ್ಜಿತ ಅಸ್ತಿಯನ್ನು ಯಾವುದೇ ಕಾರಣಕ್ಕೂ ಕೊಡುವುದಿಲ್ಲ ಎಂದು ಶಾಸಕರು ತಿಳಿಸಿದ್ದರು.
ಗ್ರಾಮ ಪಂಚಾಯಿತಿ ಅಧ್ಯಕ್ಷೆ ಜಯಮ್ಮ, ಉಪಾಧ್ಯಕ್ಷ ಧನಂಜಯ, ಸದಸ್ಯರಾದ ಪದ್ಮ, ಎಂಜಿನಿಯರ್ ಗೋಪಿನಾಥ್, ಗುತ್ತಿಗೆದಾರ ಪಿ.ಆರ್. ನವೀನ್ ಕುಮಾರ್, ಗ್ರಾಮಸ್ಥರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.