ADVERTISEMENT

ಆಲಿ ಬಾಬಾ ಮತ್ತು 40 ಕಳ್ಳರ ಸರ್ಕಾರ: ಬಿಜೆಪಿ ವಿರುದ್ಧ ಸಿದ್ದರಾಮಯ್ಯ ಟೀಕೆ

​ಪ್ರಜಾವಾಣಿ ವಾರ್ತೆ
Published 25 ಜನವರಿ 2023, 5:10 IST
Last Updated 25 ಜನವರಿ 2023, 5:10 IST
ಸಿದ್ದರಾಮಯ್ಯ
ಸಿದ್ದರಾಮಯ್ಯ    

ತುಮಕೂರು: ಬಹಳ ದಿನ ಸುಳ್ಳು ಕೇಳಿಕೊಂಡು, ಭ್ರಷ್ಟಾಚಾರ ಮಾಡಿಕೊಂಡು ಬದುಕಲು ಬಿಜೆಪಿಯವರಿಗೆ ಸಾಧ್ಯವಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಬಿಜೆಪಿಯವರನ್ನು ಟೀಕಿಸಿದರು.

ನಗರದ ಗಾಜಿನ ಮನೆಯಲ್ಲಿ ಮಂಗಳವಾರ ಕಾಂಗ್ರೆಸ್ ‘ಪ್ರಜಾ ಧ್ವನಿ’ ಬಸ್ ಯಾತ್ರೆ ಅಂಗವಾಗಿ ಹಮ್ಮಿಕೊಂಡಿದ್ದ ಕಾರ್ಯಕರ್ತರ ಸಮಾವೇಶದಲ್ಲಿ ಅವರು ಮಾತನಾಡಿದರು.

‘ವಿರೋಧ ಪಕ್ಷದಲ್ಲಿ ಇದ್ದಾಗ ಬಿಜೆಪಿಯವರು ಭ್ರಷ್ಟಾಚಾರದ ಬಗ್ಗೆ ಬಾಯಿ ಬಿಡಲಿಲ್ಲ. ಮೂರೂವರೆ ವರ್ಷಗಳಿಂದ ಅಧಿಕಾರದಲ್ಲಿ ಇದ್ದಾಗಲೂ ಚಕಾರ ಎತ್ತಲಿಲ್ಲ. ನಾವು ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ಶೇ 40ರಷ್ಟು ಕಮಿಷನ್ ಬಗ್ಗೆ ಹೇಳುತ್ತಿದ್ದಂತೆ ನಮ್ಮ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ. ಕಳ್ಳ ಎಂದರೆ ಬಿಜೆಪಿಯವರಿಗೆ ಸಿಟ್ಟು ಬರುತ್ತದೆ’ ಎಂದರು.

ADVERTISEMENT

ಇದಕ್ಕೂ ಮುನ್ನ ವಿಚಾರ ಪ್ರಸ್ತಾಪಿಸಿದ ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ.ಪರಮೇಶ್ವರ, ‘ಬಿಜೆಪಿಯವರಿಗೆ ಬದ್ಧತೆ ಇದ್ದರೆ ತನಿಖೆಯ ಸವಾಲು ಸ್ವೀಕರಿಸಬೇಕು. ಕಾಂಗ್ರೆಸ್ ಮತ್ತು ಬಿಜೆಪಿ ಸರ್ಕಾರದ ಅವಧಿಯಲ್ಲಿಯ ಎಲ್ಲಾ ಹಗರಣಗಳ ಬಗ್ಗೆ ತನಿಖೆ ನಡೆಸಬೇಕು’ ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ‘ಆಲಿ ಬಾಬಾ ಮತ್ತು 40 ಕಳ್ಳರಂತೆ’ ಶೇ 40ರಷ್ಟು ಕಮಿಷನ್ ಪಡೆದು ಹಣ ಹಂಚಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.