ADVERTISEMENT

ಕೆಂಪಣ್ಣ ಗುತ್ತಿಗೆದಾರರೇ ಅಲ್ಲ: ಸಚಿವ ಬೈರತಿ ಬಸವರಾಜ

​ಪ್ರಜಾವಾಣಿ ವಾರ್ತೆ
Published 3 ಅಕ್ಟೋಬರ್ 2022, 9:10 IST
Last Updated 3 ಅಕ್ಟೋಬರ್ 2022, 9:10 IST
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ
ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ   

ತುಮಕೂರು: ರಾಜ್ಯ ಸರ್ಕಾರದ ಮೇಲೆ ಶೇ 40ರಷ್ಟು ಕಮಿಷನ್ ಆರೋಪ ಮಾಡುತ್ತಿರುವ ಕೆಂಪಣ್ಣ ಗುತ್ತಿಗೆದಾರರೇ ಅಲ್ಲ.‌ ಅವರು ಗುತ್ತಿಗೆಯ ಪರವಾನಗಿಯನ್ನೇ ಪಡೆದಿಲ್ಲ. ಅವರನ್ನು ಮುಂದೆ ಬಿಟ್ಟು ಹಿಂದಿನಿಂದ ಪಿತೂರಿ ಮಾಡಲಾಗುತ್ತಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಇಲ್ಲಿ ಸೋಮವಾರ ಆರೋಪಿಸಿದರು.

ಕಾಂಗ್ರೆಸ್‌ ನಾಯಕ ರಾಹುಲ್‌ಗಾಂಧಿ ಭಾರತ ಜೋಡೊ ಮಾಡಲು ಬಂದಿದ್ದಾರೋ ಅಥವಾ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರನ್ನು ಜೋಡಿಸಲು ಬಂದಿದ್ದಾರೋ ಗೊತ್ತಿಲ್ಲ. ರಾಜ್ಯ ಸರ್ಕಾರವನ್ನು ಶೇ 40ರಷ್ಟು ಕಮಿಷನ್‌ ಸರ್ಕಾರ ಎಂದು ಟೀಕೆ ಮಾಡುತ್ತಿದ್ದಾರೆ. ರಾಹುಲ್, ಅವರ ತಾಯಿ ಸೋನಿಯಾ ಗಾಂಧಿ ಜಾಮೀನಿನ ಮೇಲೆ ಹೊರಗಡೆ ಇದ್ದಾರೆ. ಇದನ್ನು ಅರ್ಥ ಮಾಡಿಕೊಳ್ಳಬೇಕು. ಅಧಿಕಾರ ದಾಹದಿಂದ ಕಾಂಗ್ರೆಸ್ ಮುಖಂಡರು ಹಲವು ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ದೂರಿದರು.

ಕೇಂದ್ರ ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಬಿಜೆಪಿ ನಾಯಕರು ರಾಷ್ಟ್ರ ಕಟ್ಟುವ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಪಿಎಫ್ಐ ಸಂಘಟನೆ ನಿಷೇಧ ಮಾಡುವ ಮೂಲಕ ದಿಟ್ಟ ನಿರ್ಧಾರ ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಜನಪರ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಆಡಳಿತವನ್ನು ಸಮರ್ಥಿಸಿಕೊಂಡರು.

ADVERTISEMENT

ಹಿಂದುಳಿದ ವರ್ಗಗಳ ಜಾಗೃತಿ ಸಮಾವೇಶವು ಕಲಬುರಗಿಯಲ್ಲಿ ಅ. 30ರಂದು ನಡೆಯಲಿದೆ. ರಾಜ್ಯ, ರಾಷ್ಟ್ರೀಯ ನಾಯಕರು ಭಾಗವಹಿಸಲಿದ್ದಾರೆ. ಸುಮಾರು 10 ಲಕ್ಷ ಜನ ಸೇರುವ ನಿರೀಕ್ಷೆಯಿದೆ. ಮುಂದಿನ ದಿನಗಳಲ್ಲಿ ಮತ್ತೆ ಪಕ್ಷವನ್ನು ಅಧಿಕಾರಕ್ಕೆ ತರಲು ಎಲ್ಲರೂ ಶ್ರಮಿಸುತ್ತಿದ್ದಾರೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.