ತುಮಕೂರು: ಮುಖ್ಯಮಂತ್ರಿ ಬದಲಾವಣೆಗೆ ಬಿಜೆಪಿ ವಲಯದಲ್ಲಿ ಒತ್ತಡ ಹೆಚ್ಚುತ್ತಿರುವ ಸಮಯದಲ್ಲೇ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಅವರನ್ನು ಶುಕ್ರವಾರ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿ ಗೌಪ್ಯ ಮಾತುಕತೆ ನಡೆಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣ ಸಂಬಂಧ ಪ್ರಗತಿ ಪರಿಶೀಲನೆ ನಡೆಸಿದ ನಂತರ ನೇರವಾಗಿ ಒಬ್ಬರೇ ಮಠಕ್ಕೆ ತೆರಳಿದರು. ತೆರಳುವ ಮುನ್ನ ಜತೆಯಲ್ಲಿ ಇದ್ದ ಉಪಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥನಾರಾಯಣ, ಜಿಲ್ಲಾ ಉಸ್ತುವಾರಿ ಸಚಿವ ಜೆ.ಸಿ. ಮಾಧುಸ್ವಾಮಿ ಅವರನ್ನೂ ಕರೆದುಕೊಂಡು ಹೋಗಲಿಲ್ಲ. ಸ್ವಾಮೀಜಿ ಜೊತೆ ಸುಮಾರು 20 ನಿಮಿಷ ಚರ್ಚೆ ನಡೆಯಿತು.
ನಿಗದಿಯಂತೆ ಜಿಲ್ಲಾ ಪಂಚಾಯಿತಿಯಲ್ಲಿ ಪ್ರಗತಿ ಪರಿಶೀಲನೆ ಸಭೆ ಬಳಿಕ ಮಠಕ್ಕೆ ಭೇಟಿ ನೀಡಬೇಕಿತ್ತು. ಸಭೆ ನಡೆಯುವಾಗ ಮುಖ್ಯಮಂತ್ರಿ ಮಠಕ್ಕೆ ಹೋಗುವುದಿಲ್ಲ. ನೇರ ಬೆಂಗಳೂರಿಗೆ ತೆರಳಲಿದ್ದಾರೆ ಎಂದು ಮಾಧ್ಯಮದವರಿಗೆ ತಿಳಿಸಲಾಯಿತು.
ಮಾಧ್ಯಮದವರು ಮಠದ ಬಳಿ ಬರುವುದನ್ನು ತಪ್ಪಿಸಿ ಯಡಿಯೂರಪ್ಪ ಅವರೊಬ್ಬರೇ ಸ್ವಾಮೀಜಿಯನ್ನು ಭೇಟಿಯಾಗಿರುವುದು ಕುತೂಹಲ ಮೂಡಿಸಿದೆ. ಭೇಟಿಯ ಬಳಿಕ ಬೆಂಗಳೂರಿಗೆ ಹಿಂದಿರುಗಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.