ತಿಪಟೂರು: ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆ ನಡೆಯಿತು.
ಶಾಸಕ ಕೆ.ಷಡಕ್ಷರಿ ಮಾತನಾಡಿ, ಸರ್ಕಾರದ ಹಲವು ಇಲಾಖೆಗಳು ಬಾಡಿಗೆ ಕಟ್ಟಡದಲ್ಲಿ ಕರ್ತವ್ಯ ನಿರ್ವಹಿಸುತ್ತಿವೆ. ಸ್ಥಳಾಂತರಿಸುವಂತೆ ಹಲವು ಬಾರಿ ಸೂಚಿಸಿದ್ದರೂ ಪ್ರಯೋಜನವಾಗಿಲ್ಲ. ಹತ್ತು ದಿನದೊಳಗೆ ಬಾಡಿಗೆ ಕಟ್ಟಡದಲ್ಲಿರುವ ಎಲ್ಲ ಇಲಾಖೆಗಳು ಸ್ಥಳಾಂತರಗೊಳ್ಳಬೇಕು ಎಂದು ತಾಕೀತು ಮಾಡಿದರು.
ಗುಣಮಟ್ಟದ ಶಿಕ್ಷಣ ನೀಡದಿದ್ದರೆ ಸರ್ಕಾರಿ, ಅನುದಾನಿತ ಶಾಲೆಗಳನ್ನು ಮುಚ್ಚಬೇಕಾಗುತ್ತದೆ. ಪೋಷಕರ ಹಾಗೂ ಮುಖ್ಯಶಿಕ್ಷಕರ ಸಭೆಗಳನ್ನು ನಡೆಸಿ ತರಬೇತಿ ನೀಡಬೇಕು. ಶಿಕ್ಷಕರನ್ನು ಶಾಲಾ ಅವಧಿಯಲ್ಲಿ ಅನ್ಯ ಕೆಲಸಗಳಿಗೆ ನಿಯೋಜಿಸಬಾರದು ಎಂದು ಕ್ಷೇತ್ರಶಿಕ್ಷಣಾಧಿಕಾರಿ ಚಂದ್ರಯ್ಯ ಅವರಿಗೆ ಸೂಚಿಸಿದರು.
ಸಂಚಾರ ನಿಯಮ ಉಲ್ಲಂಘಿಸುವವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು. ಈ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.
ಮುಂದಿನ ಹತ್ತು ವರ್ಷಗಳಲ್ಲಿ ಆಹಾರದ ಕೊರತೆ ಬರಲಿದ್ದು ಹೆಚ್ಚು ಹೆಚ್ಚು ಉತ್ಪಾದನೆ ಮಾಡುವ ತಳಿಗಳ ಬಗ್ಗೆ ಚಿಂತಿಸಬೇಕಿದೆ. ತಾಲ್ಲೂಕಿನ ರೈತರಿಗೆ ಬಿತ್ತನೆ ಬೀಜ ಹಾಗೂ ರಸಗೊಬ್ಬರ ಕೊರತೆ ಬರದಂತೆ ನಿಗಾವಹಿಸಬೇಕು. ರೈತರಿಗೆ ಸಿರಿಧಾನ್ಯ ಹಾಗೂ ಸಮಗ್ರ ಕೃಷಿ ಚಟುವಟಿಕೆಗಳಿಗೆ ಪ್ರೋತ್ಸಾಹಧನ ನೀಡುವುದರ ಬಗ್ಗೆ ಮತ್ತು ರಾಗಿ ಜೊತೆ ಹರಳು, ಹುಚ್ಚೆಳ್ಳು, ಎಳ್ಳು ಕಾಳು, ತರಕಾರಿಗಳ ಬೆಳೆಗಳಿಗೆ ಉತ್ತೇಜನ ನೀಡಬೇಕು ಎಂದರು.
ಸಭೆಯಲ್ಲಿ ತಾಪಂ ಆಡಳಿತಾಧಿಕಾರಿ ಎಚ್. ಹುಲಿರಾಜ್, ಕಾರ್ಯನಿರ್ವಹಣಾಧಿಕಾರಿ ಎಚ್.ಎಂ.ಸುದರ್ಶನ್, ತಹಶೀಲ್ದಾರ್ ಮೋಹನ್ಕುಮಾರ್, ನಗರಸಭೆ ಅಧ್ಯಕ್ಷೆ ಯಮುನಾ ಧರಣೇಶ್, ಪಂಚ ಗ್ಯಾರಂಟಿ ತಾಲ್ಲೂಕು ಅದ್ಯಕ್ಷ ಕಾಂತರಾಜು, ಕೃಷಿಕ ಸಮಾಜದ ತಾಲ್ಲೂಕು ಅಧ್ಯಕ್ಷ ಯೋಗೀಶ್ ಹಾಗೂ ಅಧಿಕಾರಿಗಳು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.