ಕೊರಟಗೆರೆ: ಎತ್ತಿನಹೊಳೆ ಯೋಜನೆಯಡಿ ತಾಲ್ಲೂಕಿನ 62 ಪ್ರಮುಖ ಕೆರೆಗಳಿಗೆ ನೀರು ಹರಿಸುವ ಕಾಮಗಾರಿಗೆ ಏಪ್ರಿಲ್ 19ರಂದು ಭೂಮಿಪೂಜೆ ಮಾಡಲಾಗುವುದು ಎಂದು ಗೃಹಸಚಿವ ಜಿ.ಪರಮೇಶ್ವರ ತಿಳಿಸಿದರು.
ತಾಲ್ಲೂಕಿನ ಗೊರವನಹಳ್ಳಿಯಲ್ಲಿ ಮಂಗಳವಾರ ಎತ್ತಿನಹೊಳೆ ಯೋಜನೆಯಡಿ ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಗೆ ಶಂಕುಸ್ಥಾಪನೆ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.
ತಾಲ್ಲೂಕಿನ 62 ಕೆರೆಗೆ ನೀರು ತುಂಬಿಸುವ ಕಾಮಗಾರಿಗೆ ಸರ್ಕಾರದಿಂದ ₹288 ಕೋಟಿ ಅನುಮೋದನೆ ದೊರೆತಿದೆ. ಶನಿವಾರ ಭೂಮಿಪೂಜೆ ನಡೆಯಲಿದೆ. ಅದೇ ದಿನ ₹453 ಕೋಟಿ ವೆಚ್ಚದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿಪೂಜೆ ಹಾಗೂ ಚಾಲನೆ ನೀಡಲಾಗುವುದು ಎಂದು ಹೇಳಿದರು.
ಸರ್ಕಾರದಲ್ಲಿ ದುಡ್ಡಿಲ್ಲ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗುತ್ತಿದೆ. ಆದರೆ ಈ ವರ್ಷದ ಆಯವ್ಯದಲ್ಲಿ ಕಳೆದ ವರ್ಷಕ್ಕಿಂತಲೂ ಹೆಚ್ಚು ಹಣ ರಾಜ್ಯದ ಅಭಿವೃದ್ಧಿಗೆ ಸರ್ಕಾರ ಮೀಸಲಿರಿಸಿದೆ. ಅದರಲ್ಲಿ ನೀರಾವರಿ ಯೋಜನೆಗೆ ಆದ್ಯತೆ ನೀಡಲಾಗಿದೆ. ಸರ್ಕಾರ ಅಧಿಕಾರಕ್ಕೆ ಬರುವಾಗ ಪ್ರಮಾಣ ಮಾಡಿದಂತೆ ಈ ಅವಧಿಯಲ್ಲಿ ಎತ್ತಿನಹೊಳೆ ಯೋಜನೆಯನ್ನು ಸಂಪೂರ್ಣ ಕಾರ್ಯಗತ ಮಾಡುತ್ತೇವೆ. ಇದು ಸರ್ಕಾರದ ಬದ್ಧತೆ ಎಂದರು.
ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಕಾರ್ಯದರ್ಶಿ ಸಂಜೀವಪ್ಪ, ತಹಶೀಲ್ದಾರ್ ಕೆ.ಮಂಜುನಾಥ್, ತಾ.ಪಂ. ಕಾರ್ಯನಿರ್ವಹಣಾಧಿಕಾರಿ ಅಪೂರ್ವ ಸಿ.ಅನಂತರಾಮು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮೆಡಿಕಲ್ ಅಶ್ವತ್ಥ್, ಅರಕೆರೆ ಶಂಕರ್ ಹಾಜರಿದ್ದರು.
ಬಫರ್ ಡ್ಯಾಂ: ಪುನರ್ ಪರಿಶೀಲನೆಗೆ ಒತ್ತಾಯ ಎತ್ತಿನಹೊಳೆ ಯೋಜನೆ ಬಫರ್ ಡ್ಯಾಂ ನಿರ್ಮಾಣ ತಾಲ್ಲೂಕಿನ ಬೈರಗೊಂಡ್ಲು ಗ್ರಾಮದ ಬಳಿ ಮಾಡಲು ಯೋಜಿಸಲಾಗಿತ್ತು. ಆದರೆ ಹಿಂದಿನ ಬಿಜೆಪಿ ಸರ್ಕಾರ ಅದನ್ನು ಬದಲಾಯಿಸಿ ದೊಡ್ಡಬಳ್ಳಾಪುರ ತಾಲ್ಲೂಕು ವ್ಯಾಪ್ತಿಯಲ್ಲಿ ಎರಡು ಕಡೆ ಮಾಡಲು ತೀರ್ಮಾನಿಸಿದೆ. ಇದರ ಪುನರ್ ಪರಿಶೀಲನೆಗೆ ಒತ್ತಾಯವಿದೆ. ಸದ್ಯ ನಾವು ಯಾವುದೇ ತೀರ್ಮಾನ ಮಾಡಿಲ್ಲ. ಹಳೆ ತೀರ್ಮಾನ ಹಾಗೆಯೇ ಇದೆ. ಮುಂದೆ ನೋಡಣ ಎಂದು ಜಿ.ಪರಮೇಶ್ವರ ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.