ತುಮಕೂರು: ಮೇಕೆದಾಟು ಯೋಜನೆ ಜಾರಿಗಾಗಿ ನಡೆಯುತ್ತಿರುವ ‘ಮೇಕೆದಾಟು ನಮ್ಮ ನೀರು, ನಮ್ಮ ಹಕ್ಕು’ ಹೋರಾಟದಲ್ಲಿ ಎಲ್ಲರು ಭಾಗವಹಿಸಿ, ಸರ್ಕಾರದ ಗಮನ ಸೆಳೆಯುವ ಕೆಲಸ ಮಾಡೋಣ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ನಗರದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ವಿಧಾನ ಪರಿಷತ್ ಚುನಾವಣೆಯಲ್ಲಿ ನಮಗೆ ಉತ್ತಮ ಫಲಿತಾಂಶ ಬಂದಿದೆ. ದೇಶದಲ್ಲೂ ಕಾಂಗ್ರೆಸ್ ಪರವಾದ ಅಲೆ ಆರಂಭವಾಗಿದೆ. ಇದು ಮುಂದಿನ ವಿಧಾನ ಸಭೆ ಗೆಲ್ಲಲು ನೆರವಾಗಲಿದೆ. ಎಲ್ಲರೂ ಶ್ರಮವಹಿಸಿ ಕಾರ್ಯನಿರ್ವಹಿಸಬೇಕು ಎಂದರು.
ಹೋರಾಟಕ್ಕೆ ಮತ್ತೊಂದು ಹೆಸರೇ ಕಾಂಗ್ರೆಸ್. ಶಾಸಕರಾಗಲು, ಜನಪ್ರತಿನಿಧಿಗಳಾಗುವ ಆಸೆ ಇರುವವರು ಉತ್ತಮ ಸ್ಪಂದನೆಯ ಮೂಲಕ ಜನರ ಹೃದಯ ಗೆಲ್ಲುವ ಕೆಲಸ ಮಾಡಬೇಕು. ಜಿಲ್ಲೆಯಿಂದಲೂ ಪಾದಯಾತ್ರೆಗೆ ಜನರು ಆಗಮಿಸಬೇಕು. ಶಾಸಕರು, ಮಾಜಿ ಶಾಸಕರು, ಮುಖಂಡರು ಹೋರಾಟದಲ್ಲಿ ಭಾಗವಹಿಸುವ ಮೂಲಕ ಇತಿಹಾಸದಲ್ಲಿ ಸೇರಿಕೊಳ್ಳಬೇಕು. ಮೇಕೆದಾಟು ಯೋಜನೆ ಕನ್ನಡಿಗರಾದ ನಮ್ಮೆಲ್ಲರ ಕನಸಾಗಿದೆ ಎಂದು ತಿಳಿಸಿದರು.
ನಗರದ ಬಿ.ಎಚ್.ರಸ್ತೆಯಲ್ಲಿದ್ದ ಕಾಂಗ್ರೆಸ್ ಪಕ್ಷದ ಕಚೇರಿಯನ್ನು ಮಾಲೀಕರು ಹಿಂಪಡೆದಿದ್ದು, ಸಾಕಷ್ಟು ವರ್ಷ ಕಾಂಗ್ರೆಸ್ ಅಧಿಕಾರ ನಡೆಸಿದೆ. ಆದರೂ, ನಗರದಲ್ಲಿ ಕಾಂಗ್ರೆಸ್ ಕಚೇರಿ ಇಲ್ಲದಿರುವುದು ಬೇಸರ ತರಿಸುವಂತಹದು. ಕಾಂಗ್ರೆಸ್ ಕಚೇರಿ ಎಂಬುದು ದೇವಾಲಯವಿದ್ದಂತೆ. ಎಲ್ಲ ಮುಖಂಡರು ಸೇರಿ ಜಿಲ್ಲಾ ಕೇಂದ್ರದಲ್ಲಿ ಒಂದು ಕಚೇರಿ ನಿರ್ಮಿಸಬೇಕು ಎಂದು ಹೇಳಿದರು.
ಶಾಸಕ ಡಾ.ಜಿ.ಪರಮೇಶ್ವರ್, ‘ಕಾಂಗ್ರೆಸ್ ಪಕ್ಷದಲ್ಲಿ ಮಹಿಳಾ ಕಾರ್ಯಕರ್ತರ ಪಾಲು ದೊಡ್ಡದಿದೆ. ಆದರೆ ಸಭೆಯಲ್ಲಿ ಮಹಿಳಾ ಕಾರ್ಯಕರ್ತರ ಸಂಖ್ಯೆ ಕಡಿಮೆಯಿದೆ. ದೇಶದಲ್ಲಿ ಶೇ 50ಕ್ಕಿಂತ ಹೆಚ್ಚಿನ ಸಂಖ್ಯೆಯಲ್ಲಿರುವ ಮಹಿಳೆಯರು ಪಕ್ಷದ ಚಟುವಟಿಕೆಯಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳಬೇಕು’ ಎಂದರು.
ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಮುಖಂಡರಾದ ಟಿ.ಬಿ.ಜಯಚಂದ್ರ, ಕೆ.ಎನ್.ರಾಜಣ್ಣ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.