ADVERTISEMENT

ಕುಣಿಗಲ್ | ಭಾರತ ಶಕ್ತಿಶಾಲಿಯಾಗಿದೆ; ಹೆದರುವ ಅಗತ್ಯವಿಲ್ಲ: ಡಿ.ಕೆ.ಸುರೇಶ್

​ಪ್ರಜಾವಾಣಿ ವಾರ್ತೆ
Published 10 ಮೇ 2025, 13:19 IST
Last Updated 10 ಮೇ 2025, 13:19 IST
ಕುಣಿಗಲ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾಜಿ ಸಂಸದ ಡಿ.ಕೆ.ಸುರೇಶ್ ಉದ್ಘಾಟಿಸಿದರು
ಕುಣಿಗಲ್ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಮಾಜಿ ಸಂಸದ ಡಿ.ಕೆ.ಸುರೇಶ್ ಉದ್ಘಾಟಿಸಿದರು   

ಕುಣಿಗಲ್: ಭಾರತ ಶಕ್ತಿಶಾಲಿಯಾಗಿದೆ, ಯಾರು ಹೆದರುವ ಅಗತ್ಯವಿಲ್ಲ, ಪಾಕಿಸ್ತಾನದ ವಿರುದ್ಧ ಕೇಂದ್ರ ಸರ್ಕಾರ, ಸೈನ್ಯ ತೆಗೆದುಕೊಳ್ಳುವ ನಿರ್ಧಾರಗಳನ್ನು ಕಾಂಗ್ರೆಸ್ ಸೇರಿದಂತೆ ಭಾರತೀಯರೆಲ್ಲರೂ ಬೆಂಬಲಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿದರು.

ಪಟ್ಟಣದ ಜಿಕೆಬಿಎಂಎಸ್ ಮೈದಾನದಲ್ಲಿ ಶನಿವಾರ ತಾಲ್ಲೂಕು ಕಾಂಗ್ರೆಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ತ್ರಿರಂಗಾ ಮತ್ತು ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಮಾತನಾಡಿದರು.

ಅಂದು ಉಕ್ಕಿನ ಮಹಿಳೆ ಇಂದಿರಾಗಾಂಧಿ ಪಾಕಿಸ್ತಾನಕ್ಕೆ ತಕ್ಕ ಪಾಠಕಲಿಸಿದ್ದರು. ಇಂದು ಮತ್ತೊಮ್ಮೆ ನರೇಂದ್ರ ಮೋದಿ ಪಾಠ ಕಲಿಸುತ್ತಿದ್ದಾರೆ. ಭಾರತೀಯರೆಲ್ಲೂ ಬೆಂಬಲಿಸಲೇಬೇಕಿದೆ ಎಂದರು.

ADVERTISEMENT

ಗ್ರಾಮೀಣ ಪ್ರದೇಶದ ಯುವಶಕ್ತಿಗೆ ಅವಕಾಶ ನೀಡುವ ಉದ್ದೇಶದಿಂದ ಯುವ ಕಾಂಗ್ರೆಸ್ ಪದಾಧಿಕಾರಿಗಳು ಪಕ್ಷದ ಆಂತರಿಕ ಚುನಾವಣೆ ಮೂಲಕ ಅಯ್ಕೆಯಾಗಿದ್ದು, ಹಿರಿಯ ಕಾಂಗ್ರೆಸ್ ಮುಖಂಡರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಸಂಘಟನೆ ಮೂಲಕ ಜನರ ಸಮಸ್ಯೆಗೆ ಸ್ಪಂದಿಸಲು ಸಲಹೆ ನೀಡಿದರು.

ಶಾಸಕ ಡಾ.ರಂಗನಾಥ್, ಯುವ ಕಾಂಗ್ರೆಸ್ ಪದಾಧಿಕಾರಿಗಳು ಸದಸ್ಯರು ಪಕ್ಷದ ಆಸ್ತಿಯಾಗಿದ್ದು, ಅಧಿಕಾರದ ದರ್ಬಾರ್ ಮಾಡದೆ ಸೇವಾ ಮನೋಭಾವದಿಂದ, ಮಾನವೀಯ ಮೌಲ್ಯ ಅಳವಡಿಸಿಕೊಂಡು ಕಾರ್ಯನಿರ್ವಹಿಸಲು ಮನವಿ ಮಾಡಿದರು.

ಯುವ ಕಾಂಗ್ರೆಸ್ ನಿಕಟಪೂರ್ವ ಅಧ್ಯಕ್ಷ ಲೋಹಿತ್, ನೂತನ ಅಧ್ಯಕ್ಷ ಸಂತೋಷ್ ಅವರಿಗೆ ಅಧಿಕಾರ ಹಸ್ತಾಂತರಿಸಿದರು.

ಅಭಿವೃದ್ಧಿಗೆ ಬದ್ದ: ಲೋಕಸಭಾ ಚುನಾವಣೆಯಲ್ಲಿ ಸೋತ್ತಿದ್ದರೂ, ತಾಲ್ಲೂಕಿನ ಅಭಿವೃದ್ಧಿಗೆ ಬದ್ಧ. ತಾಲ್ಲೂಕಿನ ನೀರಾವರಿ ಸಮಸ್ಯೆಗೆ ಶಾಶ್ವತ ಪರಿಹಾರವಾದ ಲಿಂಕ್ ಕೆನಾಲ್ ಯೋಜನೆ ಬಗ್ಗೆ ಜೆಡಿಎಸ್, ಬಿಜೆಪಿ ಮುಖಂಡರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ ಎಂದು ಡಿಕೆ ಸುರೇಶ್‌ ಹೇಳಿದರು.

ತಾಲ್ಲೂಕಿಗೆ ಹೇಮಾವತಿ ನೀರಿನ ವಿಚಾರದಲ್ಲಿ 25 ವರ್ಷಗಳಿಂದ ಅನ್ಯಾಯವಾಗಿದೆ. ಸರಿಪಡಿಸಲು ಲಿಂಕ್ ಕೆನಾಲ್ ಯೋಜನೆ ಅನುಷ್ಠಾನವಾಗುತ್ತಿರುವ ಸಮಯದಲ್ಲಿ ಮಾಗಡಿಗೆ ನೀರು ತೆಗೆದುಕೊಂಡು ಹೋಗಲು ಲಿಂಕ್ ಕೆನಾಲ್ ಮಾಡುತ್ತಿದ್ದಾರೆ ಎಂದು ಆರೋಪ ಮಾಡುತ್ತಿದ್ದಾರೆ. ರಾಜಕೀಯ ಉದ್ದೇಶದಿಂದ ಮಾಗಡಿಗೆ ನೀರು ತೆಗೆದುಕೊಂಡು ಹೋಗಿ ರಾಜಕೀಯ ಮಾಡುವುದಿಲ್ಲ. ಮಾಗಡಿಗೆ ಎತ್ತಿನಹೊಳೆ ಯೋಜನೆ ಮೂಲಕ ನೀರು ತೆಗೆದುಕೊಂಡು ಹೋಗುವ ಬಗ್ಗೆ ಕಾರ್ಯಕ್ರಮ ರೂಪಿತವಾಗುತ್ತಿದೆ. ಕುಣಿಗಲ್ ಪಾಲಿನ 4 ಟಿಎಂಸಿ ನೀರನ್ನು ಪಡೆದುಕೊಳ್ಳಲು ಮಾತ್ರ ಹೋರಾಟ. ಜಿಲ್ಲೆ ಇತರೆ ತಾಲ್ಲೂಕಿನವರು ಕುಣಿಗಲ್ ತಾಲ್ಲೂಕಿಗೆ ಬರುವ ನೀರನ್ನು ಸುಲಭವಾಗಿ ಪಡೆಯುತ್ತಿದ್ದಾರೆ. ಇದರಿಂದಾಗಿ ಕುಣಿಗಲ್ ತಾಲ್ಲೂಕಿಗೆ ಅನ್ಯಾಯವಾಗಿದೆ. ನೇರವಾಗಿ ನೀರನ್ನು ಪಡೆದುಕೊಳ್ಳುವ ಉದ್ದೇಶದಿಂದ ಲಿಂಕ್ ಕೆನಾಲ್‌ಗಾಗಿ ಜಿಲ್ಲೆಯ ಶಾಸಕರೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದರು.

ಕೊತ್ತಗೆರೆ ಹೋಬಳಿಗೆ ₹30 ಕೋಟಿ ವೆಚ್ಚದಲ್ಲಿ ಏತನೀರಾವರಿ ಯೋಜನೆ ಮೂಲಕ ನೀರನ್ನು ಹರಿಸಲು ಸಿದ್ಧತೆ ನಡೆಯುತ್ತಿದೆ ಎಂದರು.

ಕಾರ್ಯಕ್ರಮ ಪ್ರಾರಂಭಕ್ಕೂ ಮುನ್ನ ಡಿ.ಕೆ.ಸುರೇಶ್‌ ಮತ್ತು ಶಾಸಕ ಡಾ.ರಂಗನಾಥ್ ಬೈಕ್ ರ‍್ಯಾಲಿ ನಡೆಸಿದರು.

ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮಂಜುನಾಥ್, ಪ್ರಧಾನ ಕಾರ್ಯದರ್ಶಿ ವಿಶ್ವನಾಥ್, ಕಾರ್ಯದರ್ಶಿ ಸೂರ್ಯ ಮುಕುಂದರಾಜು, ಜಿಲ್ಲಾ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಶಶಿ, ರಾಷ್ಟ್ರೀಯ ಯುವ ಕಾಂಗ್ರೆಸ್ ಮಾಜಿ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಗಣ್ಣಗೌಡ, ಕೆಪಿಸಿಸಿ ಸದಸ್ಯ ಬೇಗೂರು ನಾರಾಯಣ್, ವಿಶ್ವನಾಥ್, ಜೆಸಿಪಿ ರಾಜಣ್ಣ, ಗಂಗಶಾನಯ್ಯ ಇದ್ದರು.

ಕುಣಿಗಲ್ ನಲ್ಲಿ ಆಪರೇಷನ್ ಸಿಂದೂರ ಬೆಂಬಲಿಸಿ ಹಮ್ಮಿಕೊಳ್ಳಲಾಗಿದ್ದ ತ್ರಿರಂಗಾ ಬೈಕ್ ರ್ಯಾಲಿಯಲ್ಲಿ ಮಾಜಿ ಸಂಸದ ಡಿ.ಕೆಸುರೇಶ್ ಶಾಸಕ ಡಾ.ರಂಗನಾಥ್

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.