ಶಿರಾ: ಗ್ರಾಮೀಣ ಪ್ರದೇಶದವರೇ ಇತ್ತೀಚಿನ ದಿನಗಳಲ್ಲಿ ಅತಿ ಹೆಚ್ಚು ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾಗುತ್ತಿರುವುದು ಅಂಕಿ ಅಂಶಗಳಿಂದ ಕಂಡು ಬರುತ್ತಿದೆ. ಕೀಳರಿಮೆ ಬಿಟ್ಟು ಆತ್ಮವಿಶ್ವಾಸ ಬೆಳೆಸಿಕೊಳ್ಳುವ ಮೂಲಕ ಉತ್ತಮ ಸಾಧನೆ ಮಾಡಬೇಕು ಎಂದು ಬೆಂಗಳೂರು ವಿ.ವಿ ಅರ್ಥಶಾಸ್ತ್ರ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಮುಖ್ಯಸ್ಥ ಪ್ರೊ.ಎಸ್.ಆರ್.ಕೇಶವ ಹೇಳಿದರು.
ತಾಲ್ಲೂಕಿನ ಬುಕ್ಕಾಪಟ್ಟಣ ಗ್ರಾಮದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.
‘ಮೌಲ್ಯಾಧಾರಿತ ಶಿಕ್ಷಣ ಇಂದಿನ ಅಗತ್ಯ. ಸಮಾಜ, ಪೋಷಕರು ಮತ್ತು ವಿದ್ಯಾಸಂಸ್ಥೆಯ ಋಣಭಾರವನ್ನು ತೀರಿಸುವ ಜವಾಬ್ದಾರಿ ಹೊಂದಿದ್ದೇವೆ ಎಂದು ಅರಿತು ಯಶಸ್ವಿ ಬದುಕು ರೂಪಿಸಿಕೊಳ್ಳುವ ದೃಷ್ಟಿಯಿಂದ ವಿದ್ಯಾರ್ಥಿಗಳು ಯೋಜನೆಯನ್ನು ರೂಪಿಸಿಕೊಳ್ಳಬೇಕು’ ಎಂದರು.
ನಿವೃತ್ತ ಪ್ರಾಂಶುಪಾಲ ಡಿ.ಎಸ್.ಮುನೀಂದ್ರ ಕುಮಾರ್ ಮಾತನಾಡಿ, ಕನಸನ್ನು ಮೀರಿ ಗುರಿ ಸಾಧಿಸಬೇಕು. ಬದುಕಿನ ವೈಫಲ್ಯಗಳಿಗೆ ಮರಳಿ ಪ್ರಯತ್ನಿಸುವುದೇ ಮದ್ದು. ಆತ್ಮವಿಶ್ವಾಸ ಗಳಿಸಿಕೊಳ್ಳುವ ಪ್ರಜ್ಞೆಯನ್ನು ಪ್ರತಿಯೊಬ್ಬರೂ ಬೆಳೆಸಿಕೊಳ್ಳಬೇಕು ಎಂದರು.
ಕಾಲೇಜು ಪ್ರಾಂಶುಪಾಲ ಹನುಮಂತರಾಯಪ್ಪ, ಬುಕ್ಕಾಪಟ್ಟಣ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುಜಾಯಿದ್, ಉಪಾಧ್ಯಕ್ಷೆ ಗಂಗಮ್ಮ, ಸದಸ್ಯರಾದ ಸೌಭಾಗ್ಯಮ್ಮ, ನೂರ್ ಆಯೇಶಾ, ದಿವಾಕರ್, ಕಾಲೇಜಿನ ಸಿಬ್ಬಂದಿ ಗಂಗಾಧರ್ ಬಿ.ಎಂ, ಮನೋಹರ್ ಜಿ.ಎನ್, ತಾರಾ ಜಯಲಕ್ಷ್ಮಿ, ಪ್ರದೀಪ್ ಕುಮಾರ್, ಲೋಕೇಶ್ ವೈ, ಸಂತೋಷ್ ಜಿ, ಡಾ.ಬಿ.ಮಂಜುನಾಥ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.