ತುಮಕೂರು: ಪತ್ರಕರ್ತರು ಸಮಾಜದ ಕಟ್ಟ ಕಡೆಯ ವ್ಯಕ್ತಿಯ ಧ್ವನಿ ಆಗಬೇಕು. ಸತ್ಯನಿಷ್ಠರಾಗಿ ಪ್ರಾಮಾಣಿಕತೆಯಿಂದ ಕೆಲಸ ಮಾಡಬೇಕು ಎಂದು ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದರು.
ಭಾನುವಾರ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕವು ಪತ್ರಿಕಾ ದಿನಾಚರಣೆಯ ಅಂಗವಾಗಿ ಹಮ್ಮಿಕೊಂಡಿದ್ದ ಪತ್ರಕರ್ತರ ಸಾಂಸ್ಕೃತಿಕ ಹಬ್ಬ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ನಾಲ್ಕನೇ ಅಂಗ ಎಂದು ಈ ಸಮಾಜವು ಪತ್ರಕರ್ತರನ್ನು, ಪತ್ರಿಕೋದ್ಯಮವನ್ನು ವಿಶೇಷ ಗೌರವದಿಂದ ಕಾಣುತ್ತದೆ. ಪತ್ರಿಕೋದ್ಯಮಕ್ಕೆ ತನ್ನದೇ ಆದ ಧ್ಯೇಯ,ನಿಷ್ಠೆ ಇದೆ. ಇದು ಹೊಟ್ಟೆಪಾಡಿಗೆ ಮಾಡುವ ಕೆಲಸವಲ್ಲ. ಸಮಾಜದ ರಕ್ಷಣೆಗೆ ಹೊಣೆಗಾರಿಕೆಯಿಂದ ಕೆಲಸ ಮಾಡಬೇಕು. ಈ ಕ್ಷೇತ್ರವನ್ನು ಪ್ರಬುದ್ಧವಾಗಿ ಬೆಳೆಸಬೇಕು ಎಂದು ಸಲಹೆ ನೀಡಿದರು.
ಸಂಸದ ಜಿ.ಎಸ್.ಬಸವರಾಜು, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮೇಯರ್ ಲಲಿತಾ ರವೀಶ್, ಮುಖ್ಯಮಂತ್ರಿ ಮಾಧ್ಯಮ ಸಲಹೆಗಾರ ಬೃಂಗೇಶ್, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಶಿವಾನಂದ ತಗಡೂರು, ಜಿಲ್ಲಾ ಘಟಕದ ಅಧ್ಯಕ್ಷ ಸಿ.ಎನ್.ಪುರುಷೋತ್ತಮ್, ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಶುಭಾ ಕಲ್ಯಾಣ್, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೋಭಾರಾಣಿ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.