ತುಮಕೂರು: ಕೋವಿಡ್ ಲಾಕ್ಡೌನ್ ಸಮಯದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ 23 ಮಂದಿಗೆ ಗುಬ್ಬಿ ಪಟ್ಟಣದ ಎಸಿಜೆ ಮತ್ತು ಜೆಎಂಎಫ್ಸಿ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ, ತಲಾ ₹15 ಸಾವಿರ ದಂಡ ವಿಧಿಸಿದೆ.
2021ರ ಜುಲೈ 3ರಂದು ಗುಬ್ಬಿ ತಾಲ್ಲೂಕಿನ ಚಿಕ್ಕಕುನ್ನಾಲ ಗ್ರಾಮದಲ್ಲಿ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದರು. ಲಾಕ್ಡೌನ್ ವೇಳೆ ಮಧ್ಯಾಹ್ನ 2 ಗಂಟೆ ವರೆಗೆ ಮಾತ್ರ ಅಂಗಡಿ ತೆರೆಯಲು ಅವಕಾಶ ಕಲ್ಪಿಸಲಾಗಿತ್ತು. ಸಮಯ ಮೀರಿದರೂ ಅದೀರ್ ಅಹ್ಮದ್ ಅಂಗಡಿ ಮುಚ್ಚಿರಲಿಲ್ಲ. ಅಂಗಡಿ ಮುಚ್ಚುವಂತೆ ಸೂಚಿಸಿದ ಪೊಲೀಸರ ಮೇಲೆ ಹಲ್ಲೆ ನಡೆಸಿದ್ದ. ಈತನ ಜತೆಗೆ 22 ಜನ ಸೇರಿಕೊಂಡು ಸಮವಸ್ತ್ರದಲ್ಲಿದ್ದ ಸಿಬ್ಬಂದಿಯನ್ನು ಎಳೆದಾಡಿದ್ದರು. ಕಲ್ಲಿನಿಂದ ಹಲ್ಲೆ ಮಾಡಿದ್ದರು. ಸರ್ಕಾರಿ ವಾಹನಕ್ಕೂ ಹಾನಿ ಮಾಡಿದ್ದರು. ಈ ಕುರಿತು ಸಿ.ಎಸ್.ಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇನ್ಸ್ಪೆಕ್ಟರ್ ಎಫ್.ಕೆ.ನದಾಫ್ ತನಿಖೆ ಪೂರ್ಣಗೊಳಿಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿಗಳಿಗೆ ಒಟ್ಟು ₹3.45 ಲಕ್ಷ ದಂಡ ವಿಧಿಸಿದೆ. ದಂಡದ ಮೊತ್ತದಲ್ಲಿ ಪೊಲೀಸ್ ಸಿಬ್ಬಂದಿಗೆ ತಲಾ ₹15 ಸಾವಿರ ಪರಿಹಾರ
ನೀಡುವಂತೆ ಆದೇಶಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.