ADVERTISEMENT

ತುಮಕೂರು: ತಾಲ್ಲೂಕು ಕಚೇರಿ ಮೇಲೆ ಲೋಕಾಯುಕ್ತ ದಾಳಿ

ಜಿಲ್ಲೆಯ 10 ತಾಲ್ಲೂಕು ಕಚೇರಿಗಳ ಮೇಲೆ ಏಕಕಾಲಕ್ಕೆ ತಪಾಸಣೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2025, 5:18 IST
Last Updated 12 ಜೂನ್ 2025, 5:18 IST
ತುಮಕೂರು ತಾಲ್ಲೂಕು ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು
ತುಮಕೂರು ತಾಲ್ಲೂಕು ಕಚೇರಿಯಲ್ಲಿ ಬುಧವಾರ ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ಪರಿಶೀಲನೆ ನಡೆಯಿತು   

ತುಮಕೂರು: ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ಹೆಚ್ಚು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲ ಹತ್ತು ತಾಲ್ಲೂಕು ಕಚೇರಿಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದರು.

ಬುಧವಾರ ಬೆಳಿಗ್ಗೆ ಏಕಕಾಲಕ್ಕೆ ಎಲ್ಲ ಹತ್ತು ತಾಲ್ಲೂಕು ಕಚೇರಿಗಳಿಗೆ ಬಂದ ಅಧಿಕಾರಿಗಳ ತಂಡ ಸಂಜೆ ವರೆಗೂ ತಪಾಸಣೆ ನಡೆಸಿತು. ಹತ್ತು ಅಧಿಕಾರಿಗಳ ನೇತೃತ್ವದಲ್ಲಿ 40 ಸಿಬ್ಬಂದಿಗಳು ದಾಳಿಯಲ್ಲಿ ಭಾಗವಹಿಸಿದ್ದಾರೆ. ಪರಿಶೀಲನೆ ಗುರುವಾರವೂ ಮುಂದುವರಿಯಲಿದೆ. ನಂತರ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ವರದಿ ಸಿದ್ಧಪಡಿಸಿ ಕ್ರಮ ಕೈಗೊಳ್ಳಲು ಲೋಕಾಯುಕ್ತ ಅಧಿಕಾರಿಗಳು ಮುಂದಾಗಿದ್ದಾರೆ.

ಕಂದಾಯ ಇಲಾಖೆಯಲ್ಲಿನ ಅಕ್ರಮಗಳು, ಭ್ರಷ್ಟಾಚಾರ, ಹಣಕ್ಕೆ ಪೀಡಿಸುವುದು, ಅರ್ಜಿ ವಿಲೇವಾರಿ ಮಾಡದಿರುವುದು, ಖಾತೆ ಬದಲಾವಣೆ ಮಾಡಿಕೊಡದಿರುವುದು, ಸಾಗುವಳಿ ಚೀಟಿ ವಿತರಣೆಯಲ್ಲಿ ಲೋಪ ಸೇರಿದಂತೆ ಸಾಕಷ್ಟು ದೂರುಗಳು ಲೋಕಾಯುಕ್ತಕ್ಕೆ ಸಲ್ಲಿಕೆಯಾಗಿದ್ದವು. ಇತರೆ ಇಲಾಖೆಗಳಿಗಿಂತ ಕಂದಾಯ ಇಲಾಖೆ ವಿರುದ್ಧವೇ ಹೆಚ್ಚು ದೂರುಗಳು ಬಂದಿದ್ದರಿಂದ ದಾಳಿ ನಡೆದಿದೆ.

ADVERTISEMENT

ಕಚೇರಿ ಪರಿಶೀಲನೆಗೆ ಬೆಂಗಳೂರು, ಇತರೆಡೆಗಳ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಕಂದಾಯ ಇಲಾಖೆ ವಿರುದ್ಧ ವ್ಯಾಪಕ ಪ್ರಮಾಣದಲ್ಲಿ ದೂರುಗಳು ಬಂದಿದ್ದರಿಂದ ಜಿಲ್ಲೆಯ ಎಲ್ಲ ಹತ್ತು ತಾಲ್ಲೂಕು ಕಚೇರಿಗಳಲ್ಲೂ ಏಕಕಾಲಕ್ಕೆ ದಾಳಿ ನಡೆಸಿ ಪರಿಶೀಲನೆ ನಡೆಸಲಾಗುತ್ತಿದೆ. ಏನೆಲ್ಲ ಲೋಪದೋಷಗಳು ಕಂಡು ಬರುತ್ತವೆ ಎಂಬುದನ್ನು ಗಮನಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಲೋಕಾಯುಕ್ತ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಿನಾರಾಯಣ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.