
ಮಧುಗಿರಿ: ಕಲೆಗೆ ಜನರನ್ನು ಒಂದುಗೂಡಿಸುವ ಶಕ್ತಿ ಇದೆ ಎಂದು ಸಾಹಿತಿ ಬರಗೂರು ರಾಮಚಂದ್ರಪ್ಪ ತಿಳಿಸಿದರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಜಿಲ್ಲಾಮಟ್ಟದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳ ಸಾಂಸ್ಕೃತಿಕ ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.
ಸಾಂಸ್ಕೃತಿಕ ಸ್ಪರ್ಧೆಗಳಿಂದ ವಿದ್ಯಾರ್ಥಿಗಳಲ್ಲಿ ಅಡಗಿರುವ ಕಲೆ ಹೊರಹಮ್ಮಿಸಲು ಸಾಧ್ಯ. ಪ್ರಾಧ್ಯಾಪಕರು ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವ ಕೆಲಸವನ್ನು ಮತ್ತಷ್ಟು ಮಾಡಬೇಕು. ಶಿಕ್ಷಣದಿಂದ ಮಾತ್ರ ಮನ್ನಣೆ, ಗೌರವ ಸಿಗುತ್ತದೆ. ಶಿಕ್ಷಣ ಇಂದು ಉದ್ಯಮ ಮತ್ತು ವಾಣಿಜ್ಯ ಕ್ಷೇತ್ರವಾಗಿ ಮಾರ್ಪಟ್ಟಿರುವುದು ವಿಷಾದದ ಸಂಗತಿ ಎಂದರು.
ವಿದ್ಯಾರ್ಥಿಗಳು ಮತ್ತು ಪ್ರಾಧ್ಯಾಪಕರಲ್ಲಿ ಜಾತ್ಯತೀತ ಸಂಬಂಧ ಇರಬೇಕು. ಶಿಕ್ಷಣ ಕ್ಷೇತ್ರದಲ್ಲಿ ಅತಿಯಾದ ತಂತ್ರಜ್ಞಾನ ಬಳಕೆ ಅಪಾಯಕಾರಿ. ತಂತ್ರಜ್ಞಾನವನ್ನು ಪೂರಕವಾಗಿ ಬಳಸಿಕೊಳ್ಳಬೇಕು. ಮಕ್ಕಳಲ್ಲಿ ಜಾತ್ಯತೀತತೆ, ಸಮಾನತೆ ಬೆಳೆಸಬೇಕು. ಕನ್ನಡದ ವಿಷಯದಲ್ಲಿ ಕೇವಲ ನವೆಂಬರ್ ನಾಯಕರಾಗಬಾರದು ಎಂದು ಹೇಳಿದರು.
ಕವಿ ವಡ್ಡಗೆರೆ ನಾಗರಾಜಯ್ಯ ಮಾತನಾಡಿ, ಸಂಶೋಧಕ ಸ್ಪರ್ಧೆಗಳಲ್ಲಿ ಜೀವಕೋಶ ಕಾಣಬಹುದು, ವ್ಯಕ್ತಿತ್ವದ ಮೇಲೆ ಪ್ರಭಾವ ಬೀರುತ್ತದೆ. ಶಿಕ್ಷಣದಿಂದ ಮಾತ್ರ ಸಾಮಾಜಿಕ ನ್ಯಾಯ ದೊರಕಿಸಲು ಸಾಧ್ಯ ಎಂದರು.
ಪದವಿ ಪೂರ್ವ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಡಾ. ಬಾಲಗುರಮೂರ್ತಿ ಮಾತನಾಡಿ, ಉತ್ತಮ ಶಿಕ್ಷಕರು ಪ್ರತಿಯೊಬ್ಬರ ಹೃದಯದಲ್ಲಿ ಇರುತ್ತಾರೆ. ಪ್ರತಿಯೊಬ್ಬರಲ್ಲೂ ಆದಿ ಪೂರ್ವ ಶಿಕ್ಷಣದಿಂದ ಹೊಸ ಬದಲಾವಣೆ ಕಾಣಬಹುದು ಎಂದು ತಿಳಿಸಿದರು.
ಜಿಲ್ಲಾ ಪ್ರಾಂಶುಪಾಲರ ಸಂಘದ ಅಧ್ಯಕ್ಷ ನೇರಂ ನಾಗರಾಜು ಮಾತನಾಡಿ, ಒತ್ತಡದ ಕೆಲಸದಲ್ಲಿ ಸಾಂಸ್ಕೃತಿಕ ಸ್ಪರ್ಧೆಗಳು ಅತ್ಯವಶ್ಯಕ. ವಿದ್ಯಾರ್ಥಿಗಳು ಸೋಲು - ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು ಎಂದು ತಿಳಿಸಿದರು.
ಜಿಲ್ಲಾ ಪ್ರಾಂಶುಪಾಲರ ಸಂಘದ ಮಾಜಿ ಅಧ್ಯಕ್ಷ ಪ್ರಭಾಕರ ರೆಡ್ಡಿ, ರಾಜ್ಯ ಪ್ರತಿನಿಧಿ ಚಂದ್ರಯ್ಯ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ರಂಗಪ್ಪ, ಜಿಲ್ಲಾ ಉಪನ್ಯಾಸಕರ ಸಂಘದ ಅಧ್ಯಕ್ಷ ಮಹಾಲಿಂಗೇಶ್, ಜಿಲ್ಲಾ ಅನುದಾನಿತ ಪದವಿ ಪೂರ್ವ ಕಾಲೇಜುಗಳ ಸಂಘದ ಅಧ್ಯಕ್ಷ ಪರಮೇಶ್ವರಪ್ಪ, ಪ್ರಾಂಶುಪಾಲರಾದ ವೇದಮೂರ್ತಿ, ಕೃಷ್ಣಮೂರ್ತಿ, ಎಂ.ಕೆ . ಲತಾ ಶಂಭುಲಿಂಗೇಶ್, ಈಶ್ವರಯ್ಯ, ಎ.ರಾಮಚಂದ್ರಪ್ಪ, ಲಕ್ಷ್ಮಿ ಭಟ್ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.