ತುಮಕೂರು: ಮಾನವನ ಹಕ್ಕುಗಳನ್ನು ಸ್ವತಂತ್ರವಾಗಿ ಅನುಭವಿಸುವ ಹಾಗೂ ಎಲ್ಲರ ಹಕ್ಕುಗಳ ಬಗ್ಗೆ ಅರಿವು ಮೂಡಿಸುವ ಕಾರ್ಯವನ್ನು ಇಂದಿನ ಯುವಕರು ಮಾಡಬೇಕಾಗಿದೆ ಎಂದು ನ್ಯಾಯಾಧೀಶ ಎಚ್.ಎಸ್.ಮಲ್ಲಿಕಾರ್ಜುನಸ್ವಾಮಿ ತಿಳಿಸಿದರು.
ನಗರದ ಸಿದ್ದಗಂಗಾ ಮಹಿಳಾ ಪದವಿ ಪೂರ್ವ ಕಾಲೆಜಿನಲ್ಲಿ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರ ಆಯೋಜಿಸಿದ್ದ ಮಾನವ ಹಕ್ಕುಗಳ ಅರಿವು, ರಕ್ಷಣೆ ಮತ್ತು ಕಾನೂನು ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ನ್ಯಾಯಾಧೀಶ ಬಾಬಾಸಾಹೇಬ್ ಜಿನರಾಳ್ಕರ್ ಮಾತನಾಡಿ, ಮಾನವ ಹಕ್ಕುಗಳು ನಮ್ಮನ್ನು ರಕ್ಷಿಸುತ್ತವೆ. ಹಾಗಾಗಿ ಸಂವಿಧಾನಕ್ಕೆ ನಾವೆಲ್ಲಾ ಬದ್ಧರಾಗಿ ಅದನ್ನು ರಕ್ಷಿಸುವ ಕೆಲಸ ಮಾಡಬೇಕಾಗಿದೆ ಎಂದರು.
ಸೇವಾ ಕೇಂದ್ರದ ಸಂಸ್ಥಾಪಕ ಅಧ್ಯಕ್ಷ ಸಿದ್ದಲಿಂಗೇಗೌಡ ಮಾತನಾಡಿ, ’ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ತಮ್ಮ ಮಾನವ ಹಕ್ಕುಗಳ ಉಲ್ಲಂಘನೆಯಾದ ಸಂದರ್ಭದಲ್ಲಿ ಯಾವ ರೀತಿ ತಮ್ಮ ದೂರುಗಳನ್ನು ಆಯೋಗಗಳಿಗೆ ಸಲ್ಲಿಸಬಹುದು ಎಂಬುದನ್ನು ಅರಿತುಕೊಳ್ಳಬೇಕು’ ಎಂದು ಆಶಯ ವ್ಯಕ್ತಪಡಿಸಿದರು.
ವಿಶ್ವ ಮಾನವ ಹಕ್ಕುಗಳ ಸೇವಾ ಕೇಂದ್ರದ ಅರುಣ್ ಕುಮಾರ್, ಎಚ್.ಡಿ.ತಿಪ್ಪೆಸ್ವಾಮಿ, ರಮೇಶ್, ಉಮಾಶಂಕರ್, ಪ್ರತಾಪ್, ಶಶಿಕಿರಣ್, ಆನಂದ್, ಮಂಜುನಾಥ್, ಡಮರುಗ ಉಮೇಶ್ ಹಾಗೂ ಹೇಮಂತ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.