ADVERTISEMENT

ರಾಷ್ಟ್ರೀಯ ಶಿಕ್ಷಣ ನೀತಿ ಯಶಸ್ವಿಗೊಳಿಸಿ: ಚಿದಾನಂದ ಗೌಡ ಸಲಹೆ

ವಿಧಾನ ಪರಿಷತ್‌ ಸದಸ್ಯ ಚಿದಾನಂದ ಗೌಡ ಸಲಹೆ

​ಪ್ರಜಾವಾಣಿ ವಾರ್ತೆ
Published 26 ಜನವರಿ 2021, 1:19 IST
Last Updated 26 ಜನವರಿ 2021, 1:19 IST
ಒಕ್ಕಲಿಗರ ಭವನದಲ್ಲಿ ಶಿಕ್ಷಕರ ಸಂಘದಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ಮಾತನಾಡಿದರು
ಒಕ್ಕಲಿಗರ ಭವನದಲ್ಲಿ ಶಿಕ್ಷಕರ ಸಂಘದಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯ ಚಿದಾನಂದ ಗೌಡ ಮಾತನಾಡಿದರು   

ತಿಪಟೂರು: ಕೇಂದ್ರ ಸರ್ಕಾರದ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ. ಇದರಿಂದಾಗಿ ಶಿಕ್ಷಕರ ಸಮಸ್ಯೆಯು ಬಗೆಹರಿಯಲಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದಗೌಡ ತಿಳಿಸಿದರು.

ನಗರದ ಒಕ್ಕಲಿಗರ ಭವನದಲ್ಲಿ ಶಿಕ್ಷಕರ ಸಂಘದಿಂದ ನಡೆದ ಅಭಿನಂದನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಿಪಟೂರು ಭಾಗದಿಂದ ಅತ್ಯಂತ ಹೆಚ್ಚು ಮತಗಳನ್ನು ನನಗೆ ನೀಡಿರುವುದು ಸಂತೋಷದ ವಿಷಯ. ಚುನಾವಣಾ ಪ್ರಣಾಳಿಕೆಯಲ್ಲಿರುವ ಕೆಲಸಗಳನ್ನು ಪೂರ್ಣಗೊಳಿಸಲಾಗುವುದು. ಜೊತೆಗೆ ರಚನಾತ್ಮಕ ಕೆಲಸಗಳನ್ನು ಕೈಗೆತ್ತಿಕೊಂಡು ಪ್ರಾಮಾಣಿಕ ಪ್ರಯತ್ನ ಮಾಡಿ ತಾರ್ಕಿಕ ಅಂತ್ಯವನ್ನು ಕಾಣಬಯಸುತ್ತೇನೆ. ಎಲ್ಲಾ ಶಿಕ್ಷಕರ, ಉಪನ್ಯಾಸಕರ ಸಮಸ್ಯೆಗಳು ನನಗೆ ತಿಳಿದಿದೆ. ಸರ್ಕಾರದ ಗಮನಕ್ಕೆ ತಂದು ಗಮನಾರ್ಹವಾದ ಸಮಸ್ಯೆಗಳ ಪರಹಾರಕ್ಕೆ ಸೂತ್ರ ತಯಾರಿಸಿ, ಶಿಕ್ಷಕ ವೃಂದಕ್ಕೆ ಅನುಕೂಲ ಮಾಡಿಕೊಡುವ ಪ್ರಯತ್ನ ಮಾಡುತ್ತೇನೆ ಎಂದರು.

ADVERTISEMENT

ತುಮಕೂರು ವಿವಿ ಸಿಂಡಿಕೇಟ್ ಸದಸ್ಯ ರಾಜು ಮಾತನಾಡಿ, ತಾಲ್ಲೂಕಿನ ಎಲ್ಲರ ಪರಿಶ್ರಮದಿಂದ ಪರಿಷತ್ ಚುನಾವಣೆಯಲ್ಲಿ ಹೆಚ್ಚಿನ ಮತ ನೀಡಲು ಸಾಧ್ಯವಾಗಿದೆ. ಅತಿಥಿ ಉಪನ್ಯಾಸಕರನ್ನು ಕೂಡಲೇ ಪೂರ್ಣಪ್ರಮಾಣದಲ್ಲಿ ನೇಮಕ ಮಾಡಿಕೊಂಡು ಪದವಿ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಸಹಕರಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವಂತೆ ಮನವಿ ಮಾಡಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಭುಸ್ವಾಮಿ ಮಾತನಾಡಿ, ಶಿಕ್ಷಕರು ಮುಂದಿನ ಪೀಳಿಗೆಯನ್ನು ತಯಾರಿಸುವ ಶಿಲ್ಪಿಗಳು. ಅವರ ಸಮಸ್ಯೆಗಳನ್ನು ಜನಪ್ರತಿನಿಧಿಗಳು ಗಮನಿಸಿಕೊಂಡು ಸಕಾಲಕ್ಕೆ ಅಗತ್ಯವಿರುವ ಹೊಸ ನೀತಿನಿಯಮಗಳನ್ನು ತಂದು ಶಿಕ್ಷಕರಿಗೆ ಹಲವಾರು ಸವಲತ್ತುಗಳನ್ನು ಒದಗಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ಶಿಕ್ಷಕರ ಸಂಘದ ಅಧ್ಯಕ್ಷ ಪಟ್ಟಾಭಿರಾಮ, ಉಪನ್ಯಾಸಕ ಡಾ.ಎಲ್.ಎಂ. ವೆಂಕಟೇಶ್, ಶಿವಣ್ಣ, ಬಿ.ಸಿ. ರವಿಶಂಕರ್, ಸುಧಾ, ಶ್ರೀನಿವಾಸಮೂರ್ತಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.