ಶಿರಾ: ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಹಾಗೂ ಮಂಜುನಾಥ್ ತಾಲ್ಲೂಕಿನಲ್ಲಿ ಪಕ್ಷವನ್ನು ಕಟ್ಟಿ ಬೆಳೆಸಿದ್ದಾರೆ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ, ಅವರನ್ನು ಗೆಲ್ಲಿಸುವ ಜವಾಬ್ದಾರಿ ಇವರ ಮೇಲಿದೆ ಎಂದು ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ಸುರೇಶ್ ಗೌಡ ಹೇಳಿದರು.
ತಾಲ್ಲೂಕಿನ ಗುಮ್ಮನಹಳ್ಳಿ ಗೇಟ್ನಲ್ಲಿರುವ ಕರಿಯಮ್ಮ ದೇವಸ್ಥಾನದ ಬಳಿ ಬುಧವಾರ ನಡೆದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ಕಾಂಗ್ರೆಸ್ ಮತ್ತು ಜೆಡಿಎಸ್ ನೀರಾವರಿ ಯೋಜನೆಗಳನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿವೆ. ಸ್ವಾತಂತ್ರ್ಯ ಬಂದು 70 ವರ್ಷವಾದರೂ ಕ್ಷೇತ್ರದ ಜನರು ಬಡತನದಿಂದ ಮುಕ್ತವಾಗಿಲ್ಲ. ಅವರಿಗೆ ಈ ಬಾರಿ ಮತದಾರರು ತಕ್ಕ ಪಾಠ ಕಲಿಸಬೇಕು ಎಂದರು.
ತುಮುಲ್ ನಿರ್ದೇಶಕ ಎಸ್.ಆರ್.ಗೌಡ ಮಾತನಾಡಿ, ಯಾವುದೇ ಅಸೆ ಮತ್ತು ಅಮಿಷಗಳಿಗೆ ಬಲಿಯಾಗುವುದಿಲ್ಲ. ಕಾರ್ಯಕರ್ತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದರು.
ಸಂಸದ ಎ.ನಾರಾಯಣ ಸ್ವಾಮಿ ಮಾತನಾಡಿ, ‘ಕ್ಷೇತ್ರದಲ್ಲಿ ಬಿಜೆಪಿ ಈಗ ಸದೃಢವಾಗಿದೆ. ಒಂದು ಬಾರಿ ಬಿಜೆಪಿಯನ್ನು ಗೆಲ್ಲಿಸಿ. ಪಕ್ಷ ಯಾರಿಗೆ ಟಿಕೆಟ್ ನೀಡಿದರೂ, ಅವರನ್ನು ಗೆಲ್ಲಿಸುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ’ ಎಂದರು.
ಒಂದು ವೇಳೆ ಬಿ.ಕೆ.ಮಂಜುನಾಥ್ ಹಾಗೂ ಎಸ್.ಆರ್.ಗೌಡ ಅವರಿಗೆ ಟಿಕೆಟ್ ದೊರೆಯದಿದ್ದರೆ, ಅವರಿಗೆ ಶಾಸಕರಿಗೆ ಸಮಾನವಾದ ಸ್ಥಾನ– ಮಾನ ನೀಡಲಾಗುವುದು ಎಂದರು.
ಸೇರ್ಪಡೆ: ಜೆಡಿಎಸ್ ಕಾರ್ಯಾಧ್ಯಕ್ಷ ಸುಧಾಕರ್ ಗೌಡ, ಯುವರಾಜು, ಶ್ರೀನಿವಾಸ್, ನರೇಂದ್ರ ಅವರು ಜೆಡಿಎಸ್ ತೊರೆದು ಬಿಜೆಪಿಗೆ ಸೇರಿದರು.
ವಿಧಾನ ಪರಿಷತ್ ಸದಸ್ಯ ರವಿಕುಮಾರ್, ತಾ.ಪಂ ಉಪಾಧ್ಯಕ್ಷ ರಂಗನಾಥಗೌಡ, ಎಪಿಎಂಸಿ ಉಪಾಧ್ಯಕ್ಷ ರಾಮರಾಜು, ಸೂಡಾ ಅಧ್ಯಕ್ಷ ಈರಣ್ಣ, ಬರಗೂರು ತಿಪ್ಪೇಸ್ವಾಮಿ, ಕಗ್ಗಲಡು ರಾಜಶೇಖರ್, ನಿಡಗಟ್ಟೆ ಚಂದ್ರಶೇಖರ್, ಶ್ರೀರಂಗಯಾದವ್, ನರಸಿಂಹಮೂರ್ತಿ, ಚಿಕ್ಕಣ್ಣ, ಮದನ್, ನಿರಂಜನ್, ಶ್ರೀಧರ್, ಇನಾಂಗೊಲ್ಲಹಳ್ಳಿ ಶಿವಣ್ಣ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.