ADVERTISEMENT

ಬ್ರಾಹ್ಮಣರ ಅಭಿವೃದ್ಧಿಗೆ ಹಲವು ಯೋಜನೆ

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2020, 15:56 IST
Last Updated 11 ಸೆಪ್ಟೆಂಬರ್ 2020, 15:56 IST
ತುಮಕೂರು ವಿಪ್ರ ಭವನದಲ್ಲಿ ಜಿಲ್ಲಾ ಬ್ರಾಹ್ಮಣ ಸಭಾದಿಂದ ಆಯೋಜಿಸಲಾಗಿದ್ದ ಚಿಂತನಾ ಸಭೆಯಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ಮಾತನಾಡಿದರು
ತುಮಕೂರು ವಿಪ್ರ ಭವನದಲ್ಲಿ ಜಿಲ್ಲಾ ಬ್ರಾಹ್ಮಣ ಸಭಾದಿಂದ ಆಯೋಜಿಸಲಾಗಿದ್ದ ಚಿಂತನಾ ಸಭೆಯಲ್ಲಿ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಲಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ಮಾತನಾಡಿದರು   

ತುಮಕೂರು: ರಾಜ್ಯ ಸರ್ಕಾರದಲ್ಲಿ ಲಭ್ಯವಿರುವ ಎಲ್ಲ ರೀತಿಯ ಸೌಲಭ್ಯ, ಸವಲತ್ತುಗಳನ್ನು ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ಸಮುದಾಯದವರಿಗೆ ತಲುಪಿಸಲು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಬದ್ಧವಾಗಿದೆ ಎಂದು ಮಂಡಳಿ ಅಧ್ಯಕ್ಷ ಎಚ್.ಎಸ್.ಸಚ್ಚಿದಾನಂದ ಮೂರ್ತಿ ತಿಳಿಸಿದರು.

ನಗರದ ವಿಪ್ರ ಭವನದಲ್ಲಿ ಜಿಲ್ಲಾ ಬ್ರಾಹ್ಮಣ ಸಭಾದಿಂದ ಆಯೋಜಿಸಿದ್ದ ಚಿಂತನಾ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಮೂಲಕ ಆರ್ಥಿಕವಾಗಿ, ಶೈಕ್ಷಣಿಕವಾಗಿ ಹಿಂದುಳಿದ ಸಮುದಾಯದವರ ಪ್ರಗತಿ, ಶಿಕ್ಷಣ, ಕೌಶಲಾಭಿವೃದ್ಧಿ, ಸ್ವ-ಉದ್ಯೋಗ, ಮೂಲ ಸೌಕರ್ಯಗಳ ಅಭಿವೃದ್ಧಿಯನ್ನು ಒಳಗೊಂಡ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುವುದು. ಇದರ ಮೊದಲ ಹಂತವಾಗಿ ಅರ್ಚಕರು, ಅಡುಗೆಯವರನ್ನು ಅಸಂಘಟಿತ ಕಾರ್ಮಿಕ ವಲಯಕ್ಕೆ ಸೇರ್ಪಡೆಗೊಳಿಸಲಾಗುವುದು ಎಂದರು.

ADVERTISEMENT

ಕೇಂದ್ರ ಲೋಕಸೇವಾ ಆಯೋಗ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಉಚಿತವಾಗಿ ತರಬೇತಿ ನೀಡಲಾಗುವುದು. ಅರ್ಹ ವಿದ್ಯಾರ್ಥಿಗಳಿಗೆ ಪಿಯುಸಿ‌‌ ನಂತರದ ವಿದ್ಯಾಭ್ಯಾಸಕ್ಕೆ ಶುಲ್ಕ ಪಾವತಿಸುವುದು, ಸ್ವಯಂ ಉದ್ಯೋಗ ಕೈಗೊಳ್ಳುವವರಿಗೆ ಸಬ್ಸಿಡಿ ದರದಲ್ಲಿ ಸಾಲ ನೀಡಲಾಗುವುದು. ಈ ನಾಲ್ಕು ಯೋಜನೆಗಳನ್ನು ತ್ವರಿತವಾಗಿ ಕಾರ್ಯರೂಪಕ್ಕೆ ತರಲು ಚಿಂತಿಸಲಾಗಿದೆ ಎಂದು ವಿವರಿಸಿದರು.

ಸಮುದಾಯದ ವೇದ, ಸಂಸ್ಕೃತ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶಿಷ್ಯ ವೇತನ ನೀಡಲಾಗುವುದು. ಶಾಲಾ- ಕಾಲೇಜು ವಿದ್ಯಾರ್ಥಿಗಳಿಗೆ ನಿರ್ವಹಣಾ ವೆಚ್ಚ, ಶುಲ್ಕ ಮರುಪಾವತಿ, ಸ್ವಯಂ ಉದ್ಯೋಗಕ್ಕೆ ಸಹಾಯ, ಬ್ರಾಹ್ಮಣ ಉದ್ಯಮಿಗಳಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ಒದಗಿಸಲು ಬ್ಯಾಂಕ್‌ಗಳೊಂದಿಗೆಒಡಂಬಡಿಕೆ ಮಾಡಿಕೊಳ್ಳಲಾಗುವುದು ಎಂದು ಹೇಳಿದರು.

ಸಂಶೋಧನಾ ಮತ್ತು ತರಬೇತಿ ಕೇಂದ್ರಗಳ ಪ್ರಾರಂಭ, ವಿಶ್ವೇಶ್ವರಯ್ಯ ಕೌಶಲಾಭಿವೃದ್ಧಿ ಯೋಜನೆಯಡಿ ಉದ್ಯೋಗಮೇಳ, ತರಬೇತಿ ಕೇಂದ್ರಗಳ ಆರಂಭ, ವೃತ್ತಿಪರ ಪರೀಕ್ಷೆಗಳಿಗೆ ಉಚಿತ ತರಬೇತಿ, ಕರಕುಶಲ ವಸ್ತುಗಳ ತಯಾರಿಕೆ, ಗುಡಿ ಕೈಗಾರಿಕೆಗೆ ತರಬೇತಿ, ಸಹಾಯಧನ ಪಾವತಿ ಮತ್ತು ಮಾರುಕಟ್ಟೆ ನಿರ್ಮಾಣ, ಬ್ರಾಹ್ಮಣ ವಿದ್ಯಾರ್ಥಿಗಳಿಗೆ ಉಚಿತ ಹಾಸ್ಟೆಲ್ ನಿರ್ಮಾಣ– ಹೀಗೆ ಬ್ರಾಹ್ಮಣ ಸಮುದಾಯದವರ ಅಭಿವೃದ್ಧಿಗಾಗಿ ಹಲವಾರು ಯೋಜನೆಗಳನ್ನು ಮಂಡಳಿಯಿಂದ ರೂಪಿಸಲಾಗಿದೆ ಎಂದು ತಿಳಿಸಿದರು.

ಮಂಡಳಿ ನಿರ್ದೇಶಕ ಎ.ಜೆ.ರಂಗವಿಠಲ, ಮಹಾನಗರ ಪಾಲಿಕೆ ಸದಸ್ಯ, ಸಿ.ಎನ್.ರಮೇಶ್, ಜಿಲ್ಲಾ ಬ್ರಾಹಣ ಸಭಾ ಅಧ್ಯಕ್ಷ ಎನ್.ಆರ್.ನಾಗರಾಜರಾವ್, ಸುರೇಶ್ ಹೊಳ್ಳ, ಎಚ್.ಎಸ್.ರಾಘವೇಂದ್ರ, ಸುಭಾಷಿನಿ ರವೀಶ್, ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.

ಸಮುದಾಯದ ಏಳ್ಗೆಗೆ ಕೈ ಜೋಡಣೆ

‘ರಾಜ್ಯದಾದ್ಯಂತ ಪ್ರವಾಸಮಾಡಿ ಬ್ರಾಹ್ಮಣ ಸಮುದಾಯದ ಕಷ್ಟ-ಕಾರ್ಪಣ್ಯಗಳ ಬಗ್ಗೆ ಅಧ್ಯಯನ ಮಾಡಿದ್ದೇನೆ. ಸಮುದಾಯದ ವಿವಿಧ ಮಠಾಧೀಶರನ್ನು ಭೇಟಿಯಾಗಿ ಸಲಹೆ ಪಡೆದಿದ್ದೇನೆ. ಸಮಾಜದಲ್ಲಿ ಉತ್ತಮ ಸ್ಥಾನದಲ್ಲಿರುವ ಬ್ರಾಹ್ಮಣ ಸಮುದಾಯದ ಕಂಪನಿಗಳು, ವೈದ್ಯರು, ಎಂಜಿನಿಯರ್‌, ಚಾರ್ಟೆಡ್ ಅಕೌಂಟೆಂಟ್‌ಗಳು ಸಮುದಾಯದ ಅಭಿವೃದ್ಧಿಗೆ ಕೈಜೋಡಿಸಲು ಮುಂದಾಗಿದ್ದಾರೆ’ ಎಂದುಎಚ್.ಎಸ್.ಸಚ್ಚಿದಾನಂದ ಮೂರ್ತಿ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.