ಕುಣಿಗಲ್: ಯುವ ರೈತರು ಜೀವನ ಸಂಗಾತಿ ಹುಡುಕುವಲ್ಲಿ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ವಿಶೇಷ ಪ್ರೋತ್ಸಾಹ ಯೋಜನೆಯನ್ನು ಜಾರಿಗೆ ತರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಶಾಸಕ ಎಚ್.ಡಿ.ರಂಗನಾಥ್ ಒತ್ತಾಯಿಸಿದ್ದಾರೆ.
ಫೆಬ್ರವರಿ 18ರಂದು ಬರೆದ ಪತ್ರದಲ್ಲಿ ಅವರು, ಮುಂಬರುವ ವಿಧಾನಸಭಾ ಅಧಿವೇಶನದಲ್ಲಿ ಈ ಕ್ರಮ ಕೈಗೊಳ್ಳುವಂತೆ ಪ್ರಸ್ತಾಪಿಸಿದ್ದಾರೆ.
‘ನನ್ನ ಕ್ಷೇತ್ರವಾದ ಕುಣಿಗಲ್ ತಾಲೂಕು ಪ್ರಧಾನವಾಗಿ ಗ್ರಾಮೀಣ ಪ್ರದೇಶ. ಕೃಷಿ ಮೇಲೆ ಹೆಚ್ಚು ಅವಲಂಬಿತವಾಗಿದೆ. ಹೆಚ್ಚಿನ ಸಂಖ್ಯೆ ಯುವಕರು ಹಳ್ಳಿಗಳಲ್ಲಿ ವಾಸಿಸುತ್ತಾ ಕೃಷಿ ಮೂಲಕ ಜೀವನೋಪಾಯ ಕಂಡುಕೊಂಡಿದ್ದಾರೆ. ಆದರೆ, ಅನೇಕ ಮಹಿಳೆಯರು ಅವರನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾರೆ’ ಎಂದು ಹೇಳಿದ್ದಾರೆ.
ಇಂತಹ ಅನೇಕ ಪುರುಷರು 30 ವರ್ಷ ದಾಟಿದರೂ ಅವಿವಾಹಿತರಾಗಿಯೇ ಉಳಿದಿದ್ದಾರೆ ಎಂದು ಉಲ್ಲೇಖಿಸಿದ ಅವರು, ಪ್ರಚಲಿತ ಸಾಮಾಜಿಕ ಪ್ರವೃತ್ತಿಯಿಂದಾಗಿ ಸಂಕಷ್ಟ ಎದುರಿಸುತ್ತಿದ್ದಾರೆ ಎಂದಿದ್ದಾರೆ.
‘ಮುಂಬರುವ ಅಧಿವೇಶನದಲ್ಲಿ ಗ್ರಾಮಗಳಲ್ಲಿ ನೆಲೆಸಿ ಕೃಷಿಯಲ್ಲಿ ತೊಡಗಿರುವ ಪುರುಷರನ್ನು ಮದುವೆಯಾಗುವ ಮಹಿಳೆಯರಿಗೆ ವಿಶೇಷ ಭತ್ಯೆ ಮತ್ತು ವಿಶೇಷ ಸ್ಥಾನಮಾನ ಘೋಷಿಸಬೇಕೆಂದು ನಾನು ವಿನಂತಿಸುತ್ತೇನೆ’ ಎಂದು ಶಾಸಕರು ಪತ್ರದಲ್ಲಿ ಬರೆದಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.