ADVERTISEMENT

ಗಣಿ ಬಾಧಿತ ಗ್ರಾಮಸ್ಥರ ಸಭೆ

ಮೂಲ ಸೌಕರ್ಯ ಅಭಿವೃದ್ಧಿಗೆ ಜನರ ಮನವಿ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2022, 16:32 IST
Last Updated 26 ಸೆಪ್ಟೆಂಬರ್ 2022, 16:32 IST
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಣಿ ಬಾಧಿತ ಪ್ರದೇಶದ ಅಭಿವೃದ್ಧಿ ಸಂಬಂಧ ಬುಳ್ಳೇನಹಳ್ಳಿಯಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಮಾತನಾಡಿದರು
ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಗಣಿ ಬಾಧಿತ ಪ್ರದೇಶದ ಅಭಿವೃದ್ಧಿ ಸಂಬಂಧ ಬುಳ್ಳೇನಹಳ್ಳಿಯಲ್ಲಿ ನಡೆದ ನಾಗರಿಕರ ಸಭೆಯಲ್ಲಿ ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಮಾತನಾಡಿದರು   

ಚಿಕ್ಕನಾಯಕನಹಳ್ಳಿ: ತಾಲ್ಲೂಕಿನ ಗಣಿ ಬಾಧಿತ ಪ್ರದೇಶದ ಅಭಿವೃದ್ಧಿ ಸಂಬಂಧ ಸಾರ್ವಜನಿಕರ ಸಭೆಯು ಬುಳ್ಳೇನಹಳ್ಳಿ ಗ್ರಾಮದಲ್ಲಿ ಸೋಮವಾರ ಸಂಜೆ ನಡೆಯಿತು.

ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಸುದರ್ಶನ್ ರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ 200ಕ್ಕೂ ಹೆಚ್ಚು ಗ್ರಾಮಗಳ ಜನರು ಪಾಲ್ಗೊಂಡಿದ್ದರು.

ಸಭೆಯಲ್ಲಿ ಕೆಲವರು ತಮ್ಮ ಅಭಿಪ್ರಾಯ ಮಂಡಿಸಿ ಗಣಿ ಬಾಧಿತ ಪ್ರದೇಶಗಳಲ್ಲಿ ಉತ್ತಮ ರಸ್ತೆ ನಿರ್ಮಾಣ, ಆಸ್ಪತ್ರೆ, ಶಾಲೆ, ಅಂಗನವಾಡಿ, ಕೆರೆ– ಕಟ್ಟೆ ನಿರ್ಮಾಣ, ಪಶು ಸಂಗೋಪನೆ, ಕುಡಿಯುವ ನೀರು, ಕೃಷಿ, ನೀರಾವರಿ ಯೋಜನೆಗಳನ್ನು ಅಭಿವೃದ್ಧಿ ಮಾಡಬೇಕು ಎಂದು ಮನವಿ ಸಲ್ಲಿಸಿದರು.

ADVERTISEMENT

ಕೃಷಿಕ ಶಂಕರಲಿಂಗಪ್ಪ ಮಾತನಾಡಿ, ಬಹುಮುಖ್ಯವಾಗಿ ಗಣಿ ಆರಂಭದಿಂದ ಗುಡ್ಡ ಪ್ರದೇಶಗಳು ಬೋಳಾಗಿದ್ದು ಮಳೆ ಬಂದರೆ ಕೊಚ್ಚಿ ಹೋಗುತ್ತವೆ. ಅವುಗಳ ಸವಕಳಿ ತಪ್ಪಿಸುವುದು ಸೇರಿದಂತೆ ಗೋಮಾಳ ನಿರ್ಮಾಣ, ಕೆರೆಗಳು ಹಾಗೂ ಹಾಳಾಗಿರುವ ಅಂತರ್ಜಲ ಸಂರಕ್ಷಣೆಗೆ ಚೆಕ್‌ ಡ್ಯಾಂ ನಿರ್ಮಾಣ ಮಾಡಬೇಕು ಎಂದು ಮನವಿ ಮಾಡಿದರು.

ಸಾರ್ವಜನಿಕರು ಮಂಡಿಸಿದ ಮೆಡಿಕಲ್ ಕಾಲೇಜು ಹಾಗೂ ಎಂಜಿನಿಯರಿಂಗ್ ಕಾಲೇಜು ಸ್ಥಾಪನೆ ಪ್ರಸ್ತಾಪಕ್ಕೆ ಪ್ರತಿಕ್ರಿಯಿಸಿದ ನಿವೃತ್ತ ನ್ಯಾಯಮೂರ್ತಿ ಸುದರ್ಶನರೆಡ್ಡಿ, ಈ ಯೋಜನೆ ನಮ್ಮ ವ್ಯಾಪ್ತಿಗೆ ಬರುವುದಿಲ್ಲ. ಈ ಬಗ್ಗೆ ಜಿಲ್ಲಾಡಳಿತ ಹಾಗೂ ಸರ್ಕಾರ ತೀರ್ಮಾನಿಸುತ್ತದೆ. ನಮ್ಮದು ಬರೀ ನಿರ್ವಹಣೆಯ ಜತೆ ಹಣ ಲೋಪವಾಗದಂತೆ ನೋಡಿಕೊಳ್ಳುವ ಕೆಲಸವಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ, ಜಿಲ್ಲಾ ಪಂಚಾಯಿತಿ ಸಿಇಒ ವಿದ್ಯಾಕುಮಾರಿ, ಡಿಎಫ್‌ಒ ಸುರೇಶ್‌, ಕೆ. ಉಪ ವಿಭಾಗಾಧಿಕಾರಿ ಕಲ್ಪಶ್ರೀ, ತಹಶೀಲ್ದಾರ್ ಬಿ. ತೇಜಸ್ವಿನಿ, ಮಾಜಿ ಶಾಸಕ ಬಿ. ಲಕ್ಕಪ್ಪ, ಮುಖಂಡರಾದ ಬುಳ್ಳೇನಹಳ್ಳಿ ಪ್ರಕಾಶ್‌, ಪಂಚಾಕ್ಷರಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.