ತುಮಕೂರು: ವಿಧಾನ ಪರಿಷತ್ ಮಾಜಿ ಸದಸ್ಯ ಎಂ.ಸಿ.ವೇಣುಗೋಪಾಲ್ ಅವರಿಗೆ ಎಂಎಲ್ಸಿ ಸ್ಥಾನ ನೀಡುವಂತೆ ಕಾಂಗ್ರೆಸ್ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಸ್.ಟಿ.ಶ್ರೀನಿವಾಸ್ ಇಲ್ಲಿ ಭಾನುವಾರ ಒತ್ತಾಯಿಸಿದರು.
ವೇಣುಗೋಪಾಲ್ 2018ರಲ್ಲಿ ಒಮ್ಮೆ ಎಂಎಲ್ಸಿ ಆಗಿದ್ದರು. ಪೂರ್ಣಾವಧಿ ಕೆಲಸ ಮಾಡಲು ಆಗಲಿಲ್ಲ. ಈಗ ಮತ್ತೊಮ್ಮೆ ಅವಕಾಶ ಕಲ್ಪಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇತ್ತ ಗಮನ ಹರಿಸಬೇಕು ಎಂದು ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ವೇಣುಗೋಪಾಲ್ ನಾಯಕತ್ವದಲ್ಲಿ ತುಂಬಾ ಜನ ಕೆಲಸ ಮಾಡಿದ್ದಾರೆ. ಕಳೆದ ವಿಧಾನಸಭೆ, ಲೋಕಸಭಾ ಚುನಾವಣೆಯಲ್ಲಿ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪರ ಪ್ರಚಾರ ನಡೆಸಿದ್ದಾರೆ. ನಿಷ್ಠೆಯಿಂದ ಕೆಲಸ ಮಾಡುತ್ತಿದ್ದು, ಪಕ್ಷಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಜಿಲ್ಲೆಯ ಸಚಿವರು, ಶಾಸಕರಿಗೂ ವೇಣುಗೋಪಾಲ್ ಪರ ಒಲವಿದೆ ಎಂದರು.
ಈ ಹಿಂದಿನ ಚುನಾವಣೆಗಳಲ್ಲಿ ಜಿಲ್ಲೆಯ ಉಸ್ತುವಾರಿಯಾಗಿ ಕೆಲಸ ಮಾಡಿದ್ದರು. ಜಿಲ್ಲೆಯಲ್ಲಿ ಉತ್ತಮ ಕೆಲಸ ಮಾಡಿದ್ದಾರೆ. ಮತ್ತೊಮ್ಮೆ ಟಿಕೆಟ್ ಕೊಟ್ಟು, ಹೆಚ್ಚಿನ ಸೇವೆ ಸಲ್ಲಿಸಲು ಅನುವು ಮಾಡಿಕೊಡಬೇಕು ಎಂದು ಹೇಳಿದರು.
‘ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧಿಸಲು ಟಿಕೆಟ್ ಕೇಳುತ್ತೇನೆ. ಹಲವು ವರ್ಷಗಳಿಂದ ನಿಷ್ಠಾವಂತನಾಗಿ ಕೆಲಸ ಮಾಡುತ್ತಾ ಬಂದಿದ್ದೇನೆ. ಎಲ್ಲರಿಗೂ ಅವಕಾಶ ಸಿಗುವುದಿಲ್ಲ. ಆದರೂ ಸ್ಪರ್ಧೆಗೆ ಅವಕಾಶ ನೀಡುವಂತೆ ಮನವಿ ಮಾಡುತ್ತೇನೆ. ರೈತರು, ಹಿಂದುಳಿದ ವರ್ಗದ ಪರವಾಗಿ ಕೆಲಸ ಮಾಡಬೇಕು ಎಂಬ ಆಶಾಭಾವನೆ ಇದೆ’ ಎಂದು ತಿಳಿಸಿದರು.
ಮುಖಂಡ ಮೋಹನ್, ‘ಹಿಂದುಳಿದವರಿಗೆ ಕಾಂಗ್ರೆಸ್ನಲ್ಲಿ ಮಾತ್ರ ಅವಕಾಶ ಸಿಗಲು ಸಾಧ್ಯ. ಆದ್ದರಿಂದ ವೇಣುಗೋಪಾಲ್ ಅವರಿಗೆ ಮತ್ತೊಮ್ಮೆ ಎಂಎಲ್ಸಿ ಸ್ಥಾನ ನೀಡಬೇಕು’ ಎಂದು ಆಗ್ರಹಿಸಿದರು.
ಮುಖಂಡರಾದ ಲೋಕೇಶ್, ಶ್ರೇಯಸ್, ವಿಜಯ್, ಪದ್ಮಕುಮಾರ್, ಮೈಲಾರಪ್ಪ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.