ಕೋರ: ಆಕಸ್ಮಿಕವಾಗಿ ಬಾವಿಗೆ ಬಿದ್ದು ತಾಯಿ ಮತ್ತು ಇಬ್ಬರು ಮಕ್ಕಳು ಸೇರಿ ಮೂವರು ಗುರುವಾರ ಸಾವನ್ನಪ್ಪಿದ್ದಾರೆ.
ಹೋಬಳಿಯ ಚಿಕ್ಕತೊಟ್ಲುಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತಿರುಮಲಪಾಳ್ಯದಲ್ಲಿ ಈ ದುರ್ಘಟನೆ ಜರುಗಿದೆ. ತಿರುಮಲಪಾಳ್ಯದ ಕುಮಾರ್ ಎಂಬುವರ ಪತ್ನಿ ಹೇಮಲತಾ (34) ಹಾಗೂ ಮಕ್ಕಳಾದ ಮಾನಸ (6), ಪೂರ್ವಿಕಾ (3) ಬಾವಿಗೆ ಬಿದ್ದು ಸಾವನ್ನಪ್ಪಿದವರು.
ಗುರುವಾರ ಹುಣ್ಣಿಮೆ ಪ್ರಯುಕ್ತ ತೋಟದಲ್ಲಿ ಮೊಸರನ್ನ ಎಡೆ ಹಾಕಲು ಹೋಗಿದ್ದಾರೆ. ಆ ಸಂದರ್ಭದಲ್ಲಿ ಮಾನಸ ಬಾವಿಯ ದಡದಲ್ಲಿದ್ದ ಸೀಬೆ ಹಣ್ಣಿನ ಮರದಲ್ಲಿ ಹಣ್ಣು ಕೀಳಲು ಹೋಗಿ ಆಕಸ್ಮಿಕವಾಗಿ ಬಾವಿಗೆ ಬಿದ್ದಿದ್ದಾಳೆ. ಜತೆಯಲ್ಲೇ ಇದ್ದ ಪೂರ್ವಿಕಾ ಸಹ ಅಕ್ಕನಂತೆ ಬಾವಿಗೆ ಬಿದ್ದಿದ್ದಾಳೆ. ತನ್ನ ಇಬ್ಬರು ಮಕ್ಕಳು ಬಾವಿಗೆ ಬಿದ್ದಿದ್ದನ್ನು ನೋಡಿದ ತಾಯಿ ಹೇಮಲತಾ ಅವರು ಮಕ್ಕಳನ್ನು ರಕ್ಷಿಸಲು ಬಾವಿಗೆ ಹಾರಿದ್ದಾರೆ. ಮೂವರು ಮೇಲೆ ಬರಲು ಸಾಧ್ಯವಾಗದೆ ಸಾವನ್ನಪ್ಪಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.