ADVERTISEMENT

ತುಮಕೂರು | ನಿಗಮಕ್ಕೆ ₹500 ಕೋಟಿ ನೀಡಲು ಆಗ್ರಹ: ಜ. 6ರಿಂದ ಪಾದಯಾತ್ರೆ

​ಪ್ರಜಾವಾಣಿ ವಾರ್ತೆ
Published 9 ಅಕ್ಟೋಬರ್ 2025, 2:46 IST
Last Updated 9 ಅಕ್ಟೋಬರ್ 2025, 2:46 IST
ಪ್ರಣವಾನಂದ ಸ್ವಾಮೀಜಿ
ಪ್ರಣವಾನಂದ ಸ್ವಾಮೀಜಿ   

ತುಮಕೂರು: ನಾರಾಯಣ ಗುರು ಅಭಿವೃದ್ಧಿ ನಿಗಮಕ್ಕೆ ಈವರೆಗೂ ಒಂದು ರೂಪಾಯಿ ಅನುದಾನ ನೀಡಿಲ್ಲ. ಸರ್ಕಾರ ಈಡಿಗ ಸಮುದಾಯವನ್ನು ಮೂಲೆ ಗುಂಪು ಮಾಡಿದೆ ಎಂದು ಕರದಾಳ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪ್ರಣವಾನಂದ ಸ್ವಾಮೀಜಿ ಇಲ್ಲಿ ಬುಧವಾರ ಅಸಮಾಧಾನ ವ್ಯಕ್ತಪಡಿಸಿದರು.

ಈ ಹಿಂದಿನ ಸರ್ಕಾರದ ಅವಧಿಯಲ್ಲಿ ಈಡಿಗ, ಬಿಲ್ಲವ, ನಾಮದಾರಿ ಸಮುದಾಯಕ್ಕೆ ಎರಡು ಮಂತ್ರಿ ಸ್ಥಾನ, ಮೂರು ನಿಗಮಗಳ ಅಧ್ಯಕ್ಷ ಸ್ಥಾನ ನೀಡಲಾಗಿತ್ತು. ಈಗಿನ ಸರ್ಕಾರ ಕೇವಲ ಒಂದೇ ಮಂತ್ರಿ ಸ್ಥಾನ ಕೊಟ್ಟಿದೆ. ಇದುವರೆಗೆ ಬೆಂಗಳೂರಿನಲ್ಲಿ ನಾರಾಯಣ ಗುರು ಪುತ್ಥಳಿ ಅನಾವರಣ ಮಾಡಲಿಲ್ಲ. ಈಡಿಗರು ರಾಜಕೀಯಕ್ಕೆ ಬರಬಾರದು ಎಂಬ ಉದ್ದೇಶದಿಂದ ಸೇಂದಿ ಮಾರಾಟ ಬಂದ್‌ ಮಾಡಿಸಿದರು. ಕುಲ ಕಸುಬು ಕಳೆದುಕೊಂಡವರಿಗೆ ಪರ್ಯಾಯ ವ್ಯವಸ್ಥೆ ಕಲ್ಪಿಸಿಲ್ಲ ಎಂದು ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜ. 6ರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿ ಪೀಠದಿಂದ ಬೆಂಗಳೂರು ವರೆಗೆ ಪಾದಯಾತ್ರೆ ನಡೆಸಲಾಗುವುದು. ಪ್ರತಿ ದಿನ 20 ಕಿಲೊ ಮೀಟರ್‌ನಂತೆ 700 ಕಿ.ಮೀ ಪಾದಯಾತ್ರೆ ನಡೆಯಲಿದೆ. ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸದಿದ್ದರೆ ಆಮರಣಾಂತ ಉಪವಾಸ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದರು.

ADVERTISEMENT

ರಾಜ್ಯದಲ್ಲಿ ನಾರಾಯಣ ಗುರು ಹೆಸರಿನಲ್ಲಿ ವಿಶ್ವವಿದ್ಯಾಲಯ ಸ್ಥಾಪಿಸಬೇಕು. ಎಲ್ಲ ವಿ.ವಿಗಳಲ್ಲಿ ನಾರಾಯಣ ಗುರು ಅಧ್ಯಯನ ಪೀಠ ಆರಂಭಿಸಬೇಕು. ಇಂದಿಗೂ ಶೇ 90ರಷ್ಟು ಜನ ಕಡು ಬಡವರಿದ್ದಾರೆ. ಅವರ ಭವಿಷ್ಯಕ್ಕಾಗಿ, ಸಾಮಾಜಿಕ ನ್ಯಾಯ ಕಲ್ಪಿಸಲು ಹೋರಾಟ ನಡೆಸಲಾಗುವುದು. ನಿಗಮಕ್ಕೆ ₹500 ಕೋಟಿ ಅನುದಾನ ನೀಡುವುದು, ಮದ್ಯ ಮಾರಾಟದಲ್ಲಿ ಶೇ 50ರಷ್ಟು ರಿಯಾಯಿತಿ ಸೇರಿ ವಿವಿಧ ಬೇಡಿಕೆ ಮುಂದಿಟ್ಟುಕೊಂಡು ಪಾದಯಾತ್ರೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಕೂಡಲಸಂಗಮದ ಲಿಂಗಾಯತ ಪಂಚಮಸಾಲಿ ಪೀಠದಿಂದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಅವರನ್ನು ಕೆಳಗೆ ಇಳಿಸಿರುವುದು ಖಂಡನೀಯ. ಪೀಠದಲ್ಲಿ ಧರ್ಮ ವಿರೋಧಿ ಕೆಲಸ ಆಗಿದೆ. ಇದರಲ್ಲಿ ರಾಜಕೀಯ ಉದ್ದೇಶ ಅಡಗಿದೆ. ಅವರನ್ನು ಮತ್ತೆ ಪೀಠಕ್ಕೆ ನೇಮಿಸಬೇಕು ಎಂದು ಒತ್ತಾಯಿಸಿದರು.

ರಾಷ್ಟ್ರೀಯ ಈಡಿಗ ಮಹಾಮಂಡಳಿ ರಾಜ್ಯ ಘಟಕದ ಅಧ್ಯಕ್ಷ ತಿಪ್ಪೇಶ್‌, ಮುಖಂಡ ಲಕ್ಷ್ಮಿನರಸಿಂಹಯ್ಯ ಹಾಜರಿದ್ದರು.

ಮಹಾ ಮಂಡಳಿಗೆ ನೇಮಕ

‘ರಾಷ್ಟ್ರೀಯ ಈಡಿಗ ಮಹಾಮಂಡಳಿ ಜಿಲ್ಲಾ ಘಟಕದ ಅಧ್ಯಕ್ಷರಾಗಿ ರಂಗಸ್ವಾಮಿ ಮಂಡಳಿ ಜಿಲ್ಲಾ ಮಟ್ಟದ ಅಧಿಕಾರಿ ಹಾಗೂ ನೌಕರರ ಸಂಘದ ಅಧ್ಯಕ್ಷರಾಗಿ ಟಿ.ಶ್ರೀನಿವಾಸ್‌ ಮಹಿಳಾ ಸಂಘದ ಅಧ್ಯಕ್ಷರಾಗಿ ಪ್ರಭಾ ವಸಂತ್‌ ಜೆ.ಪಿ– ಜಾಲಪ್ಪ ಚಾರಿಟೆಬಲ್‌ ಟ್ರಸ್ಟ್‌ ಅಧ್ಯಕ್ಷರನ್ನಾಗಿ ಡಿ.ಆರ್‌.ಹನುಮಂತರಾಜು ಅವರನ್ನು ನೇಮಿಸಲಾಗಿದೆ’ ಎಂದು ಪ್ರಣವಾನಂದ ಸ್ವಾಮೀಜಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.