ಶಿರಾ: ದೇಶದ ಹಲವಾರು ಶಿಕ್ಷಣ ತಜ್ಞರ, ಶಿಕ್ಷಣ ಪ್ರೇಮಿಗಳ ಹಾಗೂ ಲಕ್ಷಾಂತರ ಮಂದಿ ವಿದ್ಯಾರ್ಥಿ, ಪೋಷಕರ ಅಭಿಪ್ರಾಯ ಸಂಗ್ರಹ ಮಾಡಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ನೂತನ ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿಗೆ ತಂದಿದ್ದಾರೆ. ಇದರಿಂದ ದೇಶದಲ್ಲಿ ಮಹತ್ತರ ಬದಲಾವಣೆ ಕಾಣಲಿದೆ ಎಂದು ವಿಧಾನ ಪರಿಷತ್ ಸದಸ್ಯ ಚಿದಾನಂದ್ ಎಂ. ಗೌಡ ಹೇಳಿದರು.
ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಕರ್ನಾಟಕ ರಾಜ್ಯ ಮೊದಲನೆ ಹೆಜ್ಜೆಯಾಗಿ ಎಲ್ಲಾ ಪೂರ್ವ ತಯಾರಿ ಮಾಡಿಕೊಂಡು ಪ್ರಾರಂಭಿಸುತ್ತಿದೆ. ಆದರೆ, ವಿರೋಧ ಪಕ್ಷದ ನಾಯಕರು ಇದರ ಬಗ್ಗೆ ಸಾಕಷ್ಟು ಪ್ರಶ್ನೆಗಳನ್ನು ಎತ್ತಿದ್ದಾರೆ. ದೇಶದ ಭವಿಷ್ಯದ ಹಿತದೃಷ್ಟಿಯಿಂದ ಜನರಿಗೆ ತಪ್ಪು ಸಂದೇಶ ಹೋಗಬಾರದು. ಈ ನಿಟ್ಟಿನಲ್ಲಿ ವಿರೋಧ ಪಕ್ಷದವರು ಅನವಶ್ಯಕ ಟೀಕೆ ಮಾಡುವುದು ಸರಿಯಲ್ಲ ಎಂದರು.
ಸರ್ಕಾರಿ ಶಾಲೆಗಳ ಅಭಿವೃದ್ಧಿಗಾಗಿ ರಾಜ್ಯ ಗಡಿನಾಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸೋಮಶೇಖರ್ ಅವರಲ್ಲಿ ಮನವಿ ಮಾಡಿ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ₹ 1.30 ಕೋಟಿ ಅನುದಾನ ಪಡೆಯಲಾಗಿದೆ. ಈ ಅನುದಾನದಲ್ಲಿ ಶಿರಾ ತಾಲ್ಲೂಕಿನ ಹಲವು ಶಾಲೆಗಳು ಹಾಗೂ ಚಳ್ಳಕೆರೆ, ಗೌರಿಬಿದನೂರು, ಮಧುಗಿರಿ ಸೇರಿದಂತೆ ಆಗ್ನೇಯ ಪದವೀಧರ ಕ್ಷೇತ್ರದ ಹಲವು ಶಾಲೆಗಳಿಗೆ ಅನುದಾನ ನೀಡಲಾಗುವುದುಎಂದು ತಿಳಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.