
ತುಮಕೂರು: ನೂತನ ವರ್ಷದ ಸಂಭ್ರಮಾಚರಣೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಡಿ. 31ರ ಬೆಳಿಗ್ಗೆ 8ರಿಂದ ಜ. 2ರ ಬೆಳಿಗ್ಗೆ 8 ಗಂಟೆಯ ವರೆಗೆ ಜಿಲ್ಲೆಯ ಪ್ರವಾಸಿ ತಾಣಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
ತಾಲ್ಲೂಕಿನ ನಾಮದ ಚಿಲುಮೆ, ದೇವರಾಯನ ದುರ್ಗ ಹಾಗೂ ಬಸದಿ ಬೆಟ್ಟಕ್ಕೆ ಪ್ರವಾಸಿಗರ ಭೇಟಿಗೆ ಅವಕಾಶ ಕಲ್ಪಿಸಿಲ್ಲ. ಡಿ. 31ರ ಬೆಳಿಗ್ಗೆ 8 ಗಂಟೆಯಿಂದ ಜ. 1ರ ಬೆಳಿಗ್ಗೆ 6ರ ವರೆಗೆ ಮತ್ತು ಜ. 1ರ ಸಂಜೆ 6 ಗಂಟೆಯಿಂದ ಜ. 2ರ ಬೆಳಿಗ್ಗೆ 8 ಗಂಟೆಯ ವರೆಗೆ ಈ ಪ್ರದೇಶದಲ್ಲಿ ಸಾರ್ವಜನಿಕರು ಮತ್ತು ವಾಹನಗಳ ಪ್ರವೇಶ ನಿರ್ಬಂಧಿಸಲಾಗಿದೆ.
‘ಸಾರ್ವಜನಿಕರ ಹಿತದೃಷ್ಟಿಯಿಂದ ಸಂರಕ್ಷಿತ ಅರಣ್ಯ ಪ್ರದೇಶ ಮತ್ತು ಅಪಘಾತ ವಲಯದಲ್ಲಿ ವಾಹನ ಸಂಚಾರ ನಿಷೇಧಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್ ತಿಳಿಸಿದ್ದಾರೆ.
ಸಾರ್ವಜನಿಕರು ಸುರಕ್ಷಿತವಾಗಿ ಹೊಸ ವರ್ಷ ಆಚರಿಸಬೇಕು. ವಿದ್ಯಾಸಂಸ್ಥೆ ಮುಖ್ಯಸ್ಥರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸಂಸ್ಥೆಯ ಆವರಣ, ಹಾಸ್ಟೆಲ್ಗಳಲ್ಲಿ ಶಿಸ್ತಿನ ಚೌಕಟ್ಟು ಮೀರದಂತೆ ನೋಡಿಕೊಳ್ಳಬೇಕು. ಸವಾರರು ವ್ಹೀಲಿಂಗ್ ಮತ್ತು ಅಡ್ಡಾದಿಡ್ಡಿಯಾಗಿ ವಾಹನ ಚಲಾಯಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.