ಪಾವಗಡ: ಒಳ ಮೀಸಲಾತಿ ಜಾರಿಗೊಳಿಸುವಂತೆ ಒತ್ತಾಯಿಸಿ ಚಿತ್ರದುರ್ಗದಲ್ಲಿ ಡಿಸೆಂಬರ್ 14ರಂದು ರಾಜ್ಯಮಟ್ಟದ ಮಾದಿಗ ವಕೀಲರ ಸಮಾವೇಶ ನಡೆಯಲಿದೆ ಎಂದು ವಕೀಲ ಜೆ.ಸಿ. ರಂಗಧಾಮಯ್ಯ ತಿಳಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಇಡೀ ಜೀವನವನ್ನು ದೇಶಕ್ಕಾಗಿ ಸಮರ್ಪಿಸಿ ಸಂವಿಧಾನ ರಚಿಸಿಕೊಟ್ಟಿದ್ದಾರೆ. ಸಂವಿಧಾನದಲ್ಲಿ ಪ್ರತಿಯೊಬ್ಬರಿಗೂ ಸಮಾನತೆ, ಅವಕಾಶ, ಸ್ವತಂತ್ರ್ಯ ಕಲ್ಪಿಸಲಾಗಿದೆ. ಆದರೆ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಸಿಗುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ ಎಂದರು.
ಪರಿಶಿಷ್ಟ ಜಾತಿ, ಪಂಗಡಗಳಲ್ಲಿ ಒಳ ಮೀಸಲಾತಿ ಕಲ್ಪಿಸಲು ರಾಜ್ಯಗಳಿಗೆ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಸಂವಿಧಾನಿಕ ಪೀಠ ತೀರ್ಪು ನೀಡಿದೆ. ಇದರಿಂದ ಶೋಷಿತ ಸಮುದಾಯಗಳಿಗೆ ನ್ಯಾಯ ಸಿಗಲಿದೆ. ಮಾದಿಗ ಸಮುದಾಯವನ್ನು ಜಾಗೃತಿಗೊಳಿಸಲು, ಒಳ ಮೀಸಲಾತಿಯನ್ನು ಶೀಘ್ರ ಜಾಗೃತಗೊಳಿಸುವಂತೆ ಒತ್ತಾಯಿಸಿ ರಾಜ್ಯಮಟ್ಟದ ಮಾದಿಗ ವಕೀಲರ ಸಮ್ಮೇಳನ ಹಮ್ಮಿಕೊಳ್ಳಲಾಗಿದೆ. ಮುಂದಿನ ತಲೆಮಾರಿನ ಭವಿಷ್ಯಕ್ಕಾಗಿ ಸಮುದಾಯದ ವಕೀಲರು ಶ್ರಮಿಸಬೇಕು ಎಂದು ತಿಳಿಸಿದರು.
ವಕೀಲ ಆರ್.ಎಚ್. ಹನುಮಂತರಾಯ, ಎ.ಎಸ್. ರಘುನಂದನ್, ರಾಮಾಂಜಿನೇಯ, ಎಸ್.ಟಿ. ನರಸಿಂಹ, ಎಸ್. ಅಂಬರೀಶ್, ಪ್ರಸನ್ನಕುಮಾರ್, ಎ.ಮಲ್ಲೇಶ್, ಟಿ.ಎನ್. ಪೇಟೆ ರಮೇಶ್ ಉಪಸ್ಥಿತರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.