ADVERTISEMENT

ವಿದ್ಯುತ್‌ ಖಾಸಗೀಕರಣಕ್ಕೆ ವಿರೋಧ: ಸರ್ಕಾರದ ವಿರುದ್ಧ ರೈತರ ಆಕ್ರೋಶ

ಬೆಸ್ಕಾಂ ಕಚೇರಿವರೆಗೆ ಮೆರವಣಿಗೆ

​ಪ್ರಜಾವಾಣಿ ವಾರ್ತೆ
Published 17 ಮೇ 2022, 4:20 IST
Last Updated 17 ಮೇ 2022, 4:20 IST
ತುಮಕೂರಿನಲ್ಲಿ ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಖಂಡಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ರ್‍ಯಾಲಿ ನಡೆಸಿದರು
ತುಮಕೂರಿನಲ್ಲಿ ವಿದ್ಯುತ್‌ ಕ್ಷೇತ್ರದ ಖಾಸಗೀಕರಣ ಖಂಡಿಸಿ ರಾಜ್ಯ ರೈತ ಸಂಘದ ನೇತೃತ್ವದಲ್ಲಿ ರೈತರು ಪ್ರತಿಭಟನಾ ರ್‍ಯಾಲಿ ನಡೆಸಿದರು   

ತುಮಕೂರು: ವಿದ್ಯುತ್‌ ಕ್ಷೇತ್ರವನ್ನು ಖಾಸಗೀಕರಣ ಮಾಡಲು ಹೊರಟಿರುವ ಸರ್ಕಾರಗಳ ನೀತಿ ಖಂಡಿಸಿ ರಾಜ್ಯ ರೈತ ಸಂಘದಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಯಿತು.

ನಗರದ ಬಿಜಿಎಸ್ ವೃತ್ತದಿಂದ ಕೋತಿತೋಪು ಬಳಿಯ ಬೆಸ್ಕಾಂ ಸೂಪರಿಂಟೆಂಡಿಂಗ್ ಎಂಜಿನಿಯರ್ ಕಚೇರಿಯವರೆಗೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ ಸರ್ಕಾರಗಳ ವಿರುದ್ಧ ಘೋಷಣೆಗಳು ಮೊಳಗಿದವು. ನೂರಾರು ಸಂಖ್ಯೆಯಲ್ಲಿ ಭಾಗವಹಿಸಿದ್ದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ರಾಜ್ಯ ಸರ್ಕಾರ ಜಾರಿಗೆ ತಂದಿ ರುವ ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆ ಯಬೇಕು. ರೈತರ ಎಲ್ಲಾ ಉತ್ಪನ್ನಗಳನ್ನು ಬೆಂಬಲ ಬೆಲೆ ಯಲ್ಲಿ ಖರೀದಿಸಬೇಕು. ರೈತರ ಪಂಪ್‌ ಸೆಟ್‌ಗಳಿಗೆ ನಿರಂತರವಾಗಿ ಹತ್ತು ಗಂಟೆ ಕಾಲ ವಿದ್ಯುತ್ ಹರಿಸುವಂತೆ ರೈತರು ಆಗ್ರಹಿಸಿದರು.

ADVERTISEMENT

ರೈತ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬಡಗಲಪುರ ನಾಗೇಂದ್ರಪ್ಪ ಮಾತನಾಡಿ, ‘ಎತ್ತಿನ ಹೊಳೆ, ಭದ್ರಾ ಮೇಲ್ದಂಡೆ, ಬಿಕ್ಕೇಗುಡ್ಡ, ಹಾಗಲವಾಡಿ ನೀರಾವರಿ ಯೋಜನೆಗಳ ಕಾಲಮಿತಿ ಮುಗಿದು ಹಲವು ವರ್ಷಗಳಾದರೂ ಅನುಷ್ಠಾನ ಭಾಗ್ಯ ಕಂಡಿಲ್ಲ. ಕೂಡಲೇ ಯೋಜನೆಗಳಿಗೆ ಬೇಕಾದ ಹಣವನ್ನು ಬಿಡುಗಡೆ ಮಾಡಬೇಕು’ ಎಂದು ಒತ್ತಾಯಿಸಿದರು.

ದೇಶದಲ್ಲಿ ನಿರುದ್ಯೋಗ, ಬಡತನ, ಭ್ರಷ್ಟಾಚಾರ, ಸ್ವಜನಪಕ್ಷಪಾತ, ಕೋಮುವಾದ ತಾಂಡವವಾಡುತ್ತಿದೆ. ನಾಲ್ಕು ಗೋಡೆಗಳ ಮಧ್ಯೆ ಇರಬೇಕಾದ ಧರ್ಮವನ್ನು ಬೀದಿಗೆ ತಂದರು. ಹಿಜಾಬ್, ಹಲಾಲ್ ಹೆಸರಿನಲ್ಲಿ ಯುವಕರನ್ನು ಎತ್ತಿಕಟ್ಟಿ, ಪ್ರತಿಭಟಿಸುವ ಮನಸ್ಥಿತಿಯೇ ಇಲ್ಲದಂತೆ ಮಾಡಲಾಗಿದೆ ಎಂದು ಟೀಕಿಸಿದರು.

ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಎ. ಗೋವಿಂದರಾಜು, ‘ವಿದ್ಯುತ್‌ ಕ್ಷೇತ್ರವನ್ನು ಖಾಸಗೀ ಕರಣಮಾಡುವುದರಿಂದ ರೈತರಿಗೆ ಹೆಚ್ಚಿನ ನಷ್ಟವಾಗಲಿದೆ. ಖಾಸಗೀಕರಣ ವಾದರೆ ರೈತರಪಂಪ್‌ಸೆಟ್‌ಗಳಿಗೆ ಮೀಟರ್‌ ಅಳವಡಿಸುತ್ತಾರೆ. ಇದ ರಿಂದಉಚಿತವಾಗಿ ವಿದ್ಯುತ್‌ ದೊರೆ ಯುವ ದಿಲ್ಲ. ಬೆಸ್ಕಾಂ ನೌಕರರು ಕೆಲಸ ಕಳೆದುಕೊಳ್ಳಬೇಕಾಗುತ್ತದೆ’ ಎಂದು ಹೇಳಿದರು.

ಸುಟ್ಟ ವಿದ್ಯುತ್‌ ಪರಿವರ್ತಕಗಳನ್ನು ಸರಿಪಡಿಸಲು ರೈತರಿಂದ ಸಾವಿರಾರು ರೂಪಾಯಿ ಪಡೆಯುತ್ತಿದ್ದಾರೆ. ರೈತರ ಸಮಸ್ಯೆಗಳಿಗೆ ಸೂಕ್ತ ಸಮಯಕ್ಕೆ ಸ್ಪಂದಿಸುತ್ತಿಲ್ಲ. ಜಿಲ್ಲೆಯಲ್ಲಿ ಖಾಲಿಯಿರುವ 1,276 ಲೈನ್‌ಮನ್ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಎಂದು ಆಗ್ರಹಿಸಿದರು.

ರೈತ ಸಂಘದ ಮುಖಂಡರಾದ ರವೀಶ್, ಜಿ.ಸಿ. ಶಂಕರಪ್ಪ, ಗೋಪಾಲ್‌, ಕೆ.ಎನ್‌. ವೆಂಕಟೇಗೌಡ, ಸಿ.ಜೆ. ಲೋಕೇಶ್, ಮಹದೇವ್, ಲಿಂಗರಾಜು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.