ತುಮಕೂರಿನಲ್ಲಿ ಭಾನುವಾರ ಸರ್ಕಾರಿ ನೌಕರರ ಸಂಘದಿಂದ ಪ್ರತಿಭಾ ಪುರಸ್ಕಾರ ವಿತರಿಸಲಾಯಿತು. ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ, ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜು ಇತರರು ಪಾಲ್ಗೊಂಡಿದ್ದರು
ತುಮಕೂರು: ಹಳೇ ಪಿಂಚಣಿ ಯೋಜನೆ (ಒಪಿಎಸ್) ಜಾರಿಗೆ ಸರ್ಕಾರ ಬದ್ಧವಾಗಿದೆ. ಇದಕ್ಕಾಗಿ ರಚಿಸಿದ ಸಮಿತಿಯು ಆದಷ್ಟು ಶೀಘ್ರದಲ್ಲಿಯೇ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜಿ.ಪರಮೇಶ್ವರ ಹೇಳಿದರು.
ನಗರದಲ್ಲಿ ಭಾನುವಾರ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ವಿತರಣಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದ ಮಕ್ಕಳು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಸ್ಪರ್ಧಾತ್ಮಕ ಯುಗ ನಿಮ್ಮ ಮುಂದಿದೆ. ಭಾರತ ನಿಮಗಾಗಿ ಕಾಯುತ್ತಿದೆ. ದೇಶ ಕಟ್ಟಲು ನಿಮ್ಮ ಸೇವೆ ಬೇಕಾಗಿದೆ. ಪುರಸ್ಕಾರ ಒಂದು ರೀತಿಯ ಎಚ್ಚರಿಕೆ ಎಂದರು.
ಭಾರತ ಅತ್ಯಂತ ವೇಗವಾಗಿ ಬೆಳೆಯುತ್ತಿದ್ದು, ಇಡೀ ಪ್ರಪಂಚ ದೇಶದ ಕಡೆಗೆ ನೋಡುತ್ತಿದೆ. ಇದು ಶಿಕ್ಷಣದಿಂದ ಸಾಧ್ಯವಾಗಿದೆ. ಹಳ್ಳಿಯಲ್ಲಿ ಕುಳಿತುಕೊಂಡು ಯಾವುದೇ ಶಾಲಾ-ಕಾಲೇಜಿಗೆ ಅರ್ಜಿ ಸಲ್ಲಿಸಬಹುದು. ದೇಶದ 140 ಕೋಟಿಯಲ್ಲಿ 96 ಕೋಟಿ ಜನ ಇಂಟರ್ನೆಟ್ ಬಳಸುತ್ತಿದ್ದಾರೆ. ಇಷ್ಟು ದೊಡ್ಡ ಸಂಖ್ಯೆಯ ಬಳಕೆದಾರರು ಇರುವ ಮತ್ತೊಂದು ರಾಷ್ಟ್ರವಿಲ್ಲ ಎಂದು ತಿಳಿಸಿದರು.
ಕೇಂದ್ರ ಜಲ ಶಕ್ತಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ‘ಸ್ಪರ್ಧಾತ್ಮಕ ತರಬೇತಿ ಕೇಂದ್ರಗಳು ನಾಯಿ ಕೊಡೆಯಂತಾಗಿವೆ. ಮಕ್ಕಳಿಂದ ಲಕ್ಷಾಂತರ ರೂಪಾಯಿ ದುಡ್ಡು ಪಡೆಯುತ್ತಿವೆ. ನೌಕರರ ಸಂಘದಿಂದ ಸ್ಪರ್ಧಾತ್ಮಕ ಪರೀಕ್ಷೆ ತರಬೇತಿ ಕೇಂದ್ರ ಆರಂಭಿಸಬೇಕು. ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಕೇಂದ್ರ ನೆರವಾಗಲಿದೆ’ ಎಂದು ಸಲಹೆ ಮಾಡಿದರು.
ಶಾಸಕ ಜಿ.ಬಿ.ಜ್ಯೋತಿಗಣೇಶ್, ಮಾಜಿ ಸಂಸದ ಜಿ.ಎಸ್.ಬಸವರಾಜು, ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿ.ಪಂ ಸಿಇಒ ಜಿ.ಪ್ರಭು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಹೆಚ್ಚುವರಿ ಜಿಲ್ಲಾಧಿಕಾರಿ ಎ.ತಿಪ್ಪೇಸ್ವಾಮಿ, ಉಪವಿಭಾಗಾಧಿಕಾರಿ ನಾಹಿದಾ ಜಮ್ ಜಮ್, ತಹಶೀಲ್ದಾರ್ ರಾಜೇಶ್ವರಿ, ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷರಾದ ಎನ್.ನರಸಿಂಹರಾಜು, ರಂಗಪ್ಪ, ಪದಾಧಿಕಾರಿಗಳಾದ ಎಚ್.ಗಿರಿಗೌಡ, ಮಲ್ಲಿಕಾರ್ಜುನ ಬಿ.ಬಳ್ಳಾರಿ, ಜಿ.ಎನ್.ರಾಧಾಕೃಷ್ಣ, ಸಿದ್ದರಾಜು, ವಿ.ವಿ.ಶಿವರುದ್ರಯ್ಯ ಮೊದಲಾದವರು ಭಾಗವಹಿಸಿದ್ದರು.
ಗುಬ್ಬಿ ಬಳಿಯ ನಿಟ್ಟೂರಿನ ಎಚ್ಎಎಲ್ ಘಟಕ ವಿಸ್ತಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಹೊಸದಾಗಿ ಇನ್ನೂ 650 ಎಕರೆ ಗುರುತಿಸಲಾಗಿದೆ ಎಂದು ಸಚಿವ ಜಿ.ಪರಮೇಶ್ವರ ಹೇಳಿದರು. ಏಷ್ಯಾದಲ್ಲಿಯೇ ಅತಿದೊಡ್ಡ ಕೈಗಾರಿಕಾ ಹಬ್ ಜಿಲ್ಲೆಯಲ್ಲಿ ಆಗುತ್ತಿದೆ. ಅಂತರಸನಹಳ್ಳಿ ವಸಂತನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಮತ್ತಷ್ಟು ಕೈಗಾರಿಕೆಗಳು ಶುರುವಾಗಲಿವೆ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.